ಕೆಪಿಎಸ್ಸಿ ಕಾರ್ಯದರ್ಶಿಗೆ 10 ದಿನಗಳ ರಜೆ; ಚರ್ಚೆಗೆ ಕಾರಣವಾದ ಆದೇಶ
ಬೆಂಗಳೂರು, ಫೆಬ್ರವರಿ 08: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ)ಯಲ್ಲಿ ಎಲ್ಲವೂ ಸರಿ ಇಲ್ಲವೇ? ಎಂಬ ಪ್ರಶ್ನೆ ಮತ್ತೆ ಹುಟ್ಟಿಕೊಂಡಿದೆ. ಕೆಪಿಎಸ್ಸಿ ಕಾರ್ಯದರ್ಶಿಗೆ 10 ದಿನಗಳ ಗಳಿಕೆ ರಜೆಯನ್ನು ಮಂಜೂರು ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈ ಆದೇಶ ಚರ್ಚೆಗೆ ಕಾರಣವಾಗಿದೆ.
ಕೆಪಿಎಸ್ಸಿ ಕಾರ್ಯದರ್ಶಿ, ಐಎಎಸ್ ಅಧಿಕಾರಿ ಕೆ. ಎಸ್. ಲತಾ ಕುಮಾರಿ ಅವರಿಗೆ 10 ದಿನಗಳ ಗಳಿಕೆ ರಜೆ ನೀಡುವ ಕುರಿತು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಟಿ. ಮಹಂತೇಶ್, ಸರ್ಕಾರದ ಅಧೀನ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಸೇವೆಗಳು-1) ಆದೇಶವನ್ನು ಹೊರಡಿಸಿದ್ದಾರೆ.

ಕೆ. ಎಸ್. ಲತಾ ಕುಮಾರಿ ಅವರ ರಜೆ ಅವಧಿಯಲ್ಲಿ ಕೆಪಿಎಸ್ಸಿ ಕಾರ್ಯದರ್ಶಿಯಾಗಿ ಸಮಾಜ ಕಲ್ಯಾಣ ಇಲಾಖೆ ಆಯುಕ್ತರಾದ ಡಾ. ರಾಕೇಶ್ ಕುಮಾರ್ ಕೆ. ಪ್ರಭಾರಿಯಾಗಿ ಇರಲಿದ್ದಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಆದೇಶದ ವಿವರ; ಕೆ. ಎಸ್. ಲತಾ ಕುಮಾರಿ ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ, ಬೆಂಗಳೂರು, ಇವರಿಗೆ ವೈಯಕ್ತಿಕ ನೆಲೆಯಲ್ಲಿ ದಿನಾಂಕ 07/02/2024 ರಿಂದ 17/02/2024 ರ ವರೆಗೆ ಗಳಿಕೆ ರಜೆ ಮಂಜೂರು ಮಾಡಲಾಗಿದೆ.
ಕೆ. ಎಸ್. ಲತಾ ಕುಮಾರಿ ಇವರ ಮೇಲ್ಕಂಡ ರಜಾ ಅವಧಿಯಲ್ಲಿ ಡಾ. ರಾಕೇಶ್ ಕುಮಾರ್ ಕೆ. ಆಯುಕ್ತರು ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಇವರನ್ನು ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ, ಬೆಂಗಳೂರು ಹುದ್ದೆಯ ಸಮವರ್ತಿತ ಪ್ರಭಾರದಲ್ಲಿರಿಸಿದೆ ಎಂದು ಆದೇಶ ಹೇಳಿದೆ.
ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳ ನಡುವಿನ ಜಟಾಪಟಿ ಗುಟ್ಟಾಗಿ ಉಳಿದಿಲ್ಲ. ಇಂತಹ ಸಂದರ್ಭದಲ್ಲಿಯೇ ಕಾರ್ಯದರ್ಶಿ ಕೆ. ಎಸ್. ಲತಾ ಕುಮಾರಿ ಅವರನ್ನು 10 ದಿನಗಳ ರಜೆ ಮೇಲೆ ಕಳುಹಿಸಿದ ಕುರಿತು ಚರ್ಚೆಗಳು ಆರಂಭವಾಗಿವೆ.
ನಿಯಮಗಳಡಿ ಕೆಪಿಎಸ್ಸಿ ಮತ್ತು ಕಾರ್ಯದರ್ಶಿಗೆ ಇರುವ ಅಧಿಕಾರಗಳ ಬಗ್ಗೆ ಕಾನೂನು ಸಲಹೆ ನೀಡುವಂತೆ ಕೆಪಿಎಸ್ಸಿ ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ್ ಕಾನೂನು ಆಯೋಗಕ್ಕೆ ಪತ್ರವನ್ನು ಸಹ ಬರೆದಿದ್ದರು.
ಹಾಲಿ ಮತ್ತು ಹಿಂದಿನ ಕಾರ್ಯದರ್ಶಿಗಳ ವಿರುದ್ಧ ಅಧ್ಯಕ್ಷರು ಹಲವು ಆರೋಪಗಳನ್ನು ಮಾಡಿದ್ದರು. ಇದು ಮಾಧ್ಯಮಗಳಲ್ಲಿ ಪ್ರಕಟವಾಗಿತ್ತು. ಚರ್ಚೆಗೂ ಕಾರಣವಾಗಿತ್ತು. ಇಂತಹ ಸಂದರ್ಭದಲ್ಲಿಯೇ ಕಾರ್ಯದರ್ಶಿಗೆ 10 ದಿನಗಳ ರಜೆ ನೀಡಲಾಗಿದೆ.
ಕೆಪಿಎಸ್ಸಿಯ ಕಾನೂನು ಕೋಶದ ಮುಖ್ಯಸ್ಥರ ಹುದ್ದೆಯ ನೇಮಕಾತಿ ಪ್ರಕ್ರಿಯೆ ವಿಚಾರದಲ್ಲಿ ಕಾರ್ಯದರ್ಶಿಗಳು ಮತ್ತು ಅಧ್ಯಕ್ಷರ ನಡುವೆ ಜಟಾಪಟಿ ಆರಂಭವಾಗಿತ್ತು. ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿದ್ದರೂ ಸಹ ಹೊಸ ಅಧಿಸೂಚನೆಯನ್ನು ಅನುಮತಿ ಇಲ್ಲದೇ ಆಯೋಗದ ಹೆಸರಿನಲ್ಲಿ ಜಾರಿಗೊಳಿಸಲಾಗಿದೆ ಎಂಬುದು ಆರೋಪ.
ಕಾನೂನು ಕೋಶದ ಮುಖ್ಯಸ್ಥರ ಹುದ್ದೆಗೆ ನಿವೃತ್ತ ನ್ಯಾಯಾಧೀಶರನ್ನು ನೇಮಿಸಿ ಮುಚ್ಚಿದ ಲಕೋಟೆಯಲ್ಲಿ ಅವರ ಹೆಸರನ್ನು ಕಾರ್ಯದರ್ಶಿಗಳಿಗೆ ಸಲ್ಲಿಕೆ ಮಾಡಲಾಗಿತ್ತು. ಆದರೆ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳುವ ಮುನ್ನವೇ ಅವರ ಹೆಸರು ಮಾಧ್ಯಮಗಳಲ್ಲಿ ಬಹಿರಂಗಗೊಂಡಿತ್ತು.
ಇದು ಮಾತ್ರವಲ್ಲ ಲೆಕ್ಕ ಪರಿಶೋಧನೆ ಮತ್ತು ಲೆಕ್ಕ ಪತ್ರ ಇಲಾಖೆಯಲ್ಲಿನ ಕಿರಿಯ ಲೆಕ್ಕ ಸಹಾಯಕ ಹುದ್ದೆಯ ಫಲಿತಾಂಶವನ್ನು ಅನುಮೋದನೆ ಪಡೆಯದೇ ಪ್ರಕಟ ಮಾಡಲಾಗಿದೆ ಎಂಬ ಆರೋಪವೂ ಇದೆ.
ಕಾರ್ಯದರ್ಶಿ ಕೆ. ಎಸ್. ಲತಾ ಕುಮಾರಿ ಅವರನ್ನು 10 ದಿನಗಳ ರಜೆ ಮೇಲೆ ಕಳುಹಿಸಿದ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಕಾರಣವಾಗಿದೆ. ಈ ಕುರಿತು ಕರ್ನಾಟಕ ರಾಜ್ಯ ಸ್ಪರ್ಧಾತ್ಮಕ ಪರೀಕ್ಷೆ ಆಕಾಂಕ್ಷಿಗಳ ಸಂಘ ಪ್ರತಿಭಟನೆ ಸಹ ನಡೆಸುತ್ತಿದೆ.












Click it and Unblock the Notifications