Breaking:ಪ್ರವೀಣ್ ಕುಟುಂಬಕ್ಕೆ 10 ಲಕ್ಷ ನೆರವು: ಡಾ.ಅಶ್ವತ್ಥನಾರಾಯಣ
ಬೆಂಗಳೂರು, ಜುಲೈ 28: ಅಮಾನುಷವಾಗಿ ಬಲಿಯಾದ ಬಿಜೆಪಿ ಕಾರ್ಯಕರ್ತ ಮತ್ತು ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಕುಟುಂಬಕ್ಕೆ ವೈಯಕ್ತಿಕವಾಗಿ 10 ಲಕ್ಷ ರೂ. ನೆರವು ನೀಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ''ಇದನ್ನು ನೆರವು ಎಂದು ಹೇಳಲು ಇಷ್ಟ ಪಡುವುದಿಲ್ಲ. ಇದು ನನ್ನ ಕರ್ತವ್ಯವಾಗಿದೆ' ಎಂದರು.
10 ಲಕ್ಷ ರೂಪಾಯಿಗಳ ಚೆಕ್ ಅನ್ನು ಮೃತ ಪ್ರವೀಣ್ ಅವರ ಕುಟುಂಬಕ್ಕೆ ತಲುಪಿಸಲಾಗುವುದು. ಅವರ ಬಲಿದಾನಕ್ಕೆ ನಾವು ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಗದ್ಗದಿತರಾದರು.

ಮುಂದುವರೆದು 'ಪ್ರವೀಣ್ ಅವರ ಹಂತಕರು ಎಲ್ಲೇ ಇದ್ದರೂ ಕಠಿಣ ಕ್ರಮ ಜರುಗಿಸಲಾಗುವುದು. ಪಕ್ಷದ ಕಾರ್ಯಕರ್ತರ ಆಕ್ರೋಶ ನನಗೆ ಅರ್ಥವಾಗುತ್ತದೆ. ಅಪರಾಧಿಗಳ ಹೆಡೆಮುರಿ ಕಟ್ಟುವ ಶಕ್ತಿ ಬಿಜೆಪಿ ಸರಕಾರಕ್ಕಿದೆ' ಎಂದು ಪ್ರತಿಕ್ರಿಯಿಸಿದರು.
ಕೆಲ ತಿಂಗಳ ಹಿಂದೆ ಶಿವಮೊಗ್ಗದಲ್ಲಿ ಹತ್ಯೆಗೊಳಗಾದ ಹರ್ಷನ ಕುಟುಂಬಕ್ಕೂ ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಮಾನವೀಯವಾಗಿ ಸ್ಪಂದಿಸಿದ್ದರು.
ಬಿಜೆಪಿ ಪಕ್ಷದ ವತಿಯಿಂದಲೂ ಪ್ರವೀಣ್ ಕುಟುಂಬಕ್ಕೆ 25 ಲಕ್ಷ ಪರಿಹಾರ ನೀಡಲು ಸಿಎಂ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ. ಸರಕಾರದಿಂದಲೂ ಗರಿಷ್ಠ ಪ್ರಮಾಣದ ಪರಿಹಾರ ದೊರೆಕಿಸಿಕೊಡಲು ಪ್ರಯತ್ನಿಸುತ್ತೇನೆ ಎಂದು ಸಚಿವ ಎಸ್ ಅಂಗಾರ ಹೇಳಿದ್ದಾರೆ.

ಇನ್ನು ರಾಜ್ಯದಲ್ಲಿ ಕೋಮು ಭಾವನೆ ಕದಡುವ ಶಕ್ತಿಗಳ ವಿರುದ್ಧ ದೊಡ್ಡ ಸಮರ ಸಾರಿದ್ದೇವೆ. ಎಲ್ಲರೂ ಸಂಯಮ ಕಾಯ್ದುಕೊಳ್ಳಬೇಕು' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, "ಕೋಮು ಸೌಹಾರ್ದ ವಿಚಾರದಲ್ಲಿ ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಸಮಸ್ಯೆಗಳು ತಲೆ ಎತ್ತಿವೆ. ಕೋಮು ಭಾವನೆ ಕದಡುವ ಶಕ್ತಿಗಳನ್ನು ಸದೆ ಬಡೆಯುತ್ತೇವೆ. ಬರೀ ಬಾಯಿ ಮಾತಿನಲ್ಲಿ ಅಲ್ಲ ಕಠಿಣ ಕ್ರಮ ಕೈಗೊಂಡಿದ್ದೇವೆ. ರಾಜ್ಯದಲ್ಲಿ ಕೋಮು ನಿಯಂತ್ರಣಕ್ಕೆ ಕ್ರಮ ಕೈಗೊಂಡಿದ್ದೇವೆ. ಅಪರಾಧ ತಡೆಗೆ ಹಲವು ಕ್ರಮ ತೆಗೆದುಕೊಂಡಿದ್ದೇವೆ. ಅಗತ್ಯ ಬಿದ್ದರೆ ರಾಜ್ಯದಲ್ಲಿಯೂ ಯೋಗಿ ಮಾಡೆಲ್ ಜಾರಿಯಾಗುತ್ತದೆ" ಎಂದು ಮಾಹಿತಿ ನೀಡಿದ್ದಾರೆ.












Click it and Unblock the Notifications