ದೀಪಾವಳಿಗೆ KSRTC ಇಂದ 1000 ಹೆಚ್ಚುವರಿ ಬಸ್ ಸಂಚಾರ
ಬೆಂಗಳೂರು, ನವೆಂಬರ್ 10: ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ 1000 ಹೆಚ್ಚುವರಿ ವಿಶೇಷ ಬಸ್ ವ್ಯವಸ್ಥೆಯನ್ನು ಒದಗಿಸಲಾಗಿದೆ.
Recommended Video
ನವೆಂಬರ್ 14ರಂದು ನರಕ ಚತುರ್ದಶಿ ಹಾಗೂ ನ.16ರಂದು ಬಲಿಪಾಡ್ಯಮಿ ಹಬ್ಬವಿದ್ದು, ಪ್ರಯಾಣಿಕರ ಅನುಕೂಲಕ್ಕಾಗಿ ನ.13 ಹಾಗೂ ನ.14ರಂದು ಬೆಂಗಳೂರಿನಿಂದ ಹಲವು ಕಡೆಗಳಿಗೆ 1000 ಹೆಚ್ಚುವರಿ ಬಸ್ ಗಳು ಸಂಚರಿಸಲಿವೆ. ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ 16ರಂದು ವಿಶೇಷ ವಾಹನಗಳು ಕಾರ್ಯಾಚರಣೆ ನಡೆಸಲಿವೆ.
ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಬಸ್ ಸಂಚಾರ
ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ ಮುಂತಾದ ಸ್ಥಳಗಳಿಗೆ ವಿಶೇಷ ಬಸ್ ಗಳು ಸಂಚರಿಸಲಿವೆ. ಕೇರಳ, ಆಂಧ್ರಪ್ರದೇಶಕ್ಕೂ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ.
ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆ ವ್ಯವಸ್ಥೆಯಲ್ಲಿ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯ ಕಲ್ಪಿಸಲಾಗಿದೆ. www.ksrtc.in ವೆಬ್ ಸೈಟ್ ಮೂಲಕ ಟಿಕೆಟ್ ಗಳನ್ನು ಬುಕಿಂಗ್ ಮಾಡಬಹುದು.