ಬರ : ಕರ್ನಾಟಕದ 1,112 ಹಳ್ಳಿಗೆ ಟ್ಯಾಂಕರ್ ನೀರು ಆಧಾರ
ಬೆಂಗಳೂರು, ಏಪ್ರಿಲ್ 26 : ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದೆ. 1,112 ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಟ್ಯಾಂಕರ್ ಆಧಾರವಾಗಿದೆ. ಇನ್ನಷ್ಟು ಗ್ರಾಮಗಳಲ್ಲಿ ನೀರಿಗಾಗಿ ಪರಿತಪಿಸುವ ಪರಿಸ್ಥಿತಿ ನಿರ್ಮಾಣವಾಗುವ ನಿರೀಕ್ಷೆ ಇದೆ.
ರಾಜ್ಯದ 1,112 ಗ್ರಾಮಗಳಲ್ಲಿ ನೀರಿನ ಮೂಲಗಳು ಸಂಪೂರ್ಣ ಬತ್ತಿ ಹೋಗಿವೆ. ಅಂತರ್ಜಲ ಮಟ್ಟ ಕುಸಿದು ಹೋಗಿದ್ದು, ಕುಡಿಯುವ ನೀರಿಗಾಗಿ ಟ್ಯಾಂಕರ್ ಅನ್ನು ಅವಲಂಬಿಸುವುದು ಅನಿವಾರ್ಯವಾಗಿದೆ.
ರಾಜ್ಯದ ದಕ್ಷಿಣ ಭಾಗ ಚಿತ್ರದುರ್ಗ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಉಂಟಾಗಿದೆ. ಉತ್ತರ ಭಾಗದಲ್ಲಿ ವಿಜಯಪುರ, ಕಲಬುರಗಿ ಜಿಲ್ಲೆಗಳ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿಗಾಗಿ ಪರದಾಡಬೇಕಾಗಿದೆ.

ಮಲೆನಾಡು ಮತ್ತು ಕರಾವಳಿ ಭಾಗದಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಚಿಕ್ಕಮಗಳೂರು ಜಿಲ್ಲೆಯ 72 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರನ್ನು ಪೂರೈಕೆ ಮಾಡಲಾಗುತ್ತಿದೆ.
ಅಂತರ್ಜಲದ ಮೇಲೆ ವಿಪರೀತ ಅಂದರೆ ಶೇ 86ರಷ್ಟು ಅವಲಂಬನೆಯಾದ ಜನರು ಈಗ ಕುಡಿಯುವ ನೀರಿಗಾಗಿ ಪರಿತಪಿಸುತ್ತಿದ್ದಾರೆ. ಅಂತರ್ಜಲ ಮಟ್ಟವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಪರಿಸ್ಥಿತಿ ಮತ್ತಷ್ಟು ವಿಷಮಗೊಳ್ಳಲಿದೆ.











Click it and Unblock the Notifications