ಕರ್ನಾಟಕದ 13 ಜಿಲ್ಲೆಗಳಲ್ಲಿ ನೀರಿನ ಬರ!
ಬೆಂಗಳೂರು, ಮೇ 1: ಬಿಸಿಲ ಕಾವು ಏರುತ್ತಿದ್ದಂತೆಯೇ ರಾಜ್ಯದ 13 ಜಿಲ್ಲೆಗಳಲ್ಲಿ ಬರದ ಕಾರ್ಮೋಡ ಕವಿದಿದ್ದು, ಒಟ್ಟಾರೆ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಾಣಿಸಿಕೊಂಡಿದೆ.
ಕುಡಿಯುವ ನೀರಿನ ಸ್ಥಿತಿಗತಿ, ಮುಂಗಾರು ಸಿದ್ಧತೆ ಕುರಿತು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಸಾಕಷ್ಟು ಚರ್ಚೆಯಾಯಿತು. ಚಿಕ್ಕಮಗಳೂರಿನ 59, ಹಾಸನದ 33, ವಿಜಯಪುರದ 24 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ತಾಪಮಾನ ಹೆಚ್ಚಳ, ಬಿಸಿಲಿಗೆ ತತ್ತರಿಸಿದ ಉತ್ತರ ಕರ್ನಾಟಕ ಮಂದಿ
ಚಿಕ್ಕಮಗಳೂರು, ಹಾಸನದಲ್ಲೇ ಅತಿ ಹೆಚ್ಚು ನೀರಿನ ಸಮಸ್ಯೆ ಏಕಿದೆ ಎಂದು ಪರಿಶೀಲಿಸಲು ಜಿಲ್ಲಾಧಿಕಾರಿಗಳಿಗೆ ಅಭಿವೃದ್ಧಿ ಆಯುಕ್ತರು ಸೂಚಿಸಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ. ನಗರ ಪ್ರದೇಶಗಳ 368 ನಗರಸಭೆ ವಾರ್ಡ್ ಗಳಲ್ಲಿ 199 ಟ್ಯಾಂಕರ್ ಗಳ ಮೂಲಕ ಕುಡಿಯುವ ನೀರಿನ ಸರಬರಾಜು ಮಾಡಲಾಗುತ್ತಿದೆ.
ಎಸ್ಡಿಆರ್ಎಫ್ ನಲ್ಲಿ 194 ಕೋಟಿ ರೂ. ಅನುದಾನ ಲಭ್ಯವಿದ್ದು, ತುರ್ತು ಕುಡಿಯುವ ನೀರಿನ ಸರಬರಾಜಿಗೆ ಕೊರತೆ ಇಲ್ಲ. ಹೀಗಾಗಿ ಜಿಲ್ಲಾಧಿಕಾರಿಗಳು ಸಮರ್ಪಕವಾಗಿ ಪರಿಸ್ಥಿತಿ ನಿರ್ವಹಿಸಬೇಕು ಎಂದು ಸೂಚಿಸಲಾಗಿದೆ.
ಕಳೆದ ವರ್ಷ ಏ.30ಕ್ಕೆ 1,715 ಗ್ರಾಮಗಳಲ್ಲಿ ನೀರಿನ ಸಮಸ್ಯೆಯಿತ್ತು. ಇದಕ್ಕೆ ಹೋಲಿಸಿದರೆ ಈ ವರ್ಷ ಹೆಚ್ಚಿನ ಸಮಸ್ಯೆಯಿಲ್ಲ. ಆದರೆ ಕೆಲ ದಿನಗಳ ಹಿಂದಷ್ಟೇ 120 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಿತ್ತು. ಪ್ರಸ್ತುತ ಈ ಸಂಖ್ಯೆ 183 ಕ್ಕೆ ಏರಿಕೆಯಾಗಿದ್ದು, ಮೇ ತಿಂಗಳಲ್ಲಿ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ. ಜಿ.ಎಸ್. ಶ್ರೀನಿವಾಸ ರೆಡ್ಡಿ ತಿಳಿಸಿದ್ದಾರೆ.
ಅಂತರ್ಜಲ ಕುಸಿತ: ರಾಜ್ಯಾದ್ಯಂತ ವಾಡಿಕೆಗಿಂತ ಅಧಿಕ ಮುಂಗಾರುಪೂರ್ವ ಮಳೆ ದಾಖಲಾಗಿದೆ. ಜನವರಿಯಿಂದ ಏಪ್ರಿಲ್ ಅಂತ್ಯದವರೆಗೆ ವಾಡಿಕೆಯಂತೆ ಸರಾಸರಿ 46 ಮಿ.ಮೀ ಮಳೆಯಾಗಬೇಕು. ಈ ಸಾಲಿನಲ್ಲಿ 59 ಮಿ.ಮೀ ಮಳೆಯಾಗಿದೆ. 30 ಜಿಲ್ಲೆಗಳ ಪೈಕಿ 28 ಜಿಲ್ಲೆಗಳಲ್ಲಿ ವಾಡಿಕೆ ಅಥವಾ ವಾಡಿಕೆಗಿಂತ ಅಧಿಕ ಮಳೆಯಾಗಿದ್ದು, ರಾಯಚೂರು ಮತ್ತು ಯಾದಗಿರಿಯಲ್ಲಿ ಮಳೆ ಕೊರತೆಯಗಾಗಿದೆ.