ಯಡಿಯೂರಪ್ಪ ಸಂಪುಟ ಸೇರುವುದು 14 ಶಾಸಕರು ಮಾತ್ರ!
ಬೆಂಗಳೂರು, ಆಗಸ್ಟ್ 18 : ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಂಪುಟ ವಿಸ್ತರಣೆ ಮಾಡಲು ರಾಜ್ಯಪಾಲರು ಒಪ್ಪಿಗೆ ನೀಡಿದ್ದಾರೆ. ಮಂಗಳವಾರ ಬೆಳಗ್ಗೆ 10 ಗಂಟೆಗೆ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.
ಆಗಸ್ಟ್ 20ರ ಮಂಗಳವಾರ ಬೆಳಗ್ಗೆ 10 ಗಂಟೆಗೆ ಯಡಿಯೂರಪ್ಪ ಸಂಪುಟ ವಿಸ್ತರಣೆ ಮಾಡಲು ಸಮಯ ನಿಗದಿಯಾಗಿದೆ. ನೂತನ ಸಚಿವರ ಪ್ರಮಾಣ ವಚನಕ್ಕೆ ರಾಜ್ಯಪಾಲರಿಂದ ಅನುಮತಿ ಸಿಕ್ಕಿದೆ. ಆದರೆ, ಸಂಪುಟ ಸೇರುವ ಶಾಸಕರ ಪಟ್ಟಿ ಇನ್ನೂ ಅಂತಿಮವಾಗಿಲ್ಲ.
ಬಿಜೆಪಿಯ 13 ಹಾಗೂ ಓರ್ವ ಪಕ್ಷೇತರ ಶಾಸಕರು ಸೇರಿ ಒಟ್ಟು 14 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಮುಳಬಾಗಿಲು ಕ್ಷೇತ್ರದ ಪಕ್ಷೇತರ ಶಾಸಕ ಎಚ್. ನಾಗೇಶ್ ಸಚಿವರಾಗುವುದು ಖಚಿತವಾಗಿದೆ.

ಒಟ್ಟು 2 ಹಂತದಲ್ಲಿ ಯಡಿಯೂರಪ್ಪ ಸಂಪುಟ ವಿಸ್ತರಣೆ ಮಾಡಲಾಗುತ್ತದೆ. ಮೊದಲ ಹಂತದಲ್ಲಿ ಹಿರಿಯ ಶಾಸಕರನ್ನು ಮಾತ್ರ ಸೇರಿಸಿಕೊಳ್ಳಲಾಗುತ್ತದೆ ಎಂಬ ಸುದ್ದಿಗಳು ಹಬ್ಬಿವೆ. ಅನರ್ಹ ಶಾಸಕರ ಪರವಾಗಿ ಸುಪ್ರೀಂಕೋರ್ಟ್ನಲ್ಲಿ ಬರುವ ತೀರ್ಪನ್ನು ನೋಡಿಕೊಂಡು 2ನೇ ಹಂತದ ವಿಸ್ತರಣೆ ಮಾಡಲಾಗುತ್ತದೆ.
ಮಂಗಳವಾರ ಬೆಳಗ್ಗೆ ಶಾಸಕಾಂಗ ಪಕ್ಷದ ಸಭೆ, ಮಧ್ಯಾಹ್ನ ಸಂಪುಟ ವಿಸ್ತರಣೆ ಎಂದು ಮೊದಲು ತೀರ್ಮಾನಿಸಲಾಗಿತ್ತು. ಈಗ ಶಾಸಕಾಂಗ ಪಕ್ಷದ ಸಭೆ ರದ್ದುಗೊಳಿಸಲಾಗಿದೆ.
ಜುಲೈ 26ರಂದು ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದರು. ಆದರೆ, ಸಚಿವ ಸಂಪುಟ ವಿಸ್ತರಣೆ ಮಾಡಿರಲಿಲ್ಲ. ಪ್ರತಿಪಕ್ಷಗಳು ಏಕ ವ್ಯಕ್ತಿ ಸರ್ಕಾರ ಎಂದು ಟೀಕೆ ಮಾಡಿದ್ದವು.












Click it and Unblock the Notifications