ಉಪ ಚುನಾವಣೆ ಪ್ರಚಾರಕ್ಕೆ ಸಂಜೆ ತೆರೆ, ಹಲವು ನಾಯಕರಿಂದ ನೀತಿ ಸಂಹಿತೆ ಉಲ್ಲಂಘನೆ
ಬೆಂಗಳೂರು, ಡಿಸೆಂಬರ್ 03 : 15 ಕ್ಷೇತ್ರದ ಉಪ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ತೆರೆ ಬೀಳಲಿದೆ. 156 ಪುರುಷರು ಸೇರಿದಂತೆ ಒಟ್ಟು 165 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದು, ಡಿಸೆಂಬರ್ 5ರಂದು ಮತದಾನ ನಡೆಯಲಿದೆ.
ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಮತದಾನದ ತಯಾರಿ ಬಗ್ಗೆ ಮಾಹಿತಿ ನೀಡಿದ್ದಾರೆ. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಯಡಿಯೂರಪ್ಪ, ಗೋವಿಂದ ಕಾರಜೋಳ, ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲು ಮಾಡಿಕೊಳ್ಳಲಾಗಿದೆ.
ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ವಿರುದ್ಧ ಎಫ್ಐಆರ್
ಉಪ ಚುನಾವಣೆ ಪ್ರಚಾರ ಕಾರ್ಯಕ್ಕೆ ಇಂದು ಸಂಜೆ 6 ಗಂಟೆಗೆ ತೆರೆ ಬೀಳಲಿದೆ. ಅಭ್ಯರ್ಥಿಗಳು ಮನೆ-ಮನೆ ಪ್ರಚಾರ ನಡೆಸಲು ಅವಕಾಶವಿದೆ. ಅಭ್ಯರ್ಥಿಗಳಲ್ಲದವರು ಕ್ಷೇತ್ರವನ್ನು ಬಿಟ್ಟು ತೆರಳಬೇಕು ಎಂದು ಚುನಾವಣಾ ಆಯೋಗ ಸೂಚನೆ ನೀಡಿದೆ.
ರಾಜ್ಯಸಭೆ ಉಪ ಚುನಾವಣೆ; ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ
ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಇದುವರೆಗೂ 10.70 ಕೋಟಿ ರೂ. ನಗದು ಮತ್ತು ವಿವಿಧ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಹುಣಸೂರು ಕ್ಷೇತ್ರದಲ್ಲಿ ಅತೀ ಹೆಚ್ಚು ಅಂದರೆ 3.78 ಕೋಟಿ ಮೊತ್ತದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
15 ಕ್ಷೇತ್ರದ ಉಪ ಚುನಾವಣೆ; ಬಿಜೆಪಿ ಆಂತರಿಕ ಸಮೀಕ್ಷೆ ವರದಿ
ನೀತಿ ಸಂಹಿತೆ ಉಲ್ಲಂಘಿಸಿದ ನಾಯಕರು
"ಲಿಂಗಾಯತರು ಬಿಜೆಪಿಗೆ ಮತ ಹಾಕಬೇಕು" ಎಂದು ಹೇಳಿದ ಕಾರಣಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ, ಹಣ ಹಂಚಿದ ಕಾರಣಕ್ಕೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ವಿರುದ್ಧ, 'ಬಿಜೆಪಿ ಅಭ್ಯರ್ಥಿಗಳಿಂದ ಹಣ ಪಡೆದು ನಮ್ಮ ಅಭ್ಯರ್ಥಿಗೆ ಮತ ನೀಡಿ" ಎಂದು ಹೇಳಿದ್ದಕ್ಕೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಎಫ್ಐಆರ್ ದಾಖಲು ಮಾಡಲಾಗಿದೆ.
ಚುನಾವಣಾ ಕಣದಲ್ಲಿರುವವರು
15 ಕ್ಷೇತ್ರಗಳ ಚುನಾವಣಾ ಕಣದಲ್ಲಿ 156 ಪುರುಷ, 9 ಮಹಿಳೆಯರು ಸೇರಿದಂತೆ 165 ಮಂದಿ ಕಣದಲ್ಲಿದ್ದಾರೆ. ಶಿವಾಜಿನಗರ ಕ್ಷೇತ್ರದಲ್ಲಿ ಹೆಚ್ಚು ಎಂದರೆ 19 ಅಭ್ಯರ್ಥಿಗಳಿದ್ದಾರೆ. ಡಿಸೆಂಬರ್ 5ರಂದು ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯ ತನಕ ಮತದಾನ ನಡೆಯಲಿದೆ. ಡಿಸೆಂಬರ್ 9ರಂದು ಫಲಿತಾಂಶ ಪ್ರಕಟವಾಗಲಿದೆ.
ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ
ಮತದಾನ ನಡೆಯುವ ಕ್ಷೇತ್ರದಲ್ಲಿ ಮತದಾನದ ಮುನ್ನಾದಿನ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. 5 ಜನಕ್ಕಿಂತ ಹೆಚ್ಚು ಗುಂಪುಗೂಡುವಂತಿಲ್ಲ. ಮನೆ-ಮನೆಗೆ ತೆರಳಿ ಮತಯಾಚನೆ ಮಾಡುವವರು ನಿಯಮ ಪಾಲನೆ ಮಾಡುವುದು ಕಡ್ಡಾಯವಾಗಿದೆ. ಮೆರವಣಿಗೆ, ಜಾಥಾಗಳನ್ನು ನಡೆಸುವಂತಿಲ್ಲ. ಧಾರ್ಮಿಕ ಕಾರ್ಯಗಳಿಗೆ ಮಾತ್ರ ವಿನಾಯಿತಿ ನೀಡಲಾಗಿದೆ.
ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ
ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಬಗ್ಗೆ ಒಟ್ಟು 197 ದೂರು ಬಂದಿದೆ. ಇದರಲ್ಲಿ 67 ದೂರು ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಸೇರಿದ್ದು. ಹೊಸಕೋಟೆ ಕ್ಷೇತ್ರದಲ್ಲಿ 32 ಎಫ್ಐಆರ್ ದಾಖಲಾಗಿದೆ. 30 ದೂರುಗಳು ಇನ್ನೂ ಬಾಕಿ ಇದ್ದು ಎಫ್ಐಆರ್ ದಾಖಲಿಸುವ ಕಾರ್ಯ ನಡೆಯುತ್ತಿದೆ.