15 ಕ್ಷೇತ್ರಗಳ ಉಪ ಚುನಾವಣೆ; 6 ಕ್ಷೇತ್ರದಲ್ಲಿ ಮಾತ್ರ ಜೆಡಿಎಸ್ ಸ್ಪರ್ಧೆ?
ಬೆಂಗಳೂರು, ನವೆಂಬರ್ 11 : ಕರ್ನಾಟಕದ 15 ಕ್ಷೇತ್ರಗಳ ಉಪ ಚುನಾವಣೆಗೆ ಇಂದು ಅಧಿಸೂಚನೆ ಪ್ರಕಟವಾಗಲಿದೆ. ರಾಜ್ಯದ ಪ್ರಾದೇಶಿಕ ಪಕ್ಷವಾದ ಜೆಡಿಎಸ್ 6 ಕ್ಷೇತ್ರದಲ್ಲಿ ಮಾತ್ರ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಮುಂದಾಗಿದೆ.
14 ಕಾಂಗ್ರೆಸ್ ಮತ್ತು 3 ಜೆಡಿಎಸ್ ಶಾಸಕರನ್ನು ಸ್ಪೀಕರ್ ಅನರ್ಹಗೊಳಿಸಿದ್ದಾರೆ. ಈ ಪೈಕಿ ರಾಜರಾಜೇಶ್ವರಿ ನಗರ ಮತ್ತು ಮುಸ್ಕಿ ಹೊರತುಪಡಿಸಿ ಉಳಿದ 15 ಕ್ಷೇತ್ರಗಳಿಗೆ ಉಪ ಚುನಾವಣೆ ಎದುರಾಗಿದೆ. ಡಿಸೆಂಬರ್ 5ರಂದು ಚುನಾವಣೆ ನಡೆಯಲಿದ್ದು, 9ರಂದು ಫಲಿತಾಂಶ ಪ್ರಕಟವಾಗಲಿದೆ.
ಜೆಡಿಎಸ್ 2018ರಲ್ಲಿ ಗೆದ್ದುಕೊಂಡಿದ್ದ ಹುಣಸೂರು, ಕೆ. ಆರ್. ಪೇಟೆ ಮತ್ತು ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದ ಶಾಸಕರು ಅನರ್ಹಗೊಂಡಿದ್ದಾರೆ. ಆದರೆ, 15 ಕ್ಷೇತ್ರಗಳ ಪೈಕಿ 6 ಕ್ಷೇತ್ರಗಳಲ್ಲಿ ಮಾತ್ರ ಚುನಾವಣಾ ಕಣಕ್ಕಿಳಿಯಲು ಜೆಡಿಎಸ್ ಚಿಂತನೆ ನಡೆಸಿದೆ.
ಮೂರು ಕ್ಷೇತ್ರಗಳನ್ನು ಉಳಿಸಿಕೊಳ್ಳಲು ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ತಂತ್ರ ರೂಪಿಸುತ್ತಿದ್ದಾರೆ. ಯಾವುದೇ ಕ್ಷೇತ್ರಕ್ಕೆ ಇನ್ನೂ ಪಕ್ಷ ಅಭ್ಯರ್ಥಿಗಳನ್ನು ಘೋಷಣೆ ಮಾಡಿಲ್ಲ. ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಲಂಡನ್ ಪ್ರವಾಸದಲ್ಲಿದ್ದಾರೆ.

ಜೆಡಿಎಸ್ ಗೆದ್ದಿದ್ದ ಕ್ಷೇತ್ರ
ಮೈಸೂರಿನ ಹುಣಸೂರು, ಮಂಡ್ಯದ ಕೆ. ಆರ್. ಪೇಟೆ ಮತ್ತು ಬೆಂಗಳೂರು ನಗರದ ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಈ ಮೂರು ಕ್ಷೇತ್ರದಲ್ಲಿ ಕಳೆದ ಚುನಾವಣೆಯಲ್ಲಿ ಪಕ್ಷ ಗೆದ್ದಿತ್ತು. ಇನ್ನೂ ಮೂರು ಕ್ಷೇತ್ರದಲ್ಲಿ ಕಣಕ್ಕಿಳಿಯಲು ತೀರ್ಮಾನಿಸಿದ್ದು, ಕ್ಷೇತ್ರ ಅಂತಿಮವಾಗಬೇಕಿದೆ.

ಸುಪ್ರೀಂ ಆದೇಶಕ್ಕಾಗಿ ಕಾಯುವಿಕೆ
ಅನರ್ಹಗೊಂಡಿರುವ ಶಾಸಕರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ಅರ್ಜಿಯ ವಿಚಾರಣೆ ಪೂರ್ಣಗೊಂಡಿದ್ದು, ನ್ಯಾಯಪೀಠ ತೀರ್ಪನ್ನು ಕಾಯ್ದಿರಿಸಿದೆ. ನವೆಂಬರ್ 13ರ ಬುಧವಾರ ತೀರ್ಪು ಪ್ರಕಟವಾಗಲಿದೆ. ಸುಪ್ರೀಂ ತೀರ್ಪಿನ ಬಳಿಕ ಬೇರೆ ಯಾವ ಕ್ಷೇತ್ರದಲ್ಲಿ ಕಣಕ್ಕಿಳಿಯಬೇಕು ಎಂದು ಪಕ್ಷ ತೀರ್ಮಾನ ಮಾಡಲಿದೆ.

ಅಭ್ಯರ್ಥಿ ಘೋಷಣೆ ಮಾಡಿಲ್ಲ
ಹುಣಸೂರು, ಕೆ. ಆರ್. ಪೇಟೆ, ಮಹಾಲಕ್ಷ್ಮೀ ಲೇಔಟ್ ಸೇರಿದಂತೆ ಯಾವುದೇ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಗಳನ್ನು ಘೋಷಣೆ ಮಾಡಿಲ್ಲ. ಹುಣಸೂರು ಟಿಕೆಟ್ಗಾಗಿ ಪೈಪೋಟಿ ನಡೆಯುತ್ತಿದ್ದು, 16ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದಾರೆ.

ಮೈತ್ರಿಯ ಮಾತಿಲ್ಲ ಅಂದ್ರು ದೇವೇಗೌಡ
6 ಕ್ಷೇತ್ರಗಳಲ್ಲಿ ಮಾತ್ರ ಜೆಡಿಎಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೂ ಉಳಿದ ಕ್ಷೇತ್ರಗಳಲ್ಲಿ ಬೇರೆ ಪಕ್ಷಕ್ಕೆ ಬೆಂಬಲ ನೀಡುವುದಿಲ್ಲ. ಕಾಂಗ್ರೆಸ್ ಜೊತೆ ಮೈತ್ರಿ ಸರ್ಕಾರ ಮಾಡಿದ್ದ ಜೆಡಿಎಸ್ ಲೋಕಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿತ್ತು. ಆದರೆ, "ಉಪ ಚುನಾವಣೆಯಲ್ಲಿ ಯಾವುದೇ ಮೈತ್ರಿ ಇಲ್ಲ" ಎಂದು ದೇವೇಗೌಡರು ಸ್ಪಷ್ಟಪಡಿಸಿದ್ದಾರೆ.












Click it and Unblock the Notifications