435 ಕೇಂದ್ರಗಳಲ್ಲಿ ಶಿಕ್ಷಕರ ನೇಮಕಾತಿ ಪರೀಕ್ಷೆ: ಕೈ ಗಡಿಯಾರ ಕೂಡ ಧರಿಸುವಂತಿಲ್ಲ!
ಬೆಂಗಳೂರು, ಮೇ. 10: ಪ್ರಾಥಮಿಕ ಶಾಲಾ (ಪದವೀಧರ) ಶಿಕ್ಷಕರ 15,000 ಹುದ್ದೆಗಳ ನೇಮಕಾತಿಗಾಗಿ ಮೇ 21 ಮತ್ತು 22 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಪಾರದರ್ಶಕ ಮತ್ತು ಕಟ್ಟುನಿಟ್ಟಾಗಿ ಪರೀಕ್ಷೆ ನಡೆಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ್ದಾರೆ.
ಮೇ 21 ಮತ್ತು 22 ರಂದು ನಡೆಯಲಿರುವ 15 ಸಾವಿರ ಶಿಕ್ಷಕರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗೆ 1,06,083 ಮಂದಿ ಅಭ್ಯರ್ಥಿಗಳು ತೆಗೆದುಕೊಂಡಿದ್ದಾರೆ. ರಾಜ್ಯದ 435 ಪರೀಕ್ಷಾ ಕೇಂದ್ರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು, ಬಿಗಿ ಪೊಲೀಸ್ ಬಂದೋಬಸ್ತ ಕೈಗೊಳ್ಳಲಾಗಿದೆ.
ಚಿಕ್ಕೋಡಿಯಲ್ಲಿ 11,199 ಮಂದಿ ಪರೀಕ್ಷೆ ತೆಗೆದುಕೊಂಡಿರುವ ಕಾರಣ, ಅಲ್ಲಿ ಹೆಚ್ಚು ಪರೀಕ್ಷಾ ಕೇಂದ್ರಗಳನ್ನು ಆಯೋಜಿಸಲಾಗಿದೆ. ಉಳಿದ ಎಲ್ಲಾ ಜಿಲ್ಲೆಗಳಿಗೆ ಅಗತ್ಯ ಪರೀಕ್ಷಾ ಕೇಂದ್ರಗಳನ್ನು ಸಿದ್ಧಪಡಿಸಲಾಗಿದೆ. ಅಭ್ಯರ್ಥಿಗಳು ಯಾವುದೇ ಎಲೆಕ್ಟ್ರಾನಿಕ್ ಉಪಕರಣ ಪರೀಕ್ಷಾ ಕೇಂದ್ರಕ್ಕೆ ಬರಬಾರದು ಎಂದುಸೂಚನೆ ನೀಡಲಾಗಿದೆ.
ಕೈ ಗಡಿಯಾರ ಕಟ್ಟಿಕೊಂಡು ಬರುವಂತಿಲ್ಲ:
ಪರೀಕ್ಷೆ ತೆಗೆದುಕೊಂಡಿರುವ ಅಭ್ಯರ್ಥಿಗಳು ಯಾರು ಒಂದು ತಾಸು ಮುಂಚಿತವಾಗಿ ಬರಬೇಕು. ಕರೊನಾ ಬಗ್ಗೆ ಸ್ಕ್ರೀನಿಂಗ್ ಮಾಡಲಾಗುತ್ತದೆ. ಯಾರೂ ಕೈ ಗಡಿಯಾರ ಕಟ್ಟಿಕೊಂಡು ಬರುವಂತಿಲ್ಲ. ಪ್ರತಿ ಕ್ಲಾಸ್ ರೂಮ್ ಗೆ ಗಡಿಯಾರ ಹಾಕಲಾಗಿದೆ. ಪ್ರತಿ ರೂಮ್ ಗೂ ಸಿಸಿಟಿವಿ ಅಳವಡಿಸಲಾಗಿದೆ. ಅಭ್ಯರ್ಥಿಗಳು ಯಾವುದೇ ಊಹಾ ಪೋಹಗಳಿಗೆ ಕಿವಿಗೊಡದೇ ಪ್ರಾಮಾಣಿಕವಾಗಿ ಪರೀಕ್ಷೆ ಬರೆಯಬೇಕು. ಸರ್ಕಾರ ಹೊರಡಿಸುವ ನಿಯಮ- ಆದೇಶಗಳನ್ನು ಪಾಲಿಸಬೇಕು ಎಂದು ಶಿಕ್ಷಣ ಸಚಿವರು ಮನವಿ ಮಾಡಿದ್ದಾರೆ.
ತ್ರಿಮ್ಯಾನ್ ಕಮಿಟಿ ಉಸ್ತುವಾರಿ
ಅತಿ ಸೂಕ್ಷ್ಮ ಪರೀಕ್ಷಾ ಕೇಂದ್ರಗಳಿಗೆ ಮೆಟಲ್ ಡಿಟೆಕ್ಟರ್ ಹಾಕಲಾಗುತ್ತದೆ. ಪರೀಕ್ಷೆಯನ್ನು ಅತ್ಯುತ್ತಮವಾಗಿ ನಡೆಸಲು ಜಿಲ್ಲಾಧಿಕಾರಿಗಳು, ಎಸ್ಪಿ ಒಳಗೊಂಡ ತ್ರಿಮ್ಯಾನ್ ಕಮಿಟಿ ರಚನೆ ಮಾಡಿದ್ದೇವೆ. ಜಿಲ್ಲಾ ಕೇಂದ್ರಗಳ ಪರೀಕ್ಷೆಯನ್ನು ಈ ತ್ರಿಮ್ಯಾನ್ ಕಮಿಟಿ ಉಸ್ತುವಾರಿ ನೋಡಿಕೊಳ್ಳಲಿದೆ. ಇನ್ನು ಅಗತ್ಯ ಪರೀಕ್ಷಾ ಕೇಂದ್ರಗಳಿಗೆ ಬೇಕಿರುವ ಖಾಸಗಿ ಶಾಲೆಗಳನ್ನು ನಾವು ಪಡೆದಿದ್ದೇವೆ. ಪ್ರತಿ ರೂಮ್ ನಲ್ಲಿ ಕೇವಲ 20 ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ.
ಜಿಲ್ಲಾ ಕೇಂದ್ರಗಳಲ್ಲಿ ಸ್ಕ್ವಾಡ್:
ಪ್ರತಿಯೊಂದು ಪರೀಕ್ಷಾ ಕೇಂದ್ರಕ್ಕೆ ಸ್ಕ್ವಾಡ್ ಹೋಗಿ ತಪಾಸಣೆ ಮಾಡಲು ಕ್ರಮ ಜರುಗಿಸಲಾಗಿದೆ. ಇದಕ್ಕೆ ಅಗತ್ಯ ಜಿಲ್ಲಾ ಮಟ್ಟದ ಅಧಿಕಾರಿಗಳ ತಂಡಗಳನ್ನು ರಚಿಸಲಾಗಿದೆ. ಸ್ಪರ್ಧಾತ್ಮಕ ಆಯ್ಕೆಗೆ ಹೆಚ್ಚು ಒತ್ತು ಕೊಟ್ಟಿದ್ದೇವೆ. ಪರೀಕ್ಷಾ ಕೇಂದ್ರದಲ್ಲಿಯೇ ಅಭ್ಯರ್ಥಿಗಳಿಗೆ ಹಾಲ್ ಟಿಕೆಟ್ ನೀಡಲಾಗುತ್ತದೆ. ಮೂರು ಹಂತದ ತಪಾಸಣೆ ಬಳಿಕ ಪರೀಕ್ಷಾ ಕೇಂದ್ರಗಳಿಗೆ ಬಿಡಲಾಗುತ್ತದೆ ಎಂದು ಶಿಕ್ಷಣ ಸಚಿವರು ತಿಳಿಸಿದ್ದಾರೆ.
ಸೂಕ್ಷ್ಮ ಪರೀಕ್ಷಾ ಕೇಂದ್ರಗಳ ಮೇಲೆ ನಿಗಾ :
"2015 ರಲ್ಲಿ ಪಿಯುಸಿ ಪ್ರಶ್ನೆ ಪತ್ರಿಕೆ ಲೀಕ್ ಬಳಿಕ ಶಿಕ್ಷಣ ಇಲಾಖೆಯಿಂದ ನಡೆದ ಪ್ರತಿಯೊಂದು ಪರೀಕ್ಷೆಯನ್ನು ಪಾರದರ್ಶಕವಾಗಿ ಶಿಕ್ಷಣ ಇಲಾಖೆ ನಡೆಸಿದೆ. ಯಾವುದೇ ಅಕ್ರಮಕ್ಕೆ ಅವಕಾಶ ಕೊಡಲ್ಲ. ಅತಿ ಸೂಕ್ಷ್ಮ ಪರೀಕ್ಷಾ ಕೇಂದ್ರಗಳ ಮೇಲೆ ಹೆಚ್ಚಿನ ನಿಗಾ ಇಡಲಾಗಿದೆ. ಹೀಗಾಗಿ ಪರೀಕ್ಷೆಯಲ್ಲಿ ಯಾವುದೇ ಅಕ್ರಮ ನಡೆಯಲು ಆಸ್ಪದ ನೀಡುವುದಿಲ್ಲ," ಎಂದು ಬಿ.ಸಿ. ನಾಗೇಶ್ ಸ್ಪಷ್ಟಪಡಿಸಿದ್ದಾರೆ.