17 ಜಿಲ್ಲೆಗಳ 80 ತಾಲೂಕು ಪ್ರವಾಹ ಪೀಡಿತ, ಸರ್ಕಾರದ ಘೋಷಣೆ
ಬೆಂಗಳೂರು, ಆಗಸ್ಟ್ 11 : ಕರ್ನಾಟಕದ 30 ಜಿಲ್ಲೆಗಳ ಪೈಕಿ 17 ಜಿಲ್ಲೆಗಳು ಪ್ರವಾಹ ಪೀಡಿತ ಎಂದು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಸಮರೋಪಾದಿಯಲ್ಲಿ ಪ್ರವಾಹ ಪೀಡಿತರ ರಕ್ಷಣಾ ಕಾರ್ಯವನ್ನು ಸರ್ಕಾರ ಕೈಗೊಂಡಿದೆ.
ಕರ್ನಾಟಕ ಸರ್ಕಾರ ಶನಿವಾರ ಅಧಿಕೃತವಾದ ಆದೇಶವನ್ನು ಹೊರಡಿಸಿದ್ದು ರಾಜ್ಯದ 17 ಜಿಲ್ಲೆಗಳ 80 ತಾಲೂಕು ಪ್ರವಾಹ ಪೀಡಿತ ಎಂದು ಹೇಳಿದೆ. ಆಗಸ್ಟ್ 1 ರಿಂದ 9ರ ತನಕ ಇರುವ ಪರಿಸ್ಥಿತಿ ಆಧರಿಸಿ ಸರ್ಕಾರ ಈ ಘೋಷಣೆ ಮಾಡಿದೆ.
ಮಹಾ ಪ್ರವಾಹ : ಅಮಿತ್ ಶಾರಿಂದ ಇಂದು ವೈಮಾನಿಕ ಸಮೀಕ್ಷೆ
ಮಹಾರಾಷ್ಟ್ರದಲ್ಲಿ ಬಿದ್ದ ಭಾರಿ ಮಳೆಯಿಂದಾಗಿ ಜಲಾಶಯದಿಂದ ನೀರನ್ನು ಹೊರಬಿಡಲಾಯಿತು. ಇದರಿಂದಾಗಿ ಉತ್ತರ ಕರ್ನಾಟಕ ಭಾಗದ ಕೃಷ್ಣಾ ನದಿ ಪಾತ್ರ ಸೇರಿದಂತೆ ಇತರ ಪ್ರದೇಶಗಳಲ್ಲಿ ಪ್ರವಾಹ ಉಂಟಾಯಿತು.
ಭಾರಿ ಮಳೆಯಿಂದಾಗಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಮಲೆನಾಡು ಮತ್ತು ಕರಾವಳಿ ಭಾಗದ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ತಕ್ಷಣದಿಂದ ಜಾರಿಗೆ ಬರುವಂತೆ 80 ತಾಲೂಕುಗಳನ್ನು ಪ್ರವಾಹ ಪೀಡಿತ ಎಂದು ಘೋಷಿಸಲಾಗಿದೆ.
ಆಗಸ್ಟ್ 14ರವರೆಗೂ ಚಾರ್ಮಾಡಿ ಘಾಟ್ ಸಂಚಾರ ಸ್ಥಗಿತ
ಜಿಲ್ಲೆಗಳು : ಬೆಳಗಾವಿ, ಬಾಗಲಕೋಟೆ, ರಾಯಚೂರು, ಕಲಬುರಗಿ, ಯಾದಗಿರಿ, ವಿಜಯಪುರ, ಗದಗ, ಹಾವೇರಿ, ಧಾರವಾಡ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಮೈಸೂರು
ಬೆಳಗಾವಿಯಲ್ಲಿ ಜೂನ್ನಿಂದ ಸೆಪ್ಟೆಂಬರ್ ಅವಧಿಯಲ್ಲಿ ವಾಡಿಕೆಯಂತೆ 612 ಮಿ.ಮೀಟರ್ ಮಳೆಯಾಗಬೇಕಿತ್ತು. ಆದರೆ, ಆಗಸ್ಟ್ 1 ರಿಂದ 9ರ ತನಕ 280 ಮಿ.ಮೀ. ಮಳೆಯಾಗಿದೆ. ಮಹಾರಾಷ್ಟ್ರದಲ್ಲಿಯೂ ಅಧಿಕ ಮಳೆಯಾಗುತ್ತಿದೆ. ಆದ್ದರಿಂದ, ಕೃಷ್ಣಾ, ಘಟಪ್ರಭಾ ಮತ್ತು ಮಲಪ್ರಭಾ ನದಿಗಳು ತುಂಬಿ ಹರಿಯುತ್ತಿವೆ.
ಶಿವಮೊಗ್ಗ ಜಿಲ್ಲೆಯಲ್ಲಿ ಆಗಸ್ಟ್ 1 ರಿಂದ 9ರ ತನಕ 620 ಮಿ.,ಮೀ, ಚಿಕ್ಕಮಗಳೂರಿನಲ್ಲಿ 432, ಕೊಡಗಿನಲ್ಲಿ 734, ಹಾವೇರಿಯಲ್ಲಿ 288, ಧಾರವಾಡದಲ್ಲಿ 241 ಮಿ.ಮೀ. ಮಳೆಯಾಗಿದೆ.
List of flood-affected thaluks in the state.#KarnatakaFloods2019 pic.twitter.com/pWLT4YqvGK
— Karnataka Varthe (@KarnatakaVarthe) August 10, 2019