ಮುಖ್ಯಮಂತ್ರಿಗಳ ಪರಿಹಾರ ನಿಧಿಯಲ್ಲಿ 188 ಕೋಟಿ ಸಂಗ್ರಹ
ಬೆಂಗಳೂರು, ಅಕ್ಟೋಬರ್ 25 : ಕರ್ನಾಟಕದ ಮುಖ್ಯಮಂತ್ರಿಗಳ ಪರಿಹಾರ ನಿಧಿಯಲ್ಲಿ 188 ಕೋಟಿ ರೂ. ಸಂಗ್ರಹವಾಗಿದೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ದೇಣಿಗೆ ನೀಡುವಂತೆ ಜನರು, ಸಂಘ ಸಂಸ್ಥೆಗಳಲ್ಲಿ ಮನವಿ ಮಾಡಿದ್ದರು.
ಆಗಸ್ಟ್ 13ರಿಂದ ಇಲ್ಲಿಯ ತನಕ 188 ಕೋಟಿ ದೇಣಿಗೆಯನ್ನು ಜನರು, ಸಂಘ ಸಂಸ್ಥೆಗಳು ನೀಡಿವೆ. ಆಗಸ್ಟ್ 20ರಂದು ಒಂದೇ ದಿನ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 39.15 ಕೋಟಿ ರೂ. ದೇಣಿಗೆ ಸಂದಾಯವಾಗಿದೆ.
ರಾಜ್ಯದಲ್ಲಿ ಆಗಸ್ಟ್ ತಿಂಗಳಿನಲ್ಲಿ ಭಾರಿ ಮಳೆಯಾಗಿತ್ತು. 22 ಜಿಲ್ಲೆಗಳ ಜನರು ಸಂಕಷ್ಟಕ್ಕೆ ಸಿಲುಕಿದ್ದರು. ಆಗ ಮುಖ್ಯಮಂತ್ರಿ ಪರಿಹಾರ ನಿಧಿಗೆ ದೇಣಿಗೆ ನೀಡುವಂತೆ ಯಡಿಯೂರಪ್ಪ ಸಾಮಾಜಿಕ ಜಾಲತಾಣಗಳ ಮೂಲಕ ಮನವಿ ಮಾಡಿದ್ದರು.

ಆಗಸ್ಟ್ 13ರಿಂದ ದೇಣಿಗೆ ಸಂಗ್ರಹ ಮಾಡುತ್ತಿದ್ದು, ಇದುವರೆಗೆ 4105 ಮಂದಿ ದೇಣಿಗೆಯನ್ನು ಕೊಟ್ಟಿದ್ದಾರೆ. ಕಳೆದ ವರ್ಷ ಕೊಡಗಿನಲ್ಲಿ ಪ್ರಕೃತಿ ವಿಕೋಪ ಸಂಭವಿಸಿದಾಗ 186 ಕೋಟಿ ರೂ. ಸಂಗ್ರಹವಾಗಿತ್ತು.
ಕಳೆದ ವರ್ಷ ಸಂಗ್ರಹವಾದ ದೇಣಿಗೆಯಲ್ಲಿಯೇ 97.17 ಕೋಟಿ ರೂ. ಉಳಿದಿದೆ. ಈ ಹಣವನ್ನು ಈ ಬಾರಿಯ ಪ್ರವಾಹ ಪರಿಹಾರಕ್ಕೆ ಬಳಕೆ ಮಾಡಿಕೊಳ್ಳಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಅಕ್ಟೋಬರ್ ತಿಂಗಳಿನಲ್ಲಿ ರಾಜ್ಯದಲ್ಲಿ ಪುನಃ ಮಳೆ ಆರಂಭವಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ದೇಣಿಗೆ ನೀಡುವಂತೆ ಜನರಲ್ಲಿ ಮತ್ತೊಮ್ಮೆ ಮನವಿ ಮಾಡಿದ್ದಾರೆ.












Click it and Unblock the Notifications