1947ರ ಕಾಂಗ್ರೆಸ್ ಬೇರೆ, ಈಗಿನ ಕಾಂಗ್ರೆಸ್ಸೇ ಬೇರೆ: ಎಚ್ಡಿಕೆ ಕಿಡಿ
ಬೆಂಗಳೂರು ಆಗಸ್ಟ್ 09: "ಕಾಂಗ್ರೆಸ್ ಪಕ್ಷ ಸ್ವಾತಂತ್ರ್ಯ ಹೋರಾಟ ಮಾಡಿದ್ದೇ ಎಚ್. ಡಿ. ಕುಮಾರಸ್ವಾಮಿ ಸಿಎಂ ಆಗಲಿ ಎನ್ನುವ ಕಾರಣಕ್ಕೆ ಎಂದು ಅಪ್ರಬುದ್ಧ ಮತ್ತು ಬಾಲಿಶ ಹೇಳಿಕೆ ನೀಡುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಇತಿಹಾಸ ಓದಿ ಸ್ವಾತಂತ್ರ್ಯದ ಬಗ್ಗೆ ತಿಳಿದುಕೊಳ್ಳಲಿ" ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ಸರಣಿ ಟ್ವೀಟ್ ಮೂಲಕ ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಕಿಡಿ ಕಾರಿದ್ದಾರೆ. ಡಿ. ಕೆ. ಶಿವಕುಮಾರ್ ಹೇಳಿಕೆ ಅಪ್ರಭುದ್ಧತೆಯ ಪ್ರತೀಕ ಮತ್ತು ಪರಮ ಬಾಲಿಶವಾಗಿದ್ದು. ಇತಿಹಾಸ ತಿಳಿದು ಕೊಳ್ಳುವ ಮೂಲಕ ಸ್ವಾತಂತ್ರ್ಯದ ಸತ್ಯ ಅರಿಯಬೇಕು ಎಂದು ಕುಮಾರಸ್ವಾಮಿ ಹೇಳಿದ್ದಾರೆ.
1947ರ ಹಿಂದಿನ ಕಾಂಗ್ರೆಸ್ ಬೇರೆ, ಈಗಿನ ಸೋಗಲಾಡಿ ಸಿದ್ಧಹಸ್ತರು ಇರುವ ಕಾಂಗ್ರೆಸ್ಸೇ ಬೇರೆ. ಸಮಸ್ತ ಭಾರತೀಯರಿಗೆ ಸ್ವಾತಂತ್ರ್ಯ ತಂದುಕೊಡಲು ಮಹಾತ್ಮಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಹೋರಾಟ ಮಾಡಿತ್ತು. ನಂತರದ ಕಾಂಗ್ರೆಸ್ ಮಾಡಿದ್ದೇ ಸ್ವಾತಂತ್ರ್ಯದ ಮಾರಣಹೋಮ. ಮಾಡಿದ ಪಾಪಕ್ಕೆ ಇವತ್ತಿನ ಕಾಂಗ್ರೆಸ್ ಶಾಸ್ತಿ ಅನುಭವಿಸುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ಲೇವಡಿ ಮಾಡಿದ್ದಾರೆ.

ನಾನು ಸಿಎಂ ಆಗಲು ಕಾರಣವಲ್ಲ; ನಾನು ಮುಖ್ಯಮಂತ್ರಿ ಆಗಿದ್ದು ಅಂದು ರಾಷ್ಟ್ರಪಿತರು ತಂದುಕೊಟ್ಟ ಸ್ವಾತಂತ್ರ್ಯ ಹಾಗೂ ಬಾಬಾಸಾಹೇಬ್ ಡಾ. ಬಿ. ಆರ್. ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನದ ಕಾರುಣ್ಯದಿಂದ. ನಾನು ಮುಖ್ಯಮಂತ್ರಿ ಆಗುವಲ್ಲಿ ಕಾಂಗ್ರೆಸ್ನ ಪಾತ್ರ ಶೂನ್ಯ.
ಪಂಡಿತ್ ಜವಾಹರ ಲಾಲ್ ನೆಹರು, ಲಾಲ್ ಬಹದ್ದೂರ ಶಾಸ್ತ್ರಿ ಅವರ ಬಗ್ಗೆ ಹಗುರವಾಗಿ ಮಾತನಾಡಲಾರೆ. ಅವರ ನಂತರ ಕಾಂಗ್ರೆಸ್ ಹೇಗೆಲ್ಲಾ ಹಾದಿತಪ್ಪಿ ಜನರ ಸ್ವಾತಂತ್ರ್ಯ ಹರಣ ಮಾಡಿತು ಎನ್ನುವದನ್ನು ಡಿ. ಕೆ. ಶಿವಕುಮಾರ್ ಅವರು ಇತಿಹಾಸ ಓದಿ ತಿಳಿದುಕೊಳ್ಳಬೇಕಾದ ಅಗತ್ಯತೆ ಇದೆ ಎಂದು ಅವರು ಕುಟುಕಿದ್ದಾರೆ.
ದೇಶದ ಮೊದಲನೇ ಸಂಪುಟದಲ್ಲಿ ಸಚಿವರಾಗಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರು ಈ ದೇಶಕ್ಕೆ ಸಂವಿಧಾನ ದಯಪಾಲಿಸಿದ್ದಾರೆ. ಅಂತಹ ಮಹನೀಯರನ್ನು ಸಂಸತ್ತಿಗೇ ಮತ್ತೆ ಬಾರದಂತೆ ತಡೆದು, ಭಾರತದ ದೀನ ದಲಿತರ ಧ್ವನಿಯನ್ನು ನಿರ್ದಯವಾಗಿ ಅಡಗಿಸಿದ ಪಕ್ಷ ಕಾಂಗ್ರೆಸ್ ಎಂಬುದು ಗೊತ್ತಿದೆ. ಅಂತಹ ಪಕ್ಷದ ನಾಯಕರು ಇವತ್ತು ಸ್ವಾತಂತ್ಯದ ಭಜನೆ ಮಾಡುತ್ತಿದ್ದಾರೆ ಎಂದರು.

ಸ್ವಾತಂತ್ರ್ಯ ಹರಣ ಮಾಡುವವರ ಕಡೆ ಲಕ್ಷ್ಯ ಕೊಡಿ; ಕೋಳಿ ಕೂಗಿದರೆ ಭಾರತದಲ್ಲಿ ಬೆಳಕು ಹರಿಯುತ್ತದೆ ಎಂಬ ಕಾಲ ಹೋಗಿದೆ. ಕಾಂಗ್ರೆಸ್ ಕಣ್ತೆರೆಯಬೇಕಿದೆ. ಡಿ. ಕೆ. ಶಿವಕುಮಾರ್ ಅವರು ಇದನ್ನು ಅರ್ಥ ಮಾಡಿಕೊಳ್ಳುತ್ತಾರೆ ಎಂಬ ನಂಬಿಕೆ ನನ್ನದು. ಅಲ್ಲದೆ, ಪಕ್ಷದಲ್ಲಿ ನಿಮ್ಮ ಸ್ವಾತಂತ್ರ್ಯಹರಣ ಮಾಡುತ್ತಿರುವವರ ಕಡೆ ಗಮನ ಹರಿಸಿ ಎಂದು ಸಿದ್ದರಾಮಯ್ಯರ ಹೆಸರು ಹೇಳದೇ ಪರೋಕ್ಷವಾಗಿ ಟೀಕಿಸಿದರು.
ದೇಶ 75ನೇ ಸ್ವಾತಂತ್ರ್ಯ ಮಹೋತ್ಸವದ ಸಂದರ್ಭದಲ್ಲಿದೆ. ಈಗ ಸ್ವಾತಂತ್ರೋತ್ಸವದ ನಡಿಗೆ ಎಂದು ಕಾಂಗ್ರೆಸ್ ಹೊರಟಿದೆ. ಯಾರ ಸ್ವಾತಂತ್ರ್ಯಕ್ಕಾಗಿ ಎಂದು ಸ್ವಲ್ಪ ಬಿಡಿಸಿ ಹೇಳುವಿರಾ?. ಇದುವರೆಗೂ ಕಾಂಗ್ರೆಸ್ ನಡೆಸಿದ ಸ್ವಾತಂತ್ರ್ಯ ವಿರೋಧಿ ಕೃತ್ಯಗಳಿಗೆ ಉತ್ತರ ಕೊಡುವಿರಾ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.












Click it and Unblock the Notifications