ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 'ಕರ್ನಾಟಕದಲ್ಲಿ 20 ಲಕ್ಷ ಉದ್ಯೋಗ ಸೃಷ್ಠಿ'
ಬೆಂಗಳೂರು,ಫೆಬ್ರವರಿ12: ಕರ್ನಾಟಕದ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಸಿಗಲಿದೆ. 2025-30ನೇ ಸಾಲಿನ ನೂತನ ಕೈಗಾರಿಕಾ ನೀತಿ ಬಿಡುಗಡೆ ಮಾಡಲಾಗಿದೆ. ಈ ನೀತಿಯಂತೆ ಕರ್ನಾಟಕದಲ್ಲಿ ಬರೋಬ್ಬರಿ 20 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, 2025-30 ನೇ ಸಾಲಿನ ನೂತನ ಕೈಗಾರಿಕಾ ನೀತಿಯಡಿ ರಾಜ್ಯಾದ್ಯಂತ ₹7.5 ಲಕ್ಷ ಕೋಟಿ ಹೂಡಿಕೆಯನ್ನು ನಿರೀಕ್ಷೆ ಮಾಡಲಾಗಿದೆ. ಇದರಿಂದ 20 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ. ಬೆಂಗಳೂರು ಮತ್ತು ಬೆಂಗಳೂರಿನಾಚೆಗೂ ಕೈಗಾರಿಕೆಗಳ ಸ್ಥಾಪನೆಗೆ ನೂತನ ನೀತಿ ಒತ್ತು ನೀಡಲಿದೆ. ಸುಸ್ಥಿರ ಅಭಿವೃದ್ಧಿಯ ಮಾದರಿಗಳನ್ನು ಅನುಸರಿಸಲಿದೆ. ಎಲ್ಲ ಕ್ಷೇತ್ರ ಮತ್ತು ವಲಯಗಳಲ್ಲೂ ಹೂಡಿಕೆಗೆ ಉತ್ತೇಜನ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಭಾರತದ ಆರ್ಥಿಕತೆಯ ಪರಿವರ್ತನೆಯಲ್ಲಿ ಕರ್ನಾಟಕ ಸದಾ ಮುಂಚೂಣಿಯಲ್ಲಿರವ ರಾಜ್ಯ; ಇಂದು ದೇಶದಲ್ಲಿಯೇ ಕರ್ನಾಟಕ ಅತ್ಯಂತ ಹೂಡಿಕೆದಾರ ಸ್ನೇಹಿ ರಾಜ್ಯವೆಂಬ ನಮ್ಮ ಬದ್ಧತೆಯನ್ನು ಮತ್ತೊಮ್ಮೆ ಧೃಢೀಕರಿಸುತ್ತಿದ್ದೇವೆ. ಸದೃಢ ನೀತಿ ನಿರೂಪಣೆ, ಸಕ್ರಿಯ ಆಡಳಿತ ಮತ್ತು ವ್ಯವಹಾರ-ಸ್ನೇಹಿ ಪರಿಸರ ವ್ಯವಸ್ಥೆಯಿದ್ದು, ಇಲ್ಲಿ ಮಾಡುವ ಪ್ರತಿ ಹೂಡಿಕೆಯೂ ಯಶಸ್ವಿಯಾಗುವಂತೆ ಹಾಗೂ ಸುಸ್ಥಿರ ಬೆಳವಣಿಗೆಗೆ ಕೊಡುಗೆ ನೀಡುವಂತೆ ಖಾತ್ರಿಪಡಿಸುತ್ತೇವೆ.
ಕದಂಬ, ಗಂಗರು, ಚಾಲುಕ್ಯ, ಹೊಯ್ಸಳ, ವಿಜಯನಗರ ಸಾಮ್ರಾಜ್ಯ ಮತ್ತು ಮೈಸೂರು ಒಡೆಯರ ಆಳ್ವಿಕೆಯಲ್ಲಿ ಕರ್ನಾಟಕ ನೇಕಾರಿಕೆ, ಲೋಹಶಾಸ್ತ್ರ, ಶಿಲ್ಪಕಲೆ, ಕರಕುಶಲ ಸಾಮಗ್ರಿಗಳ ತಯಾರಿಕೆಯ ತವರಾಗಿತ್ತು ಮತ್ತು ಪ್ರಮುಖ ವ್ಯಾಪಾರ ಕೇಂದ್ರವಾಗಿತ್ತು. ಪ್ರಖ್ಯಾತ ಬಿದರಿ ಕಲೆ (ಲೋಹಕಲೆ), ಮೈಸೂರು ರೇಷ್ಮೆ ನೇಕಾರಿಕೆ ಮತ್ತು ಶ್ರೀಗಂಧ ಕೆತ್ತನೆಯಂತಹ ಕುಶಲಕಲೆಗಳು ರಾಜ ಮನೆತನಗಳ ಆಶ್ರಯದಲ್ಲಿ ಅಭಿವೃದ್ಧಿ ಹೊಂದಿದವು. ಈ ಮೂಲಕ ಕರ್ನಾಟಕದ ಶ್ರೀಮಂತ ಕೈಗಾರಿಕಾ ಪರಂಪರೆಗೆ ಬುನಾದಿಯನ್ನು ಹಾಕಲಾಗಿತ್ತು.
ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ದೂರದೃಷ್ಟಿಯುಳ್ಳ ನಾಯಕತ್ವದಲ್ಲಿ 1923ರಲ್ಲಿ ಸ್ಥಾಪನೆಗೊಂಡ ಮೈಸೂರು ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ, ಭಾರತದ ಮೊತ್ತಮೊದಲ ಬೃಹತ್ ಉಕ್ಕು ಕೈಗಾರಿಕೆಯಾಗಿತ್ತು. ಒಡೆಯರ್ ಮಹಾರಾಜರ ಆಳ್ವಿಕೆಯಲ್ಲಿ ಪ್ರಾರಂಭವಾದ ಮೈಸೂರು ರೇಷ್ಮೆ ಉದ್ಯಮ ಪ್ರಾಮುಖ್ಯತೆಯನ್ನು ಪಡೆದುಕೊಂಡು ಶ್ರೀಮಂತಿಕೆಯ ಜಾಗತಿಕ ಚಿಹ್ನೆಯಾಗಿ ಗುರುತಿಸಿಕೊಂಡಿತು. ಈ ಪರಂಪರೆ ಇಂದಿಗೂ ಮುಂದುವರೆದಿದೆ. ಕೊಡಗು ಮತ್ತು ಚಿಕ್ಕಮಗಳೂರಿನಲ್ಲಿ ಕಾಫಿ ಕೃಷಿಯು ಅಭಿವೃದ್ಧಿಗೊಂಡು ಕರ್ನಾಟಕವನ್ನು ಭಾರತದ ಕಾಫಿ ರಾಜಧಾನಿಯನ್ನಾಗಿಸಿತು, ಈ ವೈಶಿಷ್ಯತೆಗೆ ಕರ್ನಾಟಕ ಇಂದಿಗೂ ಪಾತ್ರವಾಗಿದೆ.
ಹೆಚ್.ಎ.ಎಲ್, ಬಿಇಎಲ್, ಬಿಇಎಂಎಲ್ ಮುಂತಾದ ಸಾರ್ವಜನಿಕ ವಲಯದ ಉದ್ಯಮಗಳಿಗೆ ತವರೂರಾದ ಕರ್ನಾಟಕ ಭಾರತದ ಕೈಗಾರಿಕಾ ಬೆಳವಣಿಗೆಗೆ ಬೆನ್ನೆಲುಬಾಗಿದೆ. ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಐಐಎಸ್ಸಿ, ಐಐಎಂ ಬೆಂಗಳೂರು, ಎನ್ಎಲ್ಎಸ್.ಯು ಮುಂತಾದ ಜಾಗತಿಕ ಮಟ್ಟದ ಸಂಸ್ಥೆಗಳು ಮತ್ತು 200ಕ್ಕೂ ಹೆಚ್ಚು ಇಂಜಿನಿಯರಿಂಗ್ ಮತ್ತು ವೈದ್ಯಕೀಯ ಕಾಲೇಜುಗಳಿಂದ ಉತ್ತಮ ಪ್ರತಿಭೆಗಳು ಪ್ರತಿ ವರ್ಷ ಹೊರಬರುತ್ತಿದ್ದಾರೆ.
ಕೃತಕ ಬುದ್ಧಿಮತ್ತೆ, ರೋಬೋಟಿಕ್ಸ್ ಸ್ಪೇಸ್ ಮತ್ತು ಬಯೋಟೆಕ್ ನಲ್ಲಿ 400 ಕ್ಕೂ ಹೆಚ್ಚು ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರಗಳನ್ನು ಹೊಂದಿರುವ ರಾಜ್ಯವು ಭಾರತದ ಬೌದ್ಧಿಕ ಕೇಂದ್ರವಾಗಿ ತಲೆಎತ್ತಿದೆ. ಪ್ರವರ್ಧಮಾನಕ್ಕೆ ಬರುತ್ತಿರುವ ವಲಯಗಳಲ್ಲಿ ಶೈಕ್ಷಣಿಕ ಸಂಸ್ಥೆ ಹಾಗೂ ಉದ್ಯಮಗಳ ಸಹಭಾಗಿತ್ವದಲ್ಲಿ ಯುವಕರಿಗೆ ತರಬೇತಿಯನ್ನು ಸಕ್ರಿಯವಾಗಿ ನೀಡಲಾಗುತ್ತಿದೆ. ಜವಾಬ್ದಾರಿಯುತ, ಸುಸ್ಥಿರ ಬೆಳವಣಿಗೆಗೆ ಆದ್ಯತೆ ನೀಡುವ ಕರ್ನಾಟಕ, ಹಸಿರು ಆರ್ಥಿಕತೆ, ಪರಿಸರ ಸ್ನೇಹಿ ಕೈಗಾರಿಕಾ ಸಮುಚ್ಚಯಗಳು ಹಾಗೂ ಸುಸ್ಥಿರ ನಗರಾಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿದೆ. ಭಾರತದ ಸೌರ ಶಕ್ತಿ ಉತ್ಪಾದನೆಯಲ್ಲಿ ಕರ್ನಾಟಕ ಮಂಚೂಣಿಯಲ್ಲಿದ್ದು, ಪವನ ಶಕ್ತಿ, ಎಲೆಕ್ಟ್ರಿಕ್ ಮೊಬಿಲಿಟಿ ಮತ್ತು ಸುಸ್ಥಿರ ನಗರಾಭಿವೃದ್ದಿಯಲ್ಲಿಯೂ ನಾಯಕತ್ವ ವಹಿಸಿದೆ.
ಬಿಯಾಂಡ್ ಬೆಂಗಳೂರು ಪರಿಕಲ್ಪನೆ ರಾಜ್ಯದಾದ್ಯಂತ ಸಮತೋಲಿತ ಕೈಗಾರಿಕಾ ಬೆಳವಣಿಗೆಯನ್ನು ಖಾತ್ರಿ ಪಡಿಸುತ್ತದೆ. ಅಂತೆಯೇ ಪರಿಸರದ ಜವಾಬ್ದಾರಿಯ ನಿರ್ವಹಣೆಯನ್ನೂ ಖಾತ್ರಿಪಡಿಸುತ್ತದೆ. ಆಹ್ಲಾದಕರ ಹವಾಮಾನಕ್ಕೆ ಹೆಸರಾಗಿರುವ ಬೆಂಗಳೂರು, ಉತ್ತಮ ಮಟ್ಟದ ಪ್ರತಿಭೆಗಳನ್ನು ಆಕರ್ಷಿಸುವುದಲ್ಲದೇ, ಸಿಲಿಕಾನ್ ವ್ಯಾಲಿ ಆಫ್ ಇಂಡಿಯಾ ಎಂಬ ಹಿರಿಮೆಯನ್ನೂ ತನ್ನದಾಗಿಸಿಕೊಂಡಿದೆ. ಕಾಸ್ಮೊಪಾಲಿಟನ್ ಸಂಸ್ಕೃತಿ, ಜಾಗತಿಕ ಮಟ್ಟದ ಸಂಸ್ಥೆಗಳು ಮತ್ತು ಉನ್ನತ ಜೀವನ ಮಟ್ಟದೊಂದಿಗೆ, ವ್ಯಾಪಾರದ ಬೆಳವಣಿಗೆಯನ್ನು ಹಾಗೂ ನೌಕರರಿಗೆ ಸರಿಸಾಟಿಯಿಲ್ಲದ ಕೆಲಸ ಮತ್ತು ಜೀವನದ ಸಮತೋಲನವನ್ನು ಕೊಡಮಾಡುತ್ತಾ, ಕರ್ನಾಟಕ ಹೂಡಿಕೆದಾರರಿಗೆ ಸೂಕ್ತವಾದ ಗಮ್ಯವಾಗಿ ಪರಿಣಮಿಸಿದೆ ಎಂದರು.












Click it and Unblock the Notifications