Free Power; ಕಾಂಗ್ರೆಸ್ನ ಭರವಸೆ ಉಚಿತ, ಸಾಲ ಖಚಿತ!
ಬೆಂಗಳೂರು, ಜನವರಿ 15; 2023ರ ವಿಧಾನಸಭೆ ಚುನಾವಣೆಗೆ ಕರ್ನಾಟಕ ಕಾಂಗ್ರೆಸ್ ಜನರಿಗೆ 'ಗೃಹಜ್ಯೋತಿ ಯೋಜನೆ'ಯ ಮೊದಲ ಭರವಸೆ ನೀಡಿದೆ. ಯೋಜನೆಯಡಿ ಪ್ರತಿ ಮನೆಗೆ, ಪ್ರತಿ ತಿಂಗಳಿಗೆ 200 ಯೂನಿಟ್ ಉಚಿತ ವಿದ್ಯುತ್ ನೀಡಲಾಗುತ್ತದೆ.
ಭಾನುವಾರ ಇಂಧನ ಸಚಿವ ಸುನಿಲ್ ಕುಮಾರ್ ಸರಣಿ ಟ್ವೀಟ್ ಮಾಡಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಪಕ್ಷ ಘೋಷಣೆ ಮಾಡಿರುವ ಭರವಸೆ ಬಗ್ಗೆ ಮಾತನಾಡಿದ್ದಾರೆ.
'ಸಾಲ ಮಾಡಿಯಾದರೂ ತುಪ್ಪ ತಿನ್ನಬೇಕೆಂಬ "ವಿತ್ಥನೀತಿ"ಯನ್ನು @siddaramaiah ನವರು ರಾಜ್ಯದ ಮೇಲೆ ಹೇರಿ ಹೋಗಿದ್ದಾರೆ. ಸಾಲ ಎತ್ತುವಳಿಯನ್ನೇ ಬಂಡವಾಳ ಹೂಡಿಕೆ ಎಂದು ವ್ಯಾಖ್ಯಾನಿಸುವ ಅವರ ಭಂಡತನ ಅರ್ಥಶಾಸ್ತ್ರದ ಹೊಸ ವ್ಯಾಖ್ಯಾನವೇ ಸರಿ. ದಿವಾಳಿ ಹೊಂದುವುದನ್ನೇ ಪ್ರಧಾನ ಗುರಿಯಾಗಿಸಿಕೊಂಡ ಅರ್ಥವ್ಯವಸ್ಥೆಗೆ ನಿಮ್ಮ ನೀತಿ ಆದರ್ಶ' ಎಂದು ಟೀಕಿಸಿದ್ದಾರೆ.
ಮತ್ತೊಂದು ಟ್ವೀಟ್ನಲ್ಲಿ, 'ರೈತರ ಕೃಷಿ ಪಂಪ್ ಸೆಟ್ಗಳಿಗೆ ನೀಡಬೇಕಿದ್ದ ವಿದ್ಯುತ್ ಸಬ್ಸಿಡಿಯನ್ನೇ ಬಾಕಿ ಇಟ್ಟು ಹೋದ ಘನ ಸರ್ಕಾರ ತಮ್ಮದ್ದಾಗಿತ್ತು ಎಂಬುದನ್ನು ಮರೆಯದಿರಿ. ಎಲ್ಲ ಆಯಾಮಗಳನ್ನು ಪರಿಶೀಲಿಸಿದಾಗ ನೀವು ಕೊಟ್ಟ ಉಚಿತ ವಿದ್ಯುತ್ ಭರವಸೆ ಈಡೇರಿಸುವುದಕ್ಕೆ ವಾರ್ಷಿಕ 9000 ಕೋಟಿ ರೂ. ಬೇಕಾಗುತ್ತದೆ' ಎಂದು ಇಂಧನ ಸಚಿವರು ಉಲ್ಲೇಖಿಸಿದ್ದಾರೆ.
'ಅಂದರೆ ವಾರ್ಷಿಕವಾಗಿ ಮತ್ತೆ 9000 ಕೋಟಿ ಸಾಲದ "ಹೂಡಿಕೆ" ಮಾಡುವ ಯೋಚನೆ ನಿಮ್ಮದಾಗಿದೆ. "ಭರವಸೆ ಉಚಿತ, ಸಾಲ ಖಚಿತ" ಎಂಬ ಅರ್ಥನೀತಿಯನ್ನು ಸ್ವಲ್ಪ ಬದಲಾಯಿಸಿಕೊಳ್ಳಿ' ಎಂದು ಸಚಿವರು ಕಾಂಗ್ರೆಸ್ ಪಕ್ಷಕ್ಕೆ ಸಲಹೆ ನೀಡಿದ್ದಾರೆ.

ಕಾಂಗ್ರೆಸ್ ತಿರುಗೇಟು
ಸುನಿಲ್ ಕುಮಾರ್ ಮತ್ತು ಬಿಜೆಪಿಯ ಟ್ವೀಟ್ಗೆ ಕಾಂಗ್ರೆಸ್ ಪಕ್ಷ ತಿರುಗೇಟು ನೀಡಿದೆ. ಭಾನುವಾರ ಮಾಡಿರುವ ಟ್ವೀಟ್ನಲ್ಲಿ, 'ನಮ್ಮ 200 ಯೂನಿಟ್ ಉಚಿತ ವಿದ್ಯುತ್ತಿನ ಗೃಹಜ್ಯೋತಿ ಯೋಜನೆಗೆ ಹಣ ಎಲ್ಲಿಂದ ತರುತ್ತಾರೆ ಎಂದು ಸಿಎಂ ಕೇಳಿದ್ದಾರೆ'
'Basavaraj Bommai ಅವರೇ, 40% ಕಮಿಷನ್ ಲೂಟಿ ನಿಂತರೆ ಜನಪರ ಯೋಜನೆಗಳಿಗೆ ಹಣ ಕ್ರೋಡೀಕರಿಸಬಹುದು. ನಿಮ್ಮ ಸರ್ಕಾರ ನಡೆಸುತ್ತಿರುವ ಲೂಟಿ ನಿಂತರೆ ಸಮೃದ್ಧ ಕರ್ನಾಟಕವನ್ನು ನಿರ್ಮಿಸಬಹುದು' ಎಂದು ಹೇಳಿದೆ.

ಶನಿವಾರ ಟ್ವೀಟ್ ಮಾಡಿದ್ದ ಸಿದ್ದರಾಮಯ್ಯ
ಶನಿವಾರ ಟ್ವೀಟ್ ಮಾಡಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, 'ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಎಸ್ಕಾಂ ಗಳಿಗೆ ನೀಡಿದ್ದು 6000 ಕೋಟಿಯೋ? 9000 ಕೋಟಿಯೋ?. ಯಾವುದು ನಿಜ ಲೆಕ್ಕ? ಯಾವುದು ಸುಳ್ಳು ಲೆಕ್ಕ? ಎಂಬುದನ್ನು ಸಚಿವ ಸುನೀಲ್ ಕುಮಾರ್ ಅವರು ಮೊದಲು ಹೇಳಬೇಕು' ಎಂದು ಹೇಳಿದ್ದರು.
'2013ರಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ ಹೊತ್ತಿಗೆ ಹಿಂದಿನ ಸರ್ಕಾರ ವಿದ್ಯುತ್ ಇಲಾಖೆಯ ಮೇಲೆ ದೊಡ್ಡ ಮೊತ್ತದ ಸಾಲದ ಗಂಟನ್ನು ಹೊರಿಸಿ ಹೋಗಿತ್ತು, ಸಾಲ ಮಾಡಿ ಈ ಎಸ್ಕಾಂಗಳ ಬಾಕಿ ಮೊತ್ತ ತೀರಿಸಿ, ಕುತ್ತಿಗೆವರೆಗೂ ಮುಳುಗಿದ್ದ ಎಸ್ಕಾಂಗಳನ್ನು ಮೇಲೆತ್ತಿದವರು ನಾವು. ಅಗತ್ಯ ಇರುವ ಕ್ಷೇತ್ರಕ್ಕೆ ಹಣ ಹಾಕುವುದನ್ನು ನಷ್ಟ ಎನ್ನುವುದಿಲ್ಲ, ಬದಲಾಗಿ ಬಂಡವಾಳ ಹೂಡಿಕೆ ಎನ್ನುತ್ತಾರೆ ಎಂಬ ಅರ್ಥ ಶಾಸ್ತ್ರದ ಸರಳ ತತ್ವದ ಅರಿವಿಲ್ಲದ ಸುನೀಲ್ ಕುಮಾರ್ ಅವರ ಜ್ಞಾನಭಂಡಾರದ ಬಗ್ಗೆ ಅನುಕಂಪವಿದೆ' ಎಂದು ವ್ಯಂಗ್ಯವಾಡಿದ್ದರು.

ಎಸ್ಕಾಂಗಳ ಉದ್ಧಾರ ತಮಾಷೆಯಾಗಿದೆ
ಸಿದ್ದರಾಮಯ್ಯ ತಮ್ಮ ಟ್ವೀಟ್ನಲ್ಲಿ 'ಒಂದು ಕಾಲದಲ್ಲಿ ಕೇವಲ 2-3 ಗಂಟೆ ವಿದ್ಯುತ್ ಒದಗಿಸಲು ಸಂಕಷ್ಟ ಪಡುತ್ತಿದ್ದ ರಾಜ್ಯವು 2018 ರ ವೇಳೆಗೆ 28,741 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಮಾಡುವ ಹಂತಕ್ಕೆ ತಲುಪಿತ್ತು. ನಮ್ಮ 5 ವರ್ಷಗಳ ಆಡಳಿತದ ಅವಧಿಯಲ್ಲಿ 13,175 ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಸಾಮರ್ಥ್ಯ ಹೆಚ್ಚಿಸಿದ್ದೆವು. ರಾಜ್ಯದ ಅಗತ್ಯತೆಗೆ ಸಾಕಾಗಿ, ಹೊರರಾಜ್ಯಗಳಿಗೆ ಮಾರಾಟ ಮಾಡುವಷ್ಟು ವಿದ್ಯುತ್ ಅನ್ನು ನಾವೇ ಉತ್ಪಾದನೆ ಮಾಡುತ್ತಿದ್ದರು, ದುಪ್ಪಟ್ಟು ದರ ನೀಡಿ ಹೊರಗಿನಿಂದ ಖರೀದಿ ಮಾಡುತ್ತಿರುವ ನಿಮ್ಮ ಸರ್ಕಾರ ಎಸ್ಕಾಂ ಗಳನ್ನು ಉದ್ಧಾರ ಮಾಡಿದೆ ಎಂಬುದು ತಮಾಷೆಯಾಗಿದೆ' ಎಂದು ಹೇಳಿದ್ದರು.

ಸಚಿವ ಸುನಿಲ್ ಕುಮಾರ್ ವಿರುದ್ಧ ಟ್ವೀಟ್
ಸಿದ್ದರಾಮಯ್ಯ ತಮ್ಮ ಟ್ವೀಟ್ನಲ್ಲಿ, 'ಸಚಿವ ಸುನೀಲ್ ಕುಮಾರ್ ಅವರ ಅಸಾಮರ್ಥ್ಯಕ್ಕೆ ತಕ್ಕುದಾಗಿ ರಾಜ್ಯದ ವಿದ್ಯುತ್ ಇಲಾಖೆ ಕೆಲಸ ಮಾಡುತ್ತಿದೆ. ನಾವು ಅಧಿಕಾರಕ್ಕೆ ಬಂದ ಮೇಲೆ ಇಲಾಖೆಯನ್ನು ಲಾಭದ ಹಳಿಗೆ ತಂದು, ರಾಜ್ಯದ ಜನರಿಗೆ ಉಚಿತವಾಗಿ 200 ಯುನಿಟ್ ವಿದ್ಯುತ್ ನೀಡುತ್ತೇವೆ. ಸನ್ಮಾನ್ಯ ಸುನೀಲ್ ಕುಮಾರ್ ಅವರೇ, ನಾವು ನುಡಿದಂತೆ ನಡೆಯುವವರು. ಈ ಬಗ್ಗೆ ಅನುಮಾನವೇ ಬೇಡ. ರಾಜ್ಯದ ಜನರಿಗೆ 200 ಯುನಿಟ್ ಉಚಿತ ಘೋಷಣೆ ಮಾಡಿ, ಕಾರ್ಯಕ್ರಮಕ್ಕೆ ನಿಮ್ಮನ್ನೂ ಆಹ್ವಾನಿಸುತ್ತೇವೆ. ತಪ್ಪದೇ ಬನ್ನಿ' ಎಂದು ತಿಳಿಸಿದ್ದರು.

ನಮ್ಮ ಶ್ರಮ ಏನಿದೆ ಎಂದು ವಿವರಣೆ
ಸಿದ್ದರಾಮಯ್ಯ ತಮ್ಮ ಟ್ವೀಟ್ನಲ್ಲಿ ಸಚಿವ ಸುನಿಲ್ ಕುಮಾರ್ಗೆ ಪಾಠ ಮಾಡಿದ್ದರು, 'ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ 2014-15 ರಲ್ಲಿ ರಾಜ್ಯದಲ್ಲಿ ಒಟ್ಟು ಉತ್ಪಾದನೆಯಾಗುತ್ತಿದ್ದ ವಿದ್ಯುತ್ ಪ್ರಮಾಣ 14,825 ಮೆ.ವ್ಯಾ ಮಾತ್ರ. ಅದರಲ್ಲಿ ಸೋಲಾರ್ ಮೂಲದಿಂದ 118 ಮೆ.ವ್ಯಾ ಮತ್ತು ಗಾಳಿ ಮೂಲದಿಂದ 2,655 ಮೆ. ವ್ಯಾ ವಿದ್ಯುತ್ ಉತ್ಪಾದನೆ ಆಗುತ್ತಿತ್ತು. 2018 ರ ವೇಳೆಗೆ ಸೋಲಾರ್ ಮೂಲದಿಂದ 6157 ಮೆ.ವ್ಯಾ. ಮತ್ತು ಗಾಳಿ ಮೂಲದಿಂದ 4730 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಮಾಡುವ ಶಕ್ತಿ ತುಂಬಿದವರು ನಾವು' ಎಂದು ಹೇಳಿದ್ದರು.
'ವಿದ್ಯುತ್ ಉತ್ಪಾದನೆ ಹೆಚ್ಚಾದರೆ ಇಲಾಖೆಗೆ ಲಾಭವಾಗುತ್ತಾ? ನಷ್ಟವಾಗುತ್ತಾ? ಕಲ್ಲಿದ್ದಲು ಮೂಲದ ಉಷ್ಣ ವಿದ್ಯುತ್ ಉತ್ಪಾದನೆ 2014-15 ರಲ್ಲಿ 6,197 ಮೆಗಾವ್ಯಾಟ್ ಇದ್ದದ್ದು, 2018 ರ ವೇಳೆಗೆ 11,366 ಮೆಗಾವ್ಯಾಟ್ ಗೆ ತಲುಪಿತ್ತು. ಇಂದು ನೀವು ವಿದ್ಯುತ್ ಮಾರಾಟ ಮಾಡಿ ಲಾಭ ಗಳಿಸುತ್ತಿದ್ದರೆ ಅದರ ಹಿಂದಿರುವುದು ನಮ್ಮ ಸರ್ಕಾರದ ಶ್ರಮ' ಎಂದು ತಿಳಿಸಿದ್ದರು.












Click it and Unblock the Notifications