2023ರ ಚುನಾವಣೆ; ಇಬ್ಬರು ಅಭ್ಯರ್ಥಿಗಳನ್ನು ಘೋಷಿಸಿದ ಎಚ್ಡಿಕೆ!
ಬೆಂಗಳೂರು, ಜನವರಿ 24: 2023ರ ವಿಧಾನಸಭೆ ಚುನಾವಣೆಯನ್ನು ಜೆಡಿಎಸ್ ಪಕ್ಷ ಗಂಭೀರವಾಗಿ ತೆಗೆದುಕೊಂಡಿದೆ. ಈಗಾಗಲೇ ಚುನಾವಣೆ ಸಿದ್ಧತೆಗಾಗಿ ಪಕ್ಷ ಸಂಘಟನೆಗೆ ಯೋಜನೆಯನ್ನು ರೂಪಿಸಿದೆ.
ಭಾನುವಾರ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ 2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಎರಡು ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದಾರೆ. ಅಚ್ಚರಿಯಾದರೂ ಇದು ಸತ್ಯ.
ಆನೇಕಲ್ ಮತ್ತು ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರಗಳಿಗೆ ಭಾನುವಾರ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಬಿಜೆಪಿ, ಕಾಂಗ್ರೆಸ್ ಪಕ್ಷಗಳಿಗೂ ಮೊದಲೇ ಅಭ್ಯರ್ಥಿ ಘೋಷಣೆ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಆನೇಕಲ್ ಕ್ಷೇತ್ರದಿಂದ ಕೆ. ಪಿ. ರಾಜು ಮತ್ತು ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಪ್ರಭಾಕರ್ ರೆಡ್ಡಿ ಅವರು ಅಭ್ಯರ್ಥಿಗಳಾಗಿದ್ದಾರೆ. ವಿಧಾನಸಭೆ ಚುನಾವಣೆಗೆ ಇನ್ನು ಎರಡು ವರ್ಷ ಬಾಕಿ ಇದೆ. ಆದರೆ, ಜೆಡಿಎಸ್ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ.

ಕುಮಾರಸ್ವಾಮಿ ಹೇಳಿಕೆ
ಭಾನುವಾರ ಅಭ್ಯರ್ಥಿಗಳನ್ನು ಪ್ರಕಟಿಸಿದ ಬಳಿಕ ಮಾತನಾಡಿದ ಕುಮಾರಸ್ವಾಮಿ, "ಕಳೆದ ಬಾರಿ ಬಿಎಸ್ಪಿ ಜೊತೆಗಿನ ಹೊಂದಾಣಿಕೆಯಿಂದ ನಮಗೆ ತೊಂದರೆ ಆಯಿತು. ಈ ಬಾರಿ ಯಾವುದೇ ಪಕ್ಷದ ಜೊತೆ ಹೊಂದಾಣಿಕೆ ಇಲ್ಲ" ಎಂದು ಎಚ್. ಡಿ. ಕುಮಾರಸ್ವಾಮಿ ಘೋಷಣೆ ಮಾಡಿದರು.

ಪಕ್ಷ ಸಂಘಟನೆಗೆ ಆದ್ಯತೆ
"ಪಕ್ಷ ಸಂಘಟನೆಗಾಗಿ ಈಗಿನಿಂದಲೇ ಅಭ್ಯರ್ಥಿ ಘೋಷಣೆ ಮಾಡಿದ್ದೇನೆ. ಮುಂದಿನ ಬಾರಿ ನಾವು ಸ್ವಂತ ಬಲದಿಂದ ಅಧಿಕಾರಕ್ಕೆ ಬರುತ್ತೇವೆ" ಎಂದು ಎಚ್. ಡಿ. ಕುಮಾರಸ್ವಾಮಿ ಹೇಳಿದರು. ಮುಂದಿನ ಚುನಾವಣೆ ತಯಾರಿಗಾಗಿ ಜೆಡಿಎಸ್ ಹಲವು ಯೋಜನೆಗಳನ್ನು ರೂಪಿಸಿದೆ.

7 ವಲಯಗಳಲ್ಲಿ ಪಕ್ಷ ಸಂಘನೆ
ವಿಧಾನಸಭೆ ಚುನಾವಣೆಗೆ ಪಕ್ಷವನ್ನು ಸಂಘಟನೆ ಮಾಡಲು ಜೆಡಿಎಸ್ ಯೋಜನೆ ರೂಪಿಸಿದೆ. ಪಕ್ಷ ಸಂಘಟನೆಯಲ್ಲಿ ಯುವಕರಿಗೆ ಹೆಚ್ಚಿನ ಆದ್ಯತೆ ಸಿಗಲಿದೆ. ಪಕ್ಷ ಸಂಘಟನೆಗಾಗಿ 7 ವಲಯಗಳನ್ನು ಮಾಡಲಾಗಿದ್ದು, ಅದಕ್ಕೆ ವೀಕ್ಷಕರನ್ನು ಸಹ ನೇಮಕ ಮಾಡಲಾಗಿದೆ. ವೀಕ್ಷಕರ ತಂಡಗಳು ಪ್ರವಾಸ ಕೈಗೊಂಡು ಜಿಲ್ಲಾ ಮಟ್ಟದಲ್ಲಿ ಪಕ್ಷದ ಮುಖಂಡರ ಅಭಿಪ್ರಾಯವನ್ನು ಸಂಗ್ರಹಣೆ ಮಾಡಲಿವೆ.
Recommended Video

ಮೈತ್ರಿ ಸರ್ಕಾರ, ರಾಜೀನಾಮೆ
2018ರ ವಿಧಾನಸಭೆ ಚುನಾವಣೆ ಬಳಿಕ ರಾಜ್ಯದಲ್ಲಿ ಹಲವು ಗೊಂದಲ ಉಂಟಾಗಿತ್ತು. ಮೊದಲು ಯಡಿಯೂರಪ್ಪ ಮುಖ್ಯಮಂತ್ರಿಯಾದರು. ಸರ್ಕಾರ ರಚನೆಗೆ ಮ್ಯಾಜಿಕ್ ನಂಬರ್ ಇಲ್ಲದೇ ರಾಜೀನಾಮೆ ಕೊಟ್ಟರು. ಬಳಿಕ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಬಂದಿತು. ಶಾಸಕರ ರಾಜೀನಾಮೆ ಬಳಿಕ ಸರ್ಕಾರ ಪತನಗೊಂಡಿತು.












Click it and Unblock the Notifications