7 ನೇ ವೇತನ ಆಯೋಗ ಜಾರಿ; ಸರ್ಕಾರಕ್ಕೆ 20ಸಾವಿರ ಕೋಟಿ ರೂ. ಹೆಚ್ಚಿನ ಹೊರೆ : ಮಹತ್ವದ ಮಾಹಿತಿ ನೀಡಿದ ಸಿದ್ದರಾಮಯ್ಯ
ಬೆಂಗಳೂರು, ಜುಲೈ 18: ಆಗಸ್ಟ್ 1 ರಿಂದ 7 ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದು, ಈ ಮೂಲಕ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆ ಈಡೇರಿದೆ. ರಾಜ್ಯ ಸರ್ಕಾರದ ಈ ನಿರ್ಧಾರಿಂದ ಸರ್ಕಾರಿ ನೌಕರರಿಗೆ ಸಂಬಳ ಹೆಚ್ಚಳವಾಗಲಿದೆ.
ಕರ್ನಾಟಕ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ 7ನೇ ರಾಜ್ಯ ವೇತನ ಆಯೋಗದ ಅಂತಿಮ ವರದಿ ಶಿಫಾರಸು ಜಾರಿಗೆ ರಾಜ್ಯ ಸಚಿವ ಸಂಪುಟ ಸಭೆ ನಿರ್ಧರಿಸಿದೆ. ಇದರಿಂದ ನೌಕರರ ವೇತನ ಶೇಕಡಾ 10 ರಷ್ಟು ಹೆಚ್ಚಳವಾಗಿದ್ದು, ಈ ಬಗ್ಗೆ ಸರ್ಕಾರಿ ನೌಕರರು ಸರ್ಕಾರದ ತಿರ್ಮಾನಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ 7ನೇ ವೇತನ ಆಯೋಗ ಜಾರಿಗೆ ಶಿಫಾರಸು ಹಿನ್ನೆಲೆ ಬುಧವಾರ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ನೇತೃತ್ವದ ನೌಕರರ ನಿಯೋಗದಿಂದ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನ ಸರ್ಕಾರಿ ನೌಕರರು ಸನ್ಮಾನಿಸಿದರು.
ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, 7ನೇ ವೇತನ ಆಯೋಗದ ಶಿಫಾರಸುಗಳನ್ನು ಸರ್ಕಾರ ಪೂರ್ಣವಾಗಿ ಒಪ್ಪಿಕೊoಡಿದೆ. ಇದರಿoದ ಸರ್ಕಾರಕ್ಕೆ 20ಸಾವಿರ ಕೋಟಿ ರೂ. ಹೆಚ್ಚಿನ ಹೊರೆಯಾಗಲಿದೆ. ಸರ್ಕಾರದ ಕಾರ್ಯಕ್ರಮಗಳನ್ನು ಪ್ರಾಮಾಣಿಕವಾಗಿ ಜನರಿಗೆ ತಲುಪಿಸುವ ಕಾರ್ಯ ಮಾಡಿ ಎಂದು ಮುಖ್ಯಮoತ್ರಿ ಸಿದ್ದರಾಮಯ್ಯ ತಿಳಿಸಿದರು. ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಜನರಿಗೆ ತಲುಪಿಸುವ ಜೊತೆಗೆ ಸರ್ಕಾರದ ನಿಲುವುಗಳಿಗೆ ತಕ್ಕ೦ತೆ ಕಾರ್ಯ ನಿರ್ವಹಿಸಬೇಕು ಎಂದರು.
ಸಿಎಂ ಅಭಿನಂದಿಸಿ ಬೇಡಿಕೆ ಇಟ್ಟ ಸರ್ಕಾರಿ ನೌಕರರು
ಎ) ಎನ್.ಪಿ.ಎಸ್. ರದ್ದುಪಡಿಸಿ ಹಳೇ ಪಿಂಚಣೆ ಯೋಜನೆಯನ್ನು ಮರು ಜಾರಿಗೊಳಿಸುವ ಬೇಡಿಕೆಗೆ ಪ್ರತಿಕ್ರಿಯಿಸಿದ ಮಾನ್ಯ ಮುಖ್ಯಮಂತ್ರಿಗಳು ಈಗಾಗಲೇ ಹಳೇ ಪಿಂಚಣಿಯನ್ನು ಮರು ಜಾರಿಗೊಳಿಸುವ ಸಂಬಂಧ ಅಪರ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿದ್ದು, ಸಮಿತಿಗೆ ನಿಗಧಿತ ಅವಧಿಯೊಳಗೆ ಒಪಿಎಸ್ ಜಾರಿಗೊಳಿಸಿರುವ ರಾಜ್ಯಕ್ಕೆ ಭೇಟಿ ನೀಡಿ ಅಧ್ಯಯನ ವರದಿ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು.
ನಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಹಳೆ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸುವಲ್ಲಿ ಮತ್ತೊಮ್ಮೆ ನುಡಿದಂತೆ ನಡೆದುಕೊಳ್ಳುವ ಭರವಸೆ ನೀಡಿದರು.
ಕರ್ನಾಟಕ ರಾಜ್ಯ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೊಳಿಸಲು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಯೋಜನೆಯ ಅನುಷ್ಠಾನಕ್ಕೆ ಕಾರಣವಾಗಿರುವ ತಾಂತ್ರಿಕ ಮತ್ತು ಆಡಳಿತಾತ್ಮಕ ಸಮಸ್ಯೆಗಳನ್ನು ಬಗೆಹರಿಸಲು ಆಧಿಕಾರಿಗಳಿಗೆ ಸೂಚಿಸಿ ಶೀಘ್ರದಲ್ಲಿಯೇ 'ಕರ್ನಾಟಕ ರಾಜ್ಯ ಆರೋಗ್ಯ ಸಂಜೀವಿನಿ ಯೋಜನೆ' ಜಾರಿಗೊಳಿಸುವ ಭರವಸೆ ನೀಡಿದರು.
ಸರ್ಕಾರಿ ನೌಕರರ ಎಲ್ಲಾ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವುದು ನಮ್ಮ ಸರ್ಕಾರದ ಜವಾಬ್ದಾರಿಯಾಗಿದ್ದು, ಸರ್ಕಾರದ ಜನಪರ ಯೋಜನೆಗಳಿಗೆ ವೇಗ ನೀಡುವಲ್ಲಿ ಸರ್ಕಾರಿ ನೌಕರರ ಪಾತ್ರ ಮುಖ್ಯವಾಗಿದ್ದು, ಶ್ರಮಿಸಲು ತಿಳಿಸಿದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರ ನಿಯೋಗದಲ್ಲಿ ಸಂಘದ ಎಲ್ಲಾ ಜಿಲ್ಲೆಗಳ ಜಿಲ್ಲಾಧ್ಯಕ್ಷರುಗಳು, ರಾಜ್ಯ ಸಂಘದ ಎಲ್ಲಾ ಹಂತದ ಪದಾಧಿಕಾರಿಗಳು, ಬಿ.ಬಿ.ಎಂ.ಪಿ, ನಿಗಮ- ಮಂಡಳಿ, ಸ್ಥಳೀಯ ಸಂಸ್ಥೆಗಳು, ಸ್ವಾಯತ್ತ ಸಂಸ್ಥೆಗಳು, ವಿಶ್ವವಿದ್ಯಾಲಯ, ಅನುದಾನಿತ ಶಿಕ್ಷಣ ಸಂಸ್ಥೆಗಳ ವೃಂದ ಸಂಘಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗೂ ರಾಜ್ಯ ನಿವೃತ್ತ ನೌಕರರ ಸಂಘದ ಅಧ್ಯಕ್ಷರು ಉಪಸ್ಥಿತರಿದ್ದರು.












Click it and Unblock the Notifications