ಫೆ.13ರಂದು ಸಂತ ಸೇವಾಲಾಲ್ 284ನೇ ಜಯಂತೋತ್ಸವ : ಕೋಟ ಶ್ರೀನಿವಾಸ ಪೂಜಾರಿ
ಬೆಂಗಳೂರು,ಜನವರಿ 14: ಸಂತ ಸೇವಾಲಾಲ್ ರವರ 284ನೇ ಜಯಂತೋತ್ಸವವನ್ನು ಫೆ.13ರಿಂದ ಮೂರು ದಿನಗಳ ಕಾಲ ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಈ ಕುರಿತು ಶುಕ್ರವಾರ ಬೆಂಗಳೂರಿನಲ್ಲಿ ಕೋಟ ಶ್ರೀನಿವಾಸ್ ಪೂಜಾರಿ ಅಧ್ಯಕ್ಷತೆಯಲ್ಲಿ ನಡೆದ ಸಂತ ಸೇವಾ ಲಾಲ್ ಜಯಂತೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಅವರು ಈ ವಿಷಯ ತಿಳಿಸಿದರು.
ಬಂಜಾರ ಸಮುದಾಯದ ಆರಾಧ್ಯ ದೈವ ಸಂತ ಸೇವಾಲಾಲ್ ರವರ ಜಯಂತಿಯನ್ನು ಸರ್ಕಾರದಿಂದ ಪ್ರತಿ ವರ್ಷ ದಾವಣಗೆರೆ ಜಿಲ್ಲೆ ನ್ಯಾಮತಿ ತಾಲ್ಲೂಕಿನ ಸೂರಗೊಂಡನಕೊಪ್ಪ ಭಾಯಾಘಡ್ ಇಲ್ಲಿ ಆಚರಿಸಲಾಗುತ್ತಿದೆ. ಸಂತ ಸೇವಾಲಾಲ್ ರವರ 284ನೇ ಜಯಂತ್ಯುತ್ಸವ ಕಾರ್ಯಕ್ರಮವನ್ನು ದಿನಾಂಕ:13.02.2023 ರಿಂದ 15.02.2023ರ ವರೆಗೆ ನಡೆಸಲಾಗುವುದು ಎಂದು ಸಭೆಯಲ್ಲಿ ತಿಳಿಸಿದರು.

ಸಭೆಯಲ್ಲಿ ಸಂತ ಸೇವಾಲಾಲ್ ರವರ 284ನೇ ಜಯಂತೋತ್ಸವ ಕಾರ್ಯಕ್ರಮದ ಕುರಿತು ಚರ್ಚಿಸಿ ಕಾರ್ಯಕ್ರಮದ ಉದ್ಘಾಟನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ನಿಖಟಪೂರ್ವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನ ಆಹ್ವಾನಿಸಲು ತೀರ್ಮಾನಿಸಲಾಗಿದೆ. ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮ, ಜಿಲ್ಲಾಡಳಿತ, ಸಂತ ಸೇವಾಲಾಲ್ ಪ್ರತಿಷ್ಠಾನ ಮತ್ತು ಸಂತ ಸೇವಾಲಾಲ್ ಜನ್ಮಸ್ಥಳ ಮಹಾಮಠ ಸಹಯೋಗದಲ್ಲಿ ಕಾರ್ಯಕ್ರಮದ ಪೂರ್ವಭಾವಿ ಸಿದ್ದತೆಯನ್ನು ಮಾಡಿ ಸಂತ ಸೇವಾಲಾಲ್ ರವರ 284ನೇ ಜಯಂತೋತ್ಸವ ಕಾರ್ಯಕ್ರಮವನ್ನು ಯಶಸ್ವಿಯಾಗಿ ನೇರವೇರಿಸಲು ತೀರ್ಮಾನಿಸಿ ವಿವಿಧ ಜವಾಬ್ದಾರಿಗಳನ್ನು ಹಂಚಿಕೆ ಮಾಡಲಾಯಿತು ಎಂದರು.

ಸಭೆಯಲ್ಲಿ ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ, ಸಂಸದ ಉಮೇಶ್ ಜಾದವ್, ಶಾಸಕರಾದ ಕೆ.ಬಿ.ಅಶೋಕ್ ನಾಯ್ಕ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪಿ.ರಾಜೀವ್, ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೇಜರ್ ಮಣಿವಣ್ಣನ್.ಪಿ, ಆಯುಕ್ತ ಡಾ.ರಾಕೇಶ್ ಕುಮಾರ್.ಕೆ, ನಿಗಮದ ವ್ಯವಸ್ಥಾಪಕ ನಿರ್ದೇಶಕ ಯು.ಚಂದ್ರಾನಾಯಕ, ನಿಗಮ ಹಾಗೂ ಸಂತ ಸೇವಾಲಾಲ್ ಪ್ರತಿಷ್ಠಾನದ ನಿರ್ದೇಶಕರು, ಬಂಜಾರ ಸಮಾಜದ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು.












Click it and Unblock the Notifications