ರಾಜ್ಯ ಮಟ್ಟದ ಮಕ್ಕಳ ವಿಜ್ಞಾನ ಸಮಾವೇಶಕ್ಕೆ ಬಿಜಿಎಸ್ ಮಠದಿಂದ ದತ್ತಿ ನಿಧಿ!
ಬೆಂಗಳೂರು, ಆ. 18: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕಳೆದ ಆ. 1 ಹಾಗೂ 2 ರಂದು ಬೆಂಗಳೂರಿನ ರಾಜ್ಯ ವಿಜ್ಞಾನ ಪರಿಷತ್ನಲ್ಲಿ ಆನ್ಲೈನ್ ಮೂಲಕ ನಡೆಸಿದ್ದ 28 ನೇ ರಾಜ್ಯ ಮಟ್ಟದ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಭಾಗವಹಿಸಿ, ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದ 30 ಬಾಲ ವಿಜ್ಞಾನಿಗಳಿಗೆ ಮಂಗಳವಾರ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ರಾಜ್ಯ ಮಟ್ಟದ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ 300 ಮಕ್ಕಳು ಭಾಗವಹಿಸಿದ್ದರು. ಅವರಲ್ಲಿ 30 ಬಾಲ ವಿಜ್ಞಾನಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ರಾಜ್ಯ ವಿಜ್ಞಾನ ಪರಿಷತ್ತು ಬೆಂಗಳೂರಿನಲ್ಲಿ ಮಂಗಳವಾರ ಏರ್ಪಡಿಸಿದ್ದ 28ನೇ ರಾಜ್ಯ ಮಟ್ಟದ ಮಕ್ಕಳ ವಿಜ್ಞಾನ ಸಮಾವೇಶ ಹಾಗೂ ಬಾಲ ವಿಜ್ಞಾನಿಗಳಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ, "ಮೂಲ ವಿಜ್ಞಾನ ಕಲಿಕೆಗೆ ಹೆಚ್ಚು ಆದ್ಯತೆ ನೀಡುವುದರ ಜತೆಗೆ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಸಂಸ್ಕಾರ ಸೃಷ್ಟಿ ಮಾಡಲು ಸರಕಾರ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ. ಈ ನಿಟ್ಟಿನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಹೆಚ್ಚು ಪೂರಕವಾಗಿದೆ. ದೇಶದ ಅಭಿವೃದ್ಧಿಯಲ್ಲಿ ವಿಜ್ಞಾನವನ್ನು ಕಡೆಗಣಿಸುವಂತೆಯೇ ಇಲ್ಲ. ಯಾವ ದೇಶ ವಿಜ್ಞಾನವನ್ನು ಉಪೇಕ್ಷಿಸುತ್ತದೆಯೋ ಆ ದೇಶ ಮುಂದುವರಿಯಲು ಸಾಧ್ಯವಿಲ್ಲ" ಎಂದರು.
ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ವಿಜ್ಞಾನ ಕಲಿಕೆಗೆ ಹೆಚ್ಚು ಒತ್ತಾಸೆ ಕೊಡಲಾಗಿದೆ. ಜತೆಗೆ, ವೈಜ್ಞಾನಿಕ ಸಂಶೋಧನೆಗೆ ಅತಿ ಹೆಚ್ಚು ಮಹತ್ವ ನೀಡಲಾಗುತ್ತಿದೆ. ಎಲ್ಲ ಶೈಕ್ಷಣಿಕ ಸಂಸ್ಥೆಗಳಲ್ಲೂ ಮೂಲ ವಿಜ್ಞಾನ ಬೋಧನೆ ಹಾಗೂ ಅದನ್ನು ಮತ್ತಷ್ಟು ವಿಸ್ತೃತವಾಗಿ ಕಲಿಸಲು ನೆರವಾಗುವಂತಹ ಎಲ್ಲ ವ್ಯವಸ್ಥೆಯನ್ನು ಮಾಡಲಾಗುತ್ತಿದೆ. ಈಗಾಗಲೇ ವಿಜ್ಞಾನ ಕ್ಷೇತ್ರದಲ್ಲಿ ಕರ್ನಾಟಕ ದೇಶದಲ್ಲೇ ಮುಂಚೂಣಿ ರಾಜ್ಯವಾಗಿದ್ದು, ಆ ಪರಂಪರೆಯನ್ನು ಮುಂದುವರಿಸಲು ಮತ್ತಷ್ಟು ಪ್ರೋತ್ಸಾಹ ನೀಡಲಾಗುವುದು ಎಂದು ಡಾ. ಅಶ್ವಥ್ ನಾರಾಯಣ ಭರವಸೆ ನೀಡಿದ್ದಾರೆ. ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದ ನಾಥ ಸ್ವಾಮೀಜಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದರು.

ಆದಿಚುಂಚನಗಿರಿ ಮಠದಲ್ಲಿ ಸ್ಥಾಪಿಸಲಾಗಿರುವ ಬಾಲ ಗಂಗಾಧರನಾಥ ಸ್ವಾಮೀಜಿ ವಿಜ್ಞಾನ ದತ್ತಿ ನಿಧಿಯಿಂದ ವಿಜ್ಞಾನ ಪರಿಷತ್ತಿಗೆ ನಿರ್ಮಲಾನಂದ ನಾಥ ಸ್ವಾಮೀಜಿ 2 ಲಕ್ಷ ರೂ.ಗಳ ಚೆಕ್ ನೀಡಿದರು. ಪ್ರಶಸ್ತಿ ಪುರಸ್ಕೃತರಾದ ಎಲ್ಲ ಬಾಲ ವಿಜ್ಞಾನಿಗಳಿಗೆ ಪ್ರತೀ ವರ್ಷ ವಿಜೇತರಾಗುವ ಕಿರಿಯ ವಿಜ್ಞಾನಿಗಳಿಗೆ ನಗದು ಪುರಸ್ಕಾರ ನೀಡಲು ಈ ಹಣ ಬಳಸಲಾಗುತ್ತದೆ.

ರಾಜ್ಯ ವಿಜ್ಞಾನ ಪರಿಷತ್ತಿನ ಅಧ್ಯಕ್ಷ ಗಿರೀಶ್ ಕಡ್ಲೇವಾಡ ಅವರು ಅಧ್ಯಕ್ಷತೆ ವಹಿಸಿದ್ದರು. ಹಿರಿಯ ವಿಜ್ಞಾನಿ ಡಾ. ವಿ. ಕೆ. ಅತ್ರೆ, ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರು, ಅದಮ್ಯ ಚೇತನ ಪ್ರತಿಷ್ಠಾನದ ಮುಖ್ಯಸ್ಥೆ ತೇಜಸ್ವಿನಿ ಅನಂತಕುಮಾರ್, ರಾಜ್ಯ ವಿಜ್ಞಾನ ಪರಿಷತ್ತಿನ ಉಪಾಧ್ಯಕ್ಷ ಬಿ. ದೊಡ್ಡಬಸಪ್ಪ, ಹೆಚ್. ವಿ. ಹುದ್ದಾರ್, ಖಜಾಂಜಿ ಈ. ಬಸವರಾಜು ಭಾಗವಹಿಸಿದ್ದರು.












Click it and Unblock the Notifications