ಪಂಚಮಸಾಲಿ ಮೀಸಲಾತಿ ಬಗ್ಗೆ ಸರ್ಕಾರ ಇನ್ನೂ ಪರಿಶೀಲಿಸಿ ಕ್ರಮ ಕೈಗೊಂಡಿಲ್ಲ: ಹೈಕೋರ್ಟ್ಗೆ ಎಜಿ ಹೇಳಿಕೆ
ಬೆಂಗಳೂರು ಡಿಸೆಂಬರ್, 29: ರಾಜ್ಯದಲ್ಲಿ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕೆಂಬ ವಿವಾದ ದಿನೇ ದಿನೇ ತೀವ್ರಗೊಳ್ಳುತ್ತಿದ್ದು, ಇದು ಸರ್ಕಾರಕ್ಕೆ ನುಂಗಲಾರದ ತುತ್ತಾಗಿದೆ.
ಸದ್ಯ ಈ ವಿಚಾರ ಹೈಕೋರ್ಟ್ ಮೆಟ್ಟಿಲೇರಿದ್ದು, ನ್ಯಾಯಾಲಯದಲ್ಲಿ ಸರ್ಕಾರ ಇನ್ನೂ ಆ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ, ಹಿಂದುಳಿದ ವರ್ಗಗಳ ಆಯೋಗದ ಮಧ್ಯಂತರ ವರದಿ ಪರಿಶೀಲಿಸಿಲ್ಲ, ಅದನ್ನು ಪರಿಶೀಲಿಸಿದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದೆಂದು ನ್ಯಾಯಾಲಯ ತಿಳಿಸಿದೆ.
ಈ ವಿಚಾರ ನ್ಯಾಯಾಲಯದ ಮುಂದಿರುವ ಕಾರಣ ಇಟ್ಟುಕೊಂಡು ರಾಜ್ಯ ಸರ್ಕಾರ ನಿರ್ಧಾರ ಕೈಗೊಳ್ಳುವುದನ್ನು ಮುಂದಕ್ಕೆ ಹಾಕುವ ಸಾಧ್ಯತೆ ಇದೆ.

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲು ನೀಡದಂತೆ ಬೆಂಗಳೂರಿನ ರಾಘವೇಂದ್ರ ಡಿ.ಜಿ. ಎಂಬುವರು ಸಲ್ಲಿಸಿದ್ದ ಪಿಐಎಲ್ ವಿಚಾರಣೆ ಗುರುವಾರ ನಡೆಯಿತು. ನ್ಯಾಯಧೀಶರು ಸುನಿಲ್ ದತ್ ಯಾದವ್ ಅವರಿದ್ದ ನ್ಯಾಯಪೀಠದ ಮುಂದೆ ಹಾಜರಾದ ಅಡ್ವೊಕೇಟ್ ಜನರಲ್, ಪ್ರಭುಲಿಂಗ್ ನಾವದಗಿ, ಮೀಸಲು ಸಂಬಂಧ ಹಿಂದುಳಿದ ವರ್ಗಗಳ ಆಯೋಗ ಮಧ್ಯಂತರ ವರದಿ ಸಲ್ಲಿಸಿದೆ. ಆ ಮಧ್ಯಂತರ ವರದಿ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲಾಗಿದ್ದು, ಸರ್ಕಾರ ವರದಿ ಪರಿಶೀಲಿಸಿ ಇನ್ನೂ ಕ್ರಮ ಕೈಗೊಂಡಿಲ್ಲ. ಹಾಗಾಗಿ ವರದಿಯ ಪ್ರತಿ ಸಲ್ಲಿಸಲು ಕಾಲಾವಕಾಶ ನೀಡಬೇಕು ಎಂದು ಕೋರಿದರು.
ಅರ್ಜಿದಾರರ ಪರ ವಕೀಲರು, ಸರ್ಕಾರ ತರಾತುರಿಯಲ್ಲಿ ಮೀಸಲಾತಿ ಬಗ್ಗೆ ತೀರ್ಮಾನಿಸುವ ಸಾಧ್ಯತೆ ಇದೆ. ಮೀಸಲಾತಿ ಸಿಗುವುದು ಖಚಿತವೆಂದು ಆಡಳಿತಾರೂಢ ಪಕ್ಷದ ನಾಯಕರು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಹಾಗಾಗಿ ಹೇಗಾದರೂ ಬೇಗ ಈ ಅರ್ಜಿಯ ತುರ್ತು ವಿಚಾರಣೆ ಅಗತ್ಯವಿದೆ ಎಂದು ನ್ಯಾಯಪೀಠವನ್ನು ಕೋರಿದರು. ಆದರೆ ನ್ಯಾಯಾಲಯ ವಿಚಾರಣೆಯನ್ನು ಜನವರಿ ಮೊದಲ ವಾರಕ್ಕೆ ನಿಗದಿಪಡಿಸಿ ಮುಂದೂಡಿತು.

ಸರ್ಕಾರ ತರಾತುರಿಯಲ್ಲಿ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ..!
ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡದಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರ ಹಾಗೂ ರಾಜ್ಯ ಹಿಂದುಳಿದ ವರ್ಗಗಳ ಆಯೊಗಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ಅಲ್ಲದೇ ಹಿಂದುಳಿದ ವರ್ಗಗಳ ಆಯೋಗದ ಮಧ್ಯಂತರ ವರದಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಸರ್ಕಾರಕ್ಕೆ ನ್ಯಾಯಪೀಠ ಸೂಚನೆ ನೀಡಿದೆ.
ಹಿಂದುಳಿದ ವರ್ಗಗಳ ಆಯೋಗ 2000ರಲ್ಲಿಯೇ ಈ ಬೇಡಿಕೆ ತಿರಸ್ಕರಿಸಿದೆ. ಪಂಚಮಸಾಲಿ ಉಪ ಜಾತಿಯನ್ನು 2ಎಗೆ ಸೇರಿಸಲು ನಿರಾಕರಿಸಿದೆ. ಈಗ ಹಿಂದುಳಿದ ವರ್ಗಗಳ ಆಯೋಗದ ಮಧ್ಯಂತರ ವರದಿ ಆಧರಿಸಿದ ಕ್ರಮ ಕಾನೂನುಬಾಹಿರ ಎಂದು ಅರ್ಜಿದಾರರು ವಾದಿಸಿದ್ದಾರೆ.
ಹಿಂದುಳಿದ ವರ್ಗಗಳ ಆಯೋಗ ಕಳೆದ ವಾರ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಕುರಿತು ಸರಕಾರಕ್ಕೆ ಮಧ್ಯಂತರ ವರದಿಯನ್ನು ಸಲ್ಲಿಸಿತ್ತು. ಆ ವರದಿಯನ್ನು ಪ್ರಶ್ನಿಸಿರುವ ಅರ್ಜಿದಾರರು ಲಿಂಗಾಯತ ವೀರಶೈವ ಒಳಪಂಗಡಗಳನ್ನು ಯಾವುದೇ ಪ್ರವರ್ಗಕ್ಕೆ ಸೇರಿಸಲು ಸಾಧ್ಯವಿಲ್ಲ ಮತ್ತು ಆ ಕುರಿತ ಮನವಿಯನ್ನು ಹಿಂದೆಯೇ ಸರಕಾರ ತಳ್ಳಿಹಾಕಿದೆ. ಆದರೂ ಇದೀಗ ಅಂತಹ ಪ್ರಯತ್ನ ನಡೆಸುತ್ತಿರುವುದರಿಂದ ಇತರೆ ಸಮುದಾಯಗಳಿಗೆ ಅನ್ಯಾಯವಾಗಲಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.












Click it and Unblock the Notifications