2ನೇ ಹಂತದ ಲೋಕಸಭಾ ಚುನಾವಣೆ : ಜಿದ್ದಾಜಿದ್ದಿನ 6 ಕ್ಷೇತ್ರಗಳು
Recommended Video

ಬೆಂಗಳೂರು, ಏಪ್ರಿಲ್ 09 : ಕರ್ನಾಟಕದಲ್ಲಿ 2ನೇ ಹಂತದ ಲೋಕಸಭಾ ಚುನಾವಣಾ ಕಣ ಅಂತಿಮಗೊಂಡಿದೆ. ಒಟ್ಟು 14 ಲೋಕಸಭಾ ಕ್ಷೇತ್ರಗಳಲ್ಲಿ ಏಪ್ರಿಲ್ 23ರಂದು ಮತದಾನ ನಡೆಯಲಿದೆ. 237 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
2ನೇ ಹಂತದ ಲೋಕಸಭಾ ಚುನಾವಣೆ ನಾಮಪತ್ರಗಳನ್ನು ವಾಪಸ್ ಪಡೆಯಲು ಸೋಮವಾರ ಕೊನೆಯ ದಿನವಾಗಿತ್ತು. 311 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಇವುಗಳಲ್ಲಿ 29 ತಿರಸ್ಕೃತವಾಗಿದ್ದು, 45 ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆದರು.
ಒಟ್ಟು 14 ಲೋಕಸಭಾ ಕ್ಷೇತ್ರಗಳಲ್ಲಿ 237 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬೆಳಗಾವಿ ಕ್ಷೇತ್ರದಲ್ಲಿ ಅತಿ ಹೆಚ್ಚು ಎಂದರೆ 57 ಅಭ್ಯರ್ಥಿಗಳು, ರಾಯಚೂರು ಕ್ಷೇತ್ರದಲ್ಲಿ ಅತಿ ಕಡಿಮೆ ಎಂದರೆ 5 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಏಪ್ರಿಲ್ 23ರಂದು ಮತದಾನ ನಡೆಯಲಿದೆ.
14 ಕ್ಷೇತ್ರಗಳಲ್ಲಿ ಇಬ್ಬರು ಕೇಂದ್ರ ಸಚಿವರು, ಲೋಕಸಭೆಯ ಕಾಂಗ್ರೆಸ್ ನಾಯಕರು ಸೇರಿ ಹಲವು ಘಟಾನುಘಟಿ ನಾಯಕರು ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. 2ನೇ ಹಂತದ ಚುನಾವಣೆಯಲ್ಲಿ ಜಿದ್ದಾಜಿದ್ದಿನ ಕಣವಾಗಿರುವ ಕ್ಷೇತ್ರಗಳು ಯಾವುವು ನೋಡಿ....

ಗುಲ್ಬರ್ಗ ಲೋಕಸಭಾ ಕ್ಷೇತ್ರ
ಗುಲ್ಬರ್ಗ ಲೋಕಸಭಾ ಕ್ಷೇತ್ರದ ಚುನಾವಣೆ ಜಿದ್ದಾಜಿದ್ದಿನಿಂದ ಕೂಡಿದೆ. ಲೋಕಸಭೆ ಕಾಂಗ್ರೆಸ್ ನಾಯಕ, ಸೋಲಿಲ್ಲದ ಸರದಾರ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ. ಸತತ ಎರಡು ಚುನಾವಣೆಗಳಲ್ಲಿ ಗೆದ್ದಿರುವ ಅವರು ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ಬಿಜೆಪಿಯಿಂದ ಡಾ.ಉಮೇಶ್ ಜಾಧವ್ ಅವರು ಕಣದಲ್ಲಿದ್ದಾರೆ. ಚಿಂಚೋಳಿ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದ ಉಮೇಶ್ ಜಾಧವ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಬಿಜೆಪಿ ಸೇರಿ ಖರ್ಗೆ ವಿರುದ್ಧ ಕಣಕ್ಕಿಳಿದಿದ್ದಾರೆ.

ಉತ್ತರ ಕನ್ನಡ ಕ್ಷೇತ್ರ
ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಪ್ರತಿನಿಧಿಸುವ ಉತ್ತರ ಕನ್ನಡ ಕ್ಷೇತ್ರದ ಚುನಾವಣೆಯೂ ಕುತೂಹಲ ಮೂಡಿಸಿದೆ. 5 ಬಾರಿ ಗೆದ್ದಿರುವ ಅನಂತ್ ಕುಮಾರ್ ಹೆಗಡೆ 6ನೇ ಬಾರಿಗೆ ಕಣದಲ್ಲಿದ್ದಾರೆ. ಕಾಂಗ್ರೆಸ್-ಜೆಡಿಎಸ್ನಿಂದ ಆನಂದ್ ಅಸ್ನೋಟಿಕರ್ ಅಭ್ಯರ್ಥಿ. ಸದಾ ವಿವಾದಾತ್ಮಕ ಹೇಳಿಕೆಗಳಿಂದ ಸುದ್ದಿ ಮಾಡುವ ಹೆಗಡೆ ಅದೃಷ್ಟ ಏನಾಗಲಿದೆ? ಕಾದು ನೋಡಬೇಕು.

ವಿಜಯಪುರ ಕ್ಷೇತ್ರ
ಕೇಂದ್ರ ಸಚಿವ ರಮೇಶ್ ಜಿಗಜಿಣಗಿ ಪ್ರತಿನಿಧಿಸುವ ವಿಜಯಪುರ ಕ್ಷೇತ್ರದ ಚುನಾವಣೆಯೂ ಕುತೂಹಲಕ್ಕೆ ಕಾರಣವಾಗಿದೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುನೀತಾ ದೇವಾನಂದ ಚೌವ್ಹಾಣ್ ಕಣದಲ್ಲಿದ್ದಾರೆ. ಕಾಂಗ್ರೆಸ್ ಜೆಡಿಎಸ್ ಪಕ್ಷಕ್ಕೆ ಕ್ಷೇತ್ರವನ್ನು ಬಿಟ್ಟುಕೊಟ್ಟಿದೆ.

ಬಾಗಲಕೋಟೆ ಕ್ಷೇತ್ರ
ಬಾಗಲಕೋಟೆ ಲೋಕಸಭಾ ಕ್ಷೇತ್ರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ಕ್ಷೇತ್ರ ಎಂಬ ಕಾರಣಕ್ಕೆ ಕುತೂಹಲಕ್ಕೆ ಕಾರಣವಾಗಿದೆ. ಬಾದಾಮಿ ಕ್ಷೇತ್ರದ ಶಾಸಕ ಸಿದ್ದರಾಮಯ್ಯ ಅವರು ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ವೀಣಾ ಕಾಶಪ್ಪನವರ್ ಅವರನ್ನು ಗೆಲ್ಲಿಸಿಕೊಂಡು ಬರುವರೇ ಕಾದು ನೋಡಬೇಕು. ಬಿಜೆಪಿಯಿಂದ ಹಾಲಿ ಸಂಸದ ಪಿ.ಸಿ.ಗದ್ದಿಗೌಡರ್ ಅಭ್ಯರ್ಥಿ.

ಶಿವಮೊಗ್ಗ ಕ್ಷೇತ್ರ
ಶಿವಮೊಗ್ಗ ಕ್ಷೇತ್ರದ ಚುನಾವಣೆಯೂ ಕುತೂಹಲಕ್ಕೆ ಕಾರಣವಾಗಿದೆ. ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ರಾಘವೇಂದ್ರ ಗೆಲುವು ಸಾಧಿಸಲಿದ್ದಾರೆಯೇ? ಎಂದು ಕಾದು ನೋಡಬೇಖು. ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಯಾಗಿ ಮಧು ಬಂಗಾರಪ್ಪ ಕಣದಲ್ಲಿದ್ದಾರೆ. ಇಬ್ಬರು ಮಾಜಿ ಮುಖ್ಯಮಂತ್ರಿಗಳ ಮಕ್ಕಳ ನಡುವಿನ ಸ್ಪರ್ಧೆ ಇದಾಗಿದೆ.

ದಾವಣಗೆರೆ ಕ್ಷೇತ್ರ
ದಾವಣಗೆರೆ ಕ್ಷೇತ್ರದ ಚುನಾವಣೆಯೂ ಕುತೂಹಲಕ್ಕೆ ಕಾರಣವಾಗಿದೆ. ಇದೇ ಮೊದಲ ಬಾರಿಗೆ ಶಾಮನೂರು ಶಿವಶಂಕರಪ್ಪ ಕುಟುಂಬದ ಸದಸ್ಯರು ಚುನಾವಣೆಗೆ ಸ್ಪರ್ಧೆ ಮಾಡುತ್ತಿಲ್ಲ. ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿ ಯಾರು ಎಂಬುದು ಬಹಳ ಗೊಂದಲಕ್ಕೆ ಕಾರಣವಾಗಿತ್ತು. ಅಂತಿಮವಾಗಿ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ.ಮಂಜಪ್ಪ ಅವರಿಗೆ ಟಿಕೆಟ್ ನೀಡಲಾಗಿದೆ.












Click it and Unblock the Notifications