ಶುಕ್ರವಾರದಿಂದ 2ನೇ ಪಿಯುಸಿ ಪರೀಕ್ಷೆ, 6 ಲಕ್ಷ ವಿದ್ಯಾರ್ಥಿಗಳಿಗೆ ಆಲ್ ದಿ ಬೆಸ್ಟ್
ಬೆಂಗಳೂರು, ಫೆಬ್ರವರಿ 28 : ಭಾರಿ ಭದ್ರತೆಯ ನಡುವೆ ದ್ವಿತೀಯ ಪಿಯುಸಿ ಪರೀಕ್ಷೆ ಶುಕ್ರವಾರದಿಂದ ಆರಂಭವಾಗಲಿದೆ. 6,73,606 ವಿದ್ಯಾರ್ಥಿಗಳು ಕರ್ನಾಟಕದಲ್ಲಿ ಪರೀಕ್ಷೆ ಬರೆಯಲಿದ್ದಾರೆ.
ಪದವಿ ಪೂರ್ವ ಶಿಕ್ಷಣ ಇಲಾಖೆ ದ್ವಿತೀಯ ಪಿಯುಸಿ ಪರೀಕ್ಷೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿದೆ. 'ಪರೀಕ್ಷಾ ಅಕ್ರಮ, ಪ್ರಶ್ನೆ ಪತ್ರಿಕೆ ಸೋರಿಕೆ ಆಗದಂತೆ ಕ್ರಮ ಕೈಗೊಳ್ಳಲಾಗಿದೆ' ಎಂದು ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್ ಹೇಳಿದ್ದಾರೆ.
ವಿದ್ಯಾರ್ಥಿಗಳು ಮನೆಯಿಂದ ಪರೀಕ್ಷಾ ಕೇಂದ್ರಕ್ಕೆ ತೆರಳಲು ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿ ಉಚಿತ ಪ್ರಯಾಣದ ವ್ಯವಸ್ಥೆ ಮಾಡಿವೆ. ವಿದ್ಯಾರ್ಥಿಗಳು ಹಾಲ್ ಟಿಕೆಟ್ ತೋರಿಸುವ ಮೂಲಕ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ.
ಅಕ್ರಮಗಳನ್ನು ತಡೆಯಲು ಪರೀಕ್ಷಾ ಕೇಂದ್ರದ 200 ಮೀಟರ್ ಪ್ರದೇಶದಲ್ಲಿ ಅನಧಿಕೃತ ವ್ಯಕ್ತಿಗಳ ಪ್ರವೇಶ ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ ಝೆರಾಕ್ಸ್ ಅಂಗಡಿಗಳನ್ನು ಮುಚ್ಚಲಾಗಿದೆ. ಪ್ರಶ್ನೆ ಪತ್ರಿಕೆ ಇರುವ ಸ್ಟ್ರಾಂಗ್ ರೂಂಗಳಿಗೆ ಸಶಸ್ತ್ರ ಪೊಲೀಸರು ಭದ್ರತೆ ನೀಡಿದ್ದಾರೆ.

ಎಷ್ಟು ವಿದ್ಯಾರ್ಥಿಗಳು
6,73,606 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿದ್ದಾರೆ. ಇವರಲ್ಲಿ 338868 ಬಾಲಕರು, 334738 ಬಾಲಕಿಯರು ಇದ್ದಾರೆ.
ಕಲಾ ವಿಭಾಗದಲ್ಲಿ 201022, ವಾಣಿಜ್ಯ ವಿಭಾಗದಲ್ಲಿ 254516, ವಿಜ್ಞಾನ ವಿಭಾಗದಲ್ಲಿ 218068 ವಿದ್ಯಾರ್ಥಿಗಳಿದ್ದಾರೆ.
ಕನ್ನಡ ಮಾಧ್ಯಮದಲ್ಲಿ 295452, ಇಂಗ್ಲಿಶ್ ಮಾಧ್ಯಮದಲ್ಲಿ 378154 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.

ಪರೀಕ್ಷಾ ಅಕ್ರಮ ತಡೆ
ಪದವಿ ಪೂರ್ವ ಶಿಕ್ಷಣ ಇಲಾಖೆ ಪರೀಕ್ಷೆಗಾಗಿ 1013 ಕೇಂದ್ರಗಳನ್ನು ತೆರೆದಿದೆ. ಅಕ್ರಮಗಳನ್ನು ತಡೆಯಲು 2026 ವಿಶೇಷ ಮೇಲ್ವಿಚಾರಕರ ತಂಡವನ್ನು ರಚನೆ ಮಾಡಲಾಗಿದೆ. ಜಿಲ್ಲಾ ಮಟ್ಟದಲ್ಲಿ ಮುಖ್ಯ ಅಧೀಕ್ಷಕರು 1013, ಸಹ ಅಧೀಕ್ಷಕರು 1028 ತಂಡ ರಚನೆ ಮಾಡಲಾಗಿದೆ.

ಎಲ್ಲರ ಮೇಲೆ ಹದ್ದಿನ ಕಣ್ಣು
ಮೂರು ವರ್ಷಗಳ ಹಿಂದೆ ಪರೀಕ್ಷೆ ಸಂದರ್ಭದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನಲೆಯಲ್ಲಿ ಗೃಹ ಇಲಾಖೆ ಹಲವು ಮಾರ್ಗಸೂಚಿಗಳನ್ನು ನೀಡಿದೆ. ಹಿಂದೆ ಪರೀಕ್ಷಾ ಅಕ್ರಮ ನಡೆಸಿದವರ ಮೇಲೆ ಕಣ್ಗಾವಲು ಇಡಲಾಗಿದೆ. ಪರೀಕ್ಷಾ ಅಕ್ರಮ ನಡೆಸಿದರೆ ಕೋಕಾ ಕಾಯ್ದೆಯಡಿ ಬಂಧಿಸಲಾಗುತ್ತದೆ.

ವಿದ್ಯಾರ್ಥಿಗಳಿಗೆ ಸೂಚನೆ
ಪರೀಕ್ಷಾ ಕೇಂದ್ರದ ಒಳಗೆ ಮೊಬೈಲ್, ಸ್ಮಾರ್ಟ್ ವಾಚ್ ಮತ್ತು ಇನ್ನಿತರ ಎಲೆಕ್ಟ್ರಾನಿಕ್ ಉಪಕರಣಗಳನ್ನು ತೆಗೆದುಕೊಂಡು ಹೋಗುವಂತಿಲ್ಲ. ಎಲೆಕ್ಟ್ರಾನಿಕ್ ಅಲ್ಲದ ಮಾಮೂಲಿ ಕೈಗಡಿಯಾರವನ್ನು ಕಟ್ಟಿಕೊಂಡು ಹೋಗಬಹುದು.












Click it and Unblock the Notifications