ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ಮರು ಪರೀಕ್ಷೆ ದಿನಾಂಕ ಪ್ರಕಟ
ಬೆಂಗಳೂರು, ಮಾರ್ಚ್ 22 : ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ಮರು ಪರೀಕ್ಷೆ ದಿನಾಂಕ ಪ್ರಕಟಗೊಂಡಿದೆ. ಮಾರ್ಚ್ 21ರ ಸೋಮವಾರ 1.4 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಆದರೆ, ಪ್ರಶ್ನೆ ಪತ್ರಿಕೆ ಸೋರಿಕೆಯಾದ ಕಾರಣ ಪರೀಕ್ಷೆ ರದ್ದುಗೊಳಿಸಿ, ಮರು ಪರೀಕ್ಷೆಗೆ ಆದೇಶ ನೀಡಲಾಗಿತ್ತು.
ಮಂಗಳವಾರ ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿ ನಡೆದ ಸಭೆಯ ಬಳಿಕ ಮರು ಪರೀಕ್ಷೆ ದಿನಾಂಕವನ್ನು ಘೋಷಣೆ ಮಾಡಲಾಗಿದೆ. ಮಾರ್ಚ್ 29ರ ಮಂಗಳವಾರ ರಸಾಯನಶಾಸ್ತ್ರ ಪರೀಕ್ಷೆ ನಡೆಯಲಿದೆ ಎಂದು ಇಲಾಖೆ ನಿರ್ದೇಶಕಿ ಪಲ್ಲವಿ ಅಕುರಾತಿ ಮಾಧ್ಯಮಗಳಿಗೆ ತಿಳಿಸಿದರು. [ಪ್ರಶ್ನೆ ಪತ್ರಿಕೆ ಸೋರಿಕೆ : ರಸಾಯನಶಾಸ್ತ್ರ ಪರೀಕ್ಷೆ ರದ್ದು]

'ನಮ್ಮಿಂದ ತಪ್ಪಾಗಿದೆ, ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಂಡರೂ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ವಿದ್ಯಾರ್ಥಿಗಳು ಆತಂಕಗೊಳ್ಳಬಾರದು. ಮಾ.29ರಂದು ಮರುಪರೀಕ್ಷೆ ನಡೆಸಲಾಗುತ್ತದೆ. ಪತ್ರಿಕೆ ಸೋರಿಕೆ ಬಗ್ಗೆ ಗೃಹ ಇಲಾಖೆ ಮತ್ತು ನಮ್ಮ ಇಲಾಖೆಯಿಂದಲೂ ತನಿಖೆ ನಡೆಯುತ್ತಿದೆ. ವರದಿ ಬಂದ ಬಳಿಕ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ' ಎಂದು ಪಲ್ಲವಿ ಅಕುರಾತಿ ಹೇಳಿದರು. [2016ನೇ ಸಾಲಿನ SSLC ಪರೀಕ್ಷೆ ವೇಳಾಪಟ್ಟಿ]
ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ ಹಿಂದೆ ಪ್ರಕಟಿಸಿದ ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಪ್ರಕಾರ ಮಾರ್ಚ್ 28ಕ್ಕೆ ಪರೀಕ್ಷೆಗಳು ಮುಗಿಯಬೇಕಾಗಿತ್ತು. ಆದರೆ, ರಸಾಯನಶಾಸ್ತ್ರ ಮರು ಪರೀಕ್ಷೆ ನಡೆಯುವುದರಿಂದ ಮಾರ್ಚ್ 29ರಂದು ಪರೀಕ್ಷೆ ಮುಕ್ತಾಯಗೊಳ್ಳಲಿದೆ.












Click it and Unblock the Notifications