ಕರ್ನಾಟಕದಲ್ಲಿ 15-18 ವರ್ಷದ 3.50 ಲಕ್ಷ ಮಕ್ಕಳಿಗೆ ಕೊವಿಡ್-19 ಲಸಿಕೆ
ಚಿಕ್ಕಬಳ್ಳಾಪುರ, ಜನವರಿ 5: ಕರ್ನಾಟಕದಲ್ಲಿ ಒಂದೇ ದಿನ 15 ರಿಂದ 18 ವರ್ಷದೊಳಗಿನ 3.50 ಲಕ್ಷ ಮಕ್ಕಳಿಗೆ ಕೊರೊನಾವೈರಸ್ ಲಸಿಕೆಯನ್ನು ವಿತರಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರ ನಗರದ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ಜಿಲ್ಲಾಡಳಿತ ಹಮ್ಮಿಕೊಂಡಿದ್ದ 15 ರಿಂದ 18 ವರ್ಷದೊಳಗಿನ ಮಕ್ಕಳ ಯುವ ಕೊವಿಡ್-19 ಲಸಿಕಾ ಮೇಳ ಉದ್ಘಾಟಿಸಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮಾವು ಮತ್ತು ಮಾರುಕಟ್ಟೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಕೆ.ವಿ.ನಾಗರಾಜು, ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ. ಶಿವಶಂಕರ್,ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಜಿ.ಕೆ ಮಿಥುನ್ ಕುಮಾರ್, ನಗರಸಭೆ ಅಧ್ಯಕ್ಷ ಆನಂದ್ ರೆಡ್ಡಿ ಬಾಬು, ಜಿಲ್ಲಾ ಆರೋಗ್ಯಾಧಿಕಾರಿ ಇಂದಿರಾ ಆರ್ ಕಬಾಡೆ, ತಹಸಿಲ್ದಾರ್ ಗಣಪತಿಶಾಸ್ತ್ರಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಿದ್ದರು.
ಭಾರತ; 50 ಸಾವಿರದ ಗಡಿ ದಾಟಿದ ಹೊಸ ಕೋವಿಡ್ ಪ್ರಕರಣಗಳು
ಸಿಲಿಕಾನ್ ಸಿಟಿಯಲ್ಲಿ ಕೊರೊನಾವೈರಸ್ ಹೆಚ್ಚಾಗಲು ಏನು ಕಾರಣ?
ಕಳೆದ ಎರಡು ಅಲೆಗಳನ್ನು ಸರ್ಕಾರ ಸಾರ್ವಜನಿಕರ ಸಹಕಾರದೊಂದಿಗೆ ಸಮರ್ಥವಾಗಿ ಎದುರಿಸಿದೆ. ಮೂರನೇ ಅಲೆಯಲ್ಲಿ ಕೊವಿಡ್-19 ರೂಪಾಂತರಿ ಒಮಿಕ್ರಾನ್ ವೇಗವಾಗಿ ಹರಡುತ್ತಿದೆ. ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ ಒಂದೇ ದಿನ ಮೂರು ಸಾವಿರ ಕೊವಿಡ್ ಪ್ರಕರಣ ವರದಿಯಾಗಿವೆ. ಬೆಂಗಳೂರು ಮಹಾನಗರದಲ್ಲಿ ಜನಸಾಂದ್ರತೆ ಅಧಿಕವಾಗಿದೆ. ವಿದೇಶ ಮತ್ತು ಹೊರ ರಾಜ್ಯಗಳಿಂದ ಜನರು ನೇರವಾಗಿ ಬೆಂಗಳೂರಿಗೆ ಆಗಮಿಸುವುದರಿಂದ ರಾಜಧಾನಿಯಲ್ಲಿ ಸೋಂಕು ವೇಗವಾಗಿ ಹರಡುತ್ತಿದೆ. ಆದ್ದರಿಂದ ಬೆಂಗಳೂರು ನಗರದ ಮೇಲೆ ಹೆಚ್ಚು ಗಮನವನ್ನು ಕೇಂದ್ರೀಕರಿಸಿ ಬೆಂಗಳೂರಿಗೇ ಪ್ರತ್ಯೇಕ ಕೊವಿಡ್ ನಿಯಂತ್ರಣ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ. ಅಲ್ಲಿ 1 ರಿಂದ 9ನೇ ತರಗತಿವರೆಗಿನ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಸುಧಾಕರ್ ತಿಳಿಸಿದ್ದಾರೆ.
ಕೊರೊನಾವೈರಸ್ 3ನೇ ಅಲೆ ಯಾವಾಗ ಕೊನೆ?
ಕೊರೊನಾವೈರಸ್ ಮೂರನೇ ಅಲೆ ಕೊನೆಯ ಅಲೆಯೂ ಆಗುವ ಸಾಧ್ಯತೆಗಳಿವೆ ಎಂದು ರಾಜ್ಯ ಮಟ್ಟದ ಕೊವಿಡ್ ತಾಂತ್ರಿಕ ಸಲಹಾ ಸಮಿತಿ ವರದಿ ನೀಡಿದೆ. ಅನೇಕ ತಜ್ಞರೂ ಸಹ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದು, ಇನ್ನು ಒಂದೂವರೆ ತಿಂಗಳಲ್ಲಿ ಮೂರನೇ ಅಲೆ ಕೊನೆಗೊಳ್ಳುವ ಸಾಧ್ಯತೆಗಳಿವೆ. ಇದನ್ನು ತಾಂತ್ರಿಕ ಸಲಹಾ ಸಮಿತಿ ಪುಷ್ಟೀಕರಿಸಿದ್ದು, ತಜ್ಞರೂ ಈ ಬಗ್ಗೆ ಸಹಮತ ವ್ಯಕ್ತಪಡಿಸಿದ್ದಾರೆ. ಆದರೆ, ಯಾವುದೇ ಕಾರಣಕ್ಕೂ ಮೈಮರೆಯುವ ಪ್ರಶ್ನೆ ಇಲ್ಲ. ಮಾಸ್ಕ್ ಧರಿಸುವುದು ಕಡ್ಡಾಯ. ವ್ಯಕ್ತಿಗತ ಅಂತರ ಮತ್ತು ಸ್ವಚ್ಛತೆಗೆ ಆದ್ಯತೆ ನೀಡುವ ಜೊತೆಗೆ ಸೋಂಕು ನಿವಾರಕ ದ್ರವ ಬಳಕೆಯನ್ನು ಮುಂದುವರೆಸಬೇಕು. ಇದರಲ್ಲಿ ರಾಜಿಯಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.
ಕೊರೊನಾವೈರಸ್ ಮೊದಲ ಡೋಸ್ ಲಸಿಕೆಯಲ್ಲಿ ದಾಖಲೆ
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಶೇ.100ರಷ್ಟು ಮಂದಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದೆ. ಶೇ.82ರಷ್ಟು ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ. ಎರಡನೇ ಡೋಸ್ ಅನ್ನು ಶೇ.100ರಷ್ಟು ಜನರಿಗೆ ನೀಡಲು ಜಿಲ್ಲೆಯಲ್ಲಿ ಲಸಿಕೆ ವಿತರಣೆ ವೇಗ ಹೆಚ್ಚಿಸಬೇಕು, ಆ ಮೂಲಕ ಕೊವಿಡ್ ಲಸಿಕೆ ವಿತರಣೆಯಲ್ಲಿ ಎರಡೂ ಡೋಸ್ ಅನ್ನು ಶೇ.100ರಷ್ಟು ಗುರಿ ಸಾಧನೆಯಾಗಲಿದೆ. ಆ ಮೂಲಕ ಚಿಕ್ಕಬಳ್ಳಾಪುರ ಜಿಲ್ಲೆಯು ರಾಜ್ಯದಲ್ಲೇ ಶೇ.100 ಲಸಿಕೆ ನೀಡಿದ ಮೊಟ್ಟಮೊದಲ ಜಿಲ್ಲೆಯಾಗಿ ಹೊರಹೊಮ್ಮಬೇಕು. ಕೊವಿಡ್-19 ಮುಕ್ತ ಜಿಲ್ಲೆಯನ್ನಾಗಿಸಲು ಜಿಲ್ಲಾಡಳಿತ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿದೆ ಎಂದು ಸುಧಾಕರ್ ತಿಳಿಸಿದ್ದಾರೆ.
ದೇಶದಲ್ಲಿ ಶೇ.33ರಷ್ಟು ಮಂದಿಗೆ ಕೊರೊನಾವೈರಸ್ ಲಸಿಕೆ
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಿನ್ನೆಯವರೆಗೆ 15 ರಿಂದ 18 ವರ್ಷದೊಳಗಿನ ಮಕ್ಕಳ ಲಸಿಕಾ ವಿತರಣೆಯಲ್ಲಿ ಒಟ್ಟು ಶೇ.33 ರಷ್ಟು ಗುರಿ ಸಾಧಿಸಲಾಗಿದ್ದು, ಮೊದಲ ದಿನ 7,851 ಮಕ್ಕಳಿಗೆ ಹಾಗೂ ಎರಡನೇ ದಿನ 13, 904 ಮಕ್ಕಳಿಗೆ ಲಸಿಕೆ ನೀಡಲಾಗಿದೆ. ಜಿಲ್ಲೆಯಲ್ಲಿ ಒಟ್ಟು 21,755 ಡೋಸ್ ಲಸಿಕೆ ನೀಡುವ ಮೂಲಕ ಉತ್ತಮ ಸಾಧನೆ ಮಾಡಿರುವ ಜಿಲ್ಲಾಡಳಿತಕ್ಕೆ ಅಭಿನಂದನೆಗಳು. ಜಿಲ್ಲೆಯಲ್ಲಿ ಒಟ್ಟು 65,648 ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದ್ದು, ಎರಡು ಮೂರು ದಿನಗಳಲ್ಲಿ ಶೇ.100 ಗುರಿ ಸಾಧಿಸಲು ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ. ಮಕ್ಕಳಿಗೆ ನೀಡುತ್ತಿರುವ ಲಸಿಕೆ ಕೊವ್ಯಾಕ್ಸಿನ್ ಆಗಿದೆ. ಮೊದಲ ಡೋಸ್ ಪಡೆದವರಿಗೆ 28 ದಿನಗಳ ನಂತರ ಎರಡನೇ ಡೋಸ್ ಲಸಿಕೆ ನೀಡಲಾಗುವುದು. ಮಕ್ಕಳ ಸುರಕ್ಷತೆ ಮತ್ತು ಭವಿಷ್ಯದ ದೃಷ್ಟಿಯಿಂದ ಉತ್ತಮ ಆರೋಗ್ಯಕ್ಕೆ ಒತ್ತು ನೀಡಬೇಕಾಗಿದ್ದು, ಈ ನಿಟ್ಟಿನಲ್ಲಿ ಲಸಿಕೆ ಪರಿಣಾಮಕಾರಿ ಮತ್ತು ಮುಖ್ಯವಾಗಲಿದೆ. ಶಾಲಾ ಕಾಲೇಜು ಮಕ್ಕಳ ಸುರಕ್ಷತೆ ಮತ್ತು ಆರೋಗ್ಯದ ವಿಚಾರದಲ್ಲಿ ಶಿಕ್ಷಕರ ಹೊಣೆಗಾರಿಕೆ ಅತ್ಯಂತ ಮಹತ್ವಾದ್ದಾಗಿದೆ ಎಂದು ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ.
Recommended Video