ಕರ್ನಾಟಕದಲ್ಲಿ ಸಂಕ್ರಾಂತಿಗೆ 3 ವೈದ್ಯಕೀಯ ಕಾಲೇಜು ಉದ್ಘಾಟನೆ:ಸುಧಾಕರ್
ಚಿಕ್ಕಬಳ್ಳಾಪುರ ಆಗಸ್ಟ್ 18: ಮುಂದಿನ ಮಕರ ಸಂಕ್ರಾಂತಿ (2023) ವೇಳೆಗೆ ಕಾಮಗಾರಿ ಪೂರ್ಣಗೊಳ್ಳಲಿರುವ ಹಾವೇರಿ, ಯಾದಗಿರಿ, ಚಿಕ್ಕಮಗಳೂರಿನ ವೈದ್ಯಕೀಯ ಕಾಲೇಜುಗಳನ್ನು ಮಾರ್ಚ್ ಹೊತ್ತಿಗೆ ಲೋಕಾರ್ಪಣೆ ಮಾಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು.
ಗುರುವಾರ ಚಿಕ್ಕಬಳ್ಳಾಪುರದ ಅರೂರು ಸಮೀಪ ನೂತನವಾಗಿ ನಿರ್ಮಾಣವಾಗುತ್ತಿರುವ ವೈದ್ಯಕೀಯ ಕಾಲೇಜು ಕಾಮಗಾರಿ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಮುಂದಿನ ಸಂಕ್ರಾಂತಿ ವೇಳೆಗೆ ಹಾವೇರಿ, ಯಾದಗಿರಿ ಮತ್ತು ಚಿಕ್ಕಮಗಳೂರು ಮೂರು ಜಿಲ್ಲೆಗಳ ವೈದ್ಯಕೀಯ ಕಾಲೇಜುಗಳ ಕಾಮಗಾರಿ ಪೂರ್ಣಗೊಳ್ಳಲಿದೆ. ಇವುಗಳಿಗೆ ಮಾರ್ಚ್ ತಿಂಗಳಲ್ಲಿ ಉದ್ಘಾಟಿಸಲು ಯೋಜಿಸಲಾಗಿದೆ ಎಂದು ಅವರು ತಿಳಿಸಿದರು.
ಕರ್ನಾಟಕದ ರಾಜ್ಯದ ದಾವಣಗೆರೆ, ವಿಜಯಪುರ, ಉಡುಪಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿಯೂ ಹೊಸದಾಗಿ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲಾಗುವುದು. ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ರಾಮನಗರ ಕಾಲೇಜು ನಿರ್ಮಾಣಕ್ಕೆ ಅನುದಾನ ನೀಡಲಿದೆ. ಚಿತ್ರದುರ್ಗ ಜಿಲ್ಲೆಗೆ ರಾಜ್ಯ ಸರ್ಕಾರ ಮತ್ತು ಡಿಎಂಎಫ್ಟಿ ಹಣ ಬಳಕೆ ಮಾಡಿ ಕಾಲೇಜು ಕಟ್ಟಡ ನಿರ್ಮಿಸಲಿದೆ ಎಂದರು.
9 ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜು
ಉದ್ದೇಶಿತ ಜಿಲ್ಲೆಗಳು ಅಲ್ಲದೇ ಇತರೇ 9 ಜಿಲ್ಲೆಗಳಲ್ಲಿಯೂ ಸಹ ಖಾಸಗಿ ಮತ್ತು ಸರ್ಕಾರದ ಸಹಭಾಗಿತ್ವದಲ್ಲಿ ವೈದ್ಯಕೀಯ ಕಾಲೇಜುಗಳ ನಿರ್ಮಾಣ ಮಾಡುವ ಚಿಂತನೆಯು ಸರ್ಕಾರಕ್ಕೆ ಇದೆ. ಈಗಾಲೇ ಬೆಂಗಳೂರಿನ ಶಿವಾಜಿನಗರದಲ್ಲಿ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜನ್ನು ಬಿ.ಎಸ್. ಯಡಿಯೂರಪ್ಪನವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಉದ್ಘಾಟಿಸಲಾಗಿದೆ. ಶೀಘ್ರದಲ್ಲಿಯೇ ಉಳಿದ ಕಾಲೇಜುಗಳ ಉದ್ಘಾಟಿಸಲಾಗುವುದು ಎಂದು ತಿಳಿಸಿದರು.
ವೈಧ್ಯಕೀಯ ಕಾಲೇಜು ಕಾಮಗಾರಿಗೆ ಚುರುಕು
ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವುದು ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರದ ಪ್ರಮುಖ ಗುರಿಯಾಗಿದೆ. ಈ ನಿಟ್ಟಿನಲ್ಲಿ ಹೊಸ ವೈದ್ಯಕೀಯ ಕಾಲೇಜುಗಳನ್ನು ಆರಂಭಿಸಲಾಗುತ್ತಿದೆ. ಈ ಸಂಬಂಧ ಕಾಮಗಾರಿ ಪ್ರಗತಿ ಪರಿಶೀಲಿಸಿದ ಅವರು ಮಳೆಯಿಂದ ಕಾಮಗಾರಿ ವಿಳಂಬ ಆಗಿದೆ.
ಕಳೆದ ಎರಡು ತಿಂಗಳು ಮಳೆ ಹೆಚ್ಚಾಗಿದ್ದರಿಂದ ಕಾಮಗಾರಿ ಮಂದಗತಿಯಲ್ಲಿ ಸಾಗಿತ್ತು. ಕಾಮಗಾರಿಯ ಗುಣಮಟ್ಟ ಉತ್ತಮವಾಗಿದೆ. ಈಗ ಕಾಮಗಾರಿಯ ವೇಗ ಹೆಚ್ಚಿಸಲು ಗುತ್ತಿಗೆದಾರರಿಗೆ ತಾಕೀತು ಮಾಡಲಾಗಿದ್ದು, ಈ ಸಂಬಂಧ ಒಂದು ಹಂತದ ಸಭೆ ನಡೆಸಲಾಗಿದೆ. ಅದರ ಪ್ರಗತಿ ಏನಾಗಿದೆ ಎಂದು ಇಂದು ಪರಿಶೀಲನೆ ನಡೆಸುತ್ತಿದ್ದೇವೆ ಎಂದು ತಿಳಿಸಿದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಬಿಜೆಪಿ ಸಂಸದೀಯ ಮಂಡಳಿ ಹಾಗೂ ಕೇಂದ್ರ ಚುನಾವಣಾ ಸಮಿತಿ ಸದಸ್ಯರಾಗಿ ಆಯ್ಕೆ ಮಾಡಲಾಗಿದೆ. ಯಡಿಯೂರಪ್ಪ ಅವರು ನಾಯಕತ್ವದಲ್ಲಿ ನಂಬಿಕೆ ಇಟ್ಟು ನಾವು ಪಕ್ಷಕ್ಕೆ ಬಂದಿದ್ದೇವೆ. ಅವರಿಗೆ ಅತ್ಯುನ್ನತ ಹುದ್ದೆ ನೀಡಿರುವುದು ಖುಷಿ ತಂದಿದೆ ಎಂದು ಸುದ್ದಿಗಾರರಿಗೆ ಸುಧಾಕರ್ ಉತ್ತರಿಸಿದರು.
ಕಾಂಗ್ರೆಸ್ ಲಿಂಗಾಯಿತರನ್ನು ಸಿಎಂ ಮಾಡಲಿ
ಯಡಿಯೂರಪ್ಪ ಕುರಿತು ಎಂ.ಬಿ. ಪಾಟೀಲ್ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ರಾಹುಲ್ ಗಾಂಧಿ ಅವರು ಈ ಬಾರಿ ರಾಜ್ಯದ ಮುಖ್ಯಮಂತ್ರಿ ಸ್ಥಾನವನ್ನು ಲಿಂಗಾಯಿತರಿಗೇಕೆ ನೀಡಬಾರದು. ಕಾಂಗ್ರೆಸ್ ನಲ್ಲಿ ಹಲವು ವರ್ಷಗಳಿಂದ ಲಿಂಗಾಯಿತ ಸಮುದಾಯದ ಅಭ್ಯರ್ಥಿ ಮುಖ್ಯಮಂತ್ರಿಯಾಗಿಲ್ಲ. ಹಾಗಾಗಿ ಎಂ.ಬಿ. ಪಾಟೀಲ್ ಅವರನ್ನೇ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಲಿ ಎಂದು ಸವಾಲು ಹಾಕಿದರು.
ಯಡಿಯೂರಪ್ಪ ನಡೆಸಿಕೊಳ್ಳವ ಬಗ್ಗೆ ಅರಿವಿದೆ
ಬಿಜೆಪಿಯಲ್ಲಿ ಯಾರು ಮುಖ್ಯಮಂತ್ರಿಯಾಗಬೇಕು ಎಂಬುದು ಬಿಜೆಪಿ ಆಂತರಿಕ ವಿಚಾರ, ಅದೇ ರೀತಿಯಲ್ಲಿ ಕಾಂಗ್ರೆಸ್ ನಲ್ಲಿ ಯಾರು ಮುಖ್ಯಮಂತ್ರಿಯಾಗಬೇಕು ಎಂಬುದು ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರ. ಹಾಗಾಗಿ ಈ ವಿಚಾರದ ಬಗ್ಗೆ ಯಾರೂ ಮಾತನಾಡಬೇಕಾದ ಅಗತ್ಯವಿಲ್ಲ. ಬಿಎಸ್ ವೈ ಅವರನ್ನು ಹೇಗೆ ನಡೆಸಿಕೊಳ್ಳಬೇಕು ಎಂಬುದು ಪಕ್ಷದ ವರಿಷ್ಠರೂ ಸೇರಿದಂತೆ ಪ್ರತಿಯೊಬ್ಬರಿಗೂ ಅರಿವಿದೆ. ಅವರ ಮಾರ್ಗದರ್ಶನದಲ್ಲಿ ಪಕ್ಷ ಕಟ್ಟಲಾಗುವುದು. ಅವರ ಗೌರವಕ್ಕೆ, ಸ್ಥಾನಮಾನಕ್ಕೆ ಕುಂದು ಬಾರದಂತೆ ನಡೆದುಕೊಳ್ಳಲಾಗುವುದು ಎಂದರು.
Recommended Video