40% ಕಮೀಷನ್; ಗುತ್ತಿಗೆದಾರರ ಸಂಘದ ಅಧ್ಯಕ್ಷ ಮತ್ತಿತರರಿಗೆ ವಾರೆಂಟ್
ಬೆಂಗಳೂರು, ಡಿಸೆಂಬರ್ 23; ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡಿದ್ದ ಶೇ 40ರಷ್ಟು ಕಮೀಷನ್ ವಿವಾದಕ್ಕೆ ಹೊಸ ತಿರುವು ಸಿಕ್ಕಿದೆ. ಕಮೀಷನ್ ಆರೋಪ ಮಾಡಿದ್ದವರಿಗೆ ಇದೀಗ ಕೋರ್ಟ್ ವಾರೆಂಟ್ ಜಾರಿ ಮಾಡಿದ್ದು, ಅವರು ಇದೀಗ ಕೋರ್ಟ್ ಮುಂದೆ ಹಾಜರಾಗಲೇಬೇಕಾಗಿದೆ.
ತೋಟಗಾರಿಕೆ ಮತ್ತು ಯೋಜನಾ ಸಚಿವ ಮುನಿರತ್ನ ಅವರ ವಿರುದ್ಧ ಶೇ 40ರಷ್ಟು ಕಮೀಷನ್ ಆರೋಪ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ಸೇರಿದಂತೆ 19 ಮಂದಿಗೆ ಬೆಂಗಳೂರಿನ 8ನೇ ಎಸಿಎಂಎಂ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.
ಹಾಗಾಗಿ ಸಂಘದ ಪದಾಧಿಕಾರಿಗಳು ಕೋರ್ಟ್ ಮುಂದೆ ಹಾಜರಾಗಿ ಸಾಕ್ಷ್ಯ ನುಡಿಯಲೇಬೇಕು ಇಲ್ಲವಾದರೆ ದಂಡನೆಗೆ ಗುರಿಯಾಗಬೇಕಾಗುತ್ತದೆ. ಮುನಿರತ್ನ ದಾಖಲಿಸಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆ ನಡೆಸಿದ ನ್ಯಾಯಾಧೀಶ ಕೆ. ಎನ್. ಶಿವಕುಮಾರ್ ಅವರು ಈ ಆದೇಶ ಮಾಡಿದ್ದಾರೆ.

ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ, ಉಪಾಧ್ಯಕ್ಷರಾದ ವಿ. ಕೃಷ್ಣ ರೆಡ್ಡಿ, ಕಾರ್ಯದರ್ಶಿ ಜಿ. ಎಂ. ರವೀಂದ್ರ ಮತ್ತು ಖಜಾಂಚಿ ಎಚ್. ಎಸ್. ನಟರಾಜ್ ಸೇರಿದಂತೆ ಪ್ರಕರಣದ ಇನ್ನಿತರ ಆರೋಪಿಗಳು ದೂರುದಾರ ಮುನಿರತ್ನ ವಿರುದ್ಧ ನೀಡಿರುವ ಹೇಳಿಕೆಗಳು ಮಾಧ್ಯಮಗಳಲ್ಲಿ ಪ್ರಕಟವಾಗಿದೆ.
ಅದು ದೂರುದಾರರ ವರ್ಚಸ್ಸಿಗೆ ಮೇಲ್ನೋಟಕ್ಕೆ ಧಕ್ಕೆ ಉಂಟು ಮಾಡಿದೆ ಎಂದು 2022ರ ನ.16ರಂದು ನ್ಯಾಯಾಲಯ ಅಭಿಪ್ರಾಯಪಟ್ಟಿತ್ತು. ಜತೆಗೆ, ಕೆಂಪಣ್ಣ ಸೇರಿದಂತೆ ದೂರಿನ 19 ಆರೋಪಿಗಳಿಗೆ ಸಮನ್ಸ್ ಜಾರಿ ಮಾಡಿ ವಿಚಾರಣೆಯನ್ನು ಡಿ.22ಕ್ಕೆ ಮುಂದೂಡಿತ್ತು.
ಅದರಂತೆ ಮೊಕದ್ದಮೆ ಮತ್ತೆ ವಿಚಾರಣೆಗೆ ಬಂದಾಗ ಕೆಂಪಣ್ಣ ಹಾಗೂ ಇತರೆ ಎಲ್ಲಾ ಆರೋಪಿಗಳು ವಿಚಾರಣೆಗೆ ಗೈರಾಗಿದ್ದರು. ಇದರಿಂದ ಎಲ್ಲಾ 19 ಮಂದಿ ಆರೋಪಿಗಳಿಗೆ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದ ನ್ಯಾಯಾಲಯವು ವಿಚಾರಣೆಯನ್ನು 2020ರ ಜ.19ಕ್ಕೆ ಮುಂದೂಡಿತು.
ತಮ್ಮ ವಿರುದ್ಧ ಶೇ.40ರಷ್ಟು ಕಮೀಷನ್ ಆರೋಪ ಮಾಡಿದ ಹಿನ್ನೆಲೆಯಲ್ಲಿ ಸಚಿವ ಮುನಿರತ್ನ ಅವರು ಗುತ್ತಿಗೆದಾರರ ಸಂಘದ ಕೆಂಪಣ್ಣ ಹಾಗೂ ಇತರೆ 18 ಮಂದಿ ಪದಾಧಿಕಾರಿಗಳು ಮತ್ತು ಸದಸ್ಯರ ವಿರುದ್ಧ ಪ್ರತ್ಯೇಕವಾಗಿ ಕ್ರಿಮಿನಲ್ ಮಾನಹಾನಿ ಮೊಕದ್ದಮೆ ಹೂಡಿದ್ದರು. ಜೊತೆಗೆ ಬಿಜೆಪಿ ಇದನ್ನು ಗಂಭೀರವಾಗಿ ಪರಿಗಣಿಸಿ ತನಿಖೆಗೂ ಆದೇಶ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.












Click it and Unblock the Notifications