ಕರ್ನಾಟಕ; 4,113 ಟನ್ ಕೋವಿಡ್ ತ್ಯಾಜ್ಯ ಸಂಗ್ರಹ
ಬೆಂಗಳೂರು, ಆಗಸ್ಟ್ 24; ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲು ವೈದ್ಯರು ಮಾಸ್ಕ್, ಪಿಪಿಇ ಕಿಟ್ ಸೇರಿದಂತೆ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುತ್ತಾರೆ. ಇದರಿಂದಾಗಿ ಕೋವಿಡ್ ತ್ಯಾಜ್ಯಗಳ ಉತ್ಪಾದನೆ ಸಹ ಹೆಚ್ಚಿದೆ. ಈ ತ್ಯಾಜ್ಯಗಳನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕು ಎಂದು ಮಾರ್ಗಸೂಚಿ ಸಹ ಇದೆ.
ಕರ್ನಾಟಕದಲ್ಲಿ 2020ರ ಜನವರಿ ಇಂದ ಜೂನ್ 2021ರ ತನಕ 4,113 ಟನ್ ಕೋವಿಡ್ ತ್ಯಾಜ್ಯ ಉತ್ಪಾದನೆಯಾಗಿದೆ ಎಂದು ಕರ್ನಾಟಕ ಸರ್ಕಾರ ಹೇಳಿದೆ. ಈ ಕುರಿತು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣಕ್ಕೆ ಮಾಹಿತಿಯನ್ನು ನೀಡಿದೆ.
ಮೇ 2021ರಲ್ಲಿ 587 ಟನ್ ಕೋವಿಡ್ ತ್ಯಾಜ್ಯ ಉತ್ಪತ್ತಿಯಾಗಿದೆ. ಉಳಿದ ತಿಂಗಳುಗಳಿಗೆ ಹೋಲಿಕೆ ಮಾಡಿದಲ್ಲಿ ಇದು ಅತ್ಯಧಿಕವಾಗಿದೆ. ಕೋವಿಡ್ ತ್ಯಾಜ್ಯದ ವೈಜ್ಞಾನಿಕ ವಿಲೇವಾರಿಗೆ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ ಎಂದು ತಿಳಿಸಲಾಗಿದೆ.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ರಾಜ್ಯದಲ್ಲಿ 36,021 ಆರೋಗ್ಯ ಆರೈಕೆ ಕೇಂದ್ರಗಳನ್ನು ಗುರುತಿಸಿದೆ. ಇವುಗಳಿಂದ ಪ್ರತಿದಿನ 77.54 ಟನ್ನಷ್ಟು ಜೈವಿಕ ವೈದ್ಯಕೀಯ ತ್ಯಾಜ್ಯ ಸಂಗ್ರಹವಾಗುತ್ತದೆ. ಅದನ್ನು 72 ಸಾಮಾನ್ಯ ಜೈವಿಕ ವೈದ್ಯಕೀಯ ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ವಿಲೇವಾರಿ ಮಾಡಲಾಗುತ್ತದೆ ಎಂದು ನ್ಯಾಯಾಧೀಕರಣಕ್ಕೆ ಮಾಹಿತಿ ನೀಡಲಾಗಿದೆ.
ರಾಷ್ಟ್ರೀಯ ಹಸಿರು ನ್ಯಾಯಾಧೀಕರಣದ ಮುಖ್ಯಸ್ಥ ನ್ಯಾಯಮೂರ್ತಿ ಆದರ್ಶ ಕುಮಾರ್ ಘೋಯಲ್ ಎಲ್ಲಾ ರಾಜ್ಯಗಳಿಗೆ ಕೋವಿಡ್ ತ್ಯಾಜ್ಯಗಳ ವಿಲೇವಾರಿ ಮತ್ತು ಸಂಸ್ಕರಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಎಲ್ಲಾ ರಾಜ್ಯಗಳಿಗೆ ಸೂಚನೆ ನೀಡಿತ್ತು. ನ್ಯಾಯಾಧೀಕರಣಕ್ಕೆ ಸರ್ಕಾರ ತ್ಯಾಜ್ಯ ಉತ್ಪಾದನೆ ಬಗ್ಗೆ ಮಾಹಿತಿಯನ್ನು ನೀಡಿದೆ.
ಕೋವಿಡ್ ತ್ಯಾಜ್ಯಗಳ ವಿಲೇವಾರಿ, ಸಂಸ್ಕರಣೆ ಬಗ್ಗೆ ನಿಗಾವಹಿಸಬೇಕು. ಎಲ್ಲೆಂದರಲ್ಲಿ ತ್ಯಾಜ್ಯಗಳನ್ನು ಬಿಸಾಡಿದರೆ ಅದು ಜನರ ಆರೋಗ್ಯದ ಮೇಲೆ ಮತ್ತು ಪರಿಸರದ ಮೇಲೆ ದುಷ್ಪರಿಣಾಮ ಬೀರಲಿದೆ ಎಂದು ನ್ಯಾಯಾಧೀಕರಣ ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿತ್ತು.
ರಾಜ್ಯದ ಇಲಾಖೆಗಳು ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿಗಳಿಗೆ ನ್ಯಾಯಾಧೀಕರಣ ಕೋವಿಡ್ ತ್ಯಾಜ್ಯವನ್ನು ಬಯೋಮೆಡಿಕಲ್ ವೇಸ್ಟ್ ಮ್ಯಾನೇಜ್ಮೆಂಟ್ ಕಾಯ್ದೆ 2016ರ ಅನ್ವಯ ಸಂಸ್ಕರಣೆ ಮಾಡುವ ಕುರಿತು ಕ್ರಮ ಕೈಗೊಳ್ಳಬೇಕು, ನ್ಯಾಯಾಧೀಕರಣಕ್ಕೆ ಈ ಕುರಿತು ವರದಿ ನೀಡಬೇಕು ಸೂಚನೆ ನೀಡಿತ್ತು.
ಕೋವಿಡ ತ್ಯಾಜ್ಯಗಳ ವಿಲೇವಾರಿ ಮತ್ತು ಸಂಸ್ಕರಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ತ್ಯಾಜ್ಯ ವಿಲೇವಾರಿ ಮತ್ತು ಸಂಸ್ಕರಣೆ ಮಾಡುವ ಸಿಬ್ಬಂದಿಗಳ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಬೇಕು ಎಂದು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸೂಚಿಸಿತ್ತು.
ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡುವ ಜೊತೆಗೆ ಆಸ್ಪತ್ರೆ ಸಿಬ್ಬಂದಿಗಳಿಗೆ ವೆಂಟಿಲೇಟರ್ ನಿರ್ವಹಣೆ, ಜೈವಿಕ ವೈದ್ಯಕೀಯ ತ್ಯಾಜ್ಯ ನಿರ್ವಹಣೆ ಬಗ್ಗೆಯೂ ಆನ್ಲೈನ್ ತರಬೇತಿಗಳನ್ನು ಆಯೋಜನೆ ಮಾಡಲಾಗಿತ್ತು. ಮುಂಚೂಣಿಯ ವೈದ್ಯಕೀಯ ಕಾರ್ಯಕರ್ತರು ತರಬೇತಿ ಶಿಬಿರದಲ್ಲಿ ಪಾಲ್ಗೊಂಡಿದ್ದರು ಎಂದು ಕೇಂದ್ರ ಸರ್ಕಾರ ಹೇಳಿದೆ.
ಆಸ್ಪತ್ರೆಗಳ ಕೋವಿಡ ವಾರ್ಡ್ಗಳಲ್ಲಿ ಸಂಗ್ರಹವಾಗುವ ತ್ಯಾಜ್ಯಗಳು ಒಂದು ಕಡೆ. ಮತ್ತೊಂದು ಕಡೆ ಅಂತ್ಯ ಸಂಸ್ಕಾರದ ವೇಳೆಯಲ್ಲಿ ಸಿಬ್ಬಂದಿಗಳು ಪಿಪಿಇ ಕಿಟ್, ಗ್ಲೌಸ್, ಮಾಸ್ಕ್ ಧರಿಸುತ್ತಿದ್ದರು. ಅಂತ್ಯ ಸಂಸ್ಕಾರ ಪೂರ್ಣಗೊಂಡ ಬಳಿಕ ಇವುಗಳು ಸಹ ತ್ಯಾಜ್ಯವಾಗಿ ಪರಿವರ್ತನೆಯಾಗುತ್ತಿದ್ದವು.
ಪ್ರಸ್ತುತ ಕರ್ನಾಟಕದಲ್ಲಿ ಕೋವಿಡ್ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಸೋಮವಾರದ ವರದಿಯಂತೆ ರಾಜ್ಯದಲ್ಲಿ 1151 ಹೊಸ ಪ್ರಕರಣ ಪತ್ತೆಯಾಗಿದೆ. 24 ಗಂಟೆಯಲ್ಲಿ 1442 ಜನರು ಗುಣಮುಖರಾಗಿದ್ದು, 10 ಜನರು ಮೃತಪಟ್ಟಿದ್ದಾರೆ. ರಾಜ್ಯದ ಸಕ್ರಿಯ ಪ್ರಕರಣಗಳ ಸಂಖ್ಯೆ 20,255 ಆಗಿದೆ.












Click it and Unblock the Notifications