ಉಪ ಚುನಾವಣೆ : ಗುಪ್ತಚರ ಇಲಾಖೆ ವರದಿಯಲ್ಲಿ ಕಾಂಗ್ರೆಸ್ಸಿಗೆ ಭಾರೀ ಆಘಾತ
Recommended Video

ಬೆಂಗಳೂರು, ಅಕ್ಟೋಬರ್ 28 : 5 ಕ್ಷೇತ್ರಗಳ ಉಪ ಚುನಾವಣೆ ಬಗ್ಗೆ ಗುಪ್ತಚರ ಇಲಾಖೆಯ ವರದಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಕೈ ಸೇರಿದೆ. ಕಾಂಗ್ರೆಸ್ ಪಕ್ಷ ಯಾವುದೇ ಕ್ಷೇತ್ರದಲ್ಲಿ ಜಯಗಳಿಸುವುದಿಲ್ಲ ಎಂದು ವರದಿ ಹೇಳಿದೆ.
ನವೆಂಬರ್ 3ರಂದು ಮಂಡ್ಯ, ಶಿವಮೊಗ್ಗ ಮತ್ತು ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ನಡೆಯಲಿದೆ. ರಾಮನಗರ ಮತ್ತು ಜಮಖಂಡಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯೂ ನಡೆಯಲಿದ್ದು, ನವೆಂಬರ್ 6ರಂದು ಫಲಿತಾಂಶ ಪ್ರಕಟವಾಗಲಿದೆ.
ಉಪ ಚುನಾವಣೆಯ ಹಿನ್ನಲೆಯಲ್ಲಿ ಗುಪ್ತಚರ ಇಲಾಖೆ ಮಾಹಿತಿ ಸಂಗ್ರಹಿಸಿದ್ದು, ಮುಖ್ಯಮಂತ್ರಿ, ಗುಪ್ತಚರ ಇಲಾಖೆ ಜವಾಬ್ದಾರಿಯನ್ನು ಹೊತ್ತಿರುವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ವರದಿಯನ್ನು ನೀಡಿದೆ. ಫಲಿತಾಂಶದ ಬಗ್ಗೆ ವರದಿಯಲ್ಲಿ ಉಲ್ಲೇಖಿಸಲಾಗಿದೆ.
ವರದಿ ನೋಡಿದ ಬಳಿಕ ಎಚ್.ಡಿ.ಕುಮಾರಸ್ವಾಮಿ ಅವರು ಶಿವಮೊಗ್ಗದಲ್ಲಿ ಹೆಚ್ಚು ದಿನ ಪ್ರಚಾರ ನಡೆಸಲು ಮುಂದಾಗಿದ್ದಾರೆ. ಸಿದ್ದರಾಮಯ್ಯ ಅವರು ಜಮಖಂಡಿ ಕ್ಷೇತ್ರದತ್ತ ಹೆಚ್ಚು ಗಮನಹರಿಸುವ ಸಾಧ್ಯತೆ ಇದೆ.....ವರದಿಯಲ್ಲಿ ಏನಿದೆ? ಚಿತ್ರಗಳಲ್ಲಿ ನೋಡಿ...

ವರದಿಯಲ್ಲಿ ಏನಿದೆ?
ಗುಪ್ತಚರ ಇಲಾಖೆ ವರದಿಯ ಅನ್ವಯ ಐದು ಕ್ಷೇತ್ರಗಳ ಪೈಕಿ ಬಿಜೆಪಿ 3 ಮತ್ತು ಜೆಡಿಎಸ್ 2 ಕ್ಷೇತ್ರಗಳಲ್ಲಿ ಜಯಗಳಿಸಲಿದೆ. ಬಳ್ಳಾರಿ ಮತ್ತು ಜಮಖಂಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆದರೆ, ಪಕ್ಷ ಯಾವ ಕ್ಷೇತ್ರದಲ್ಲಿಯೂ ಜಯಗಳಿಸುವುದಿಲ್ಲ.

ಯಾವ ಕ್ಷೇತ್ರದಲ್ಲಿ ಯಾರಿಗೆ ಗೆಲುವು?
ಬಳ್ಳಾರಿ, ಶಿವಮೊಗ್ಗ ಲೋಕಸಭಾ ಉಪ ಚುನಾವಣೆಯಲ್ಲಿ ಮತ್ತು ಜಮಖಂಡಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸಲಿದೆ.
ರಾಮನಗರ ವಿಧಾನಸಭೆ ಮತ್ತು ಮಂಡ್ಯ ಲೋಕಸಭಾ ಉಪ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಜಯಗಳಿಸಲಿದೆ ಎಂದು ಗುಪ್ತಚರ ಇಲಾಖೆ ಹೇಳಿದೆ.

ಜೆಡಿಎಸ್ಗೆ ಬೆಂಬಲ
ಕಾಂಗ್ರೆಸ್ ಉಪ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದೆ. ಶಿವಮೊಗ್ಗ, ಮಂಡ್ಯ, ರಾಮನಗರದಲ್ಲಿ ಪಕ್ಷ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ. ಆದರೆ, ಬಳ್ಳಾರಿ ಮತ್ತು ಜಮಖಂಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿದ್ದು, ಅಲ್ಲಿ ಜೆಡಿಎಸ್ ಕಾಂಗ್ರೆಸ್ಗೆ ಬೆಂಬಲ ನೀಡಿದೆ.

ಕುಮಾರಸ್ವಾಮಿ ತಂತ್ರ ಬದಲು
ಶಿವಮೊಗ್ಗ ಲೋಕಸಭಾ ಕ್ಷೇತ್ರವನ್ನು ಗೆಲ್ಲಬೇಕು ಎಂದು ಜೆಡಿಎಸ್ ಪಣ ತೊಟ್ಟಿದೆ. ಆದ್ದರಿಂದ, ಗುಪ್ತಚರ ಇಲಾಖೆ ವರದಿ ನೋಡಿದ ಬಳಿಕ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಶಿವಮೊಗ್ಗದಲ್ಲಿ ಹೆಚ್ಚುದಿನ ಪ್ರಚಾರ ನಡೆಸಲು ತೀರ್ಮಾನ ಕೈಗೊಂಡಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಶಿವಮೊಗ್ಗದಲ್ಲಿ ಈಗಾಗಲೇ ಒಂದು ಹಂತದ ಪ್ರಚಾರ ಮುಗಿಸಿದ್ದಾರೆ.

ಸಿದ್ದರಾಮಯ್ಯ ಪ್ರಚಾರ
2018ರ ಮೇ ತಿಂಗಳಿನಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ನ ಸಿದ್ದು ನ್ಯಾಮಗೌಡ ಅವರು ಜಮಖಂಡಿ ಕ್ಷೇತ್ರದಲ್ಲಿ 49,245 ಮತಗಳನ್ನು ಪಡೆದು ಜಯಗಳಿಸಿದ್ದರು. ಆದರೆ, ಚುನಾವಣೆ ನಡೆದ ಕೆಲವೇ ದಿನಗಳಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಅವರು ಮೃತಪಟ್ಟಿದ್ದು, ಉಪ ಚುನಾವಣೆ ಎದುರಾಗಿದೆ.
ಜಮಖಂಡಿ ಕ್ಷೇತ್ರದಲ್ಲಿ ಬಿಜೆಪಿಯ ಶ್ರೀಕಾಂತ್ ಕುಲಕರ್ಣಿ ಗೆಲುವು ಸಾಧಿಸಲಿದ್ದಾರೆ ಎಂದು ಗುಪ್ತಚರ ಇಲಾಖೆ ಹೇಳಿದೆ. ಆದ್ದರಿಂದ, ಸಿದ್ದರಾಮಯ್ಯ ಅವರು ಕ್ಷೇತ್ರವನ್ನು ಉಳಿಸಿಕೊಳ್ಳಲು ಹೆಚ್ಚು ಪ್ರಚಾರ ನಡೆಸುವ ಸಾಧ್ಯತೆ ಇದೆ.











Click it and Unblock the Notifications