ಸಿಲಿಂಡರ್ ಸ್ಪೋಟ; ಮೃತರ ಕುಟುಂಬಕ್ಕೆ 5 ಲಕ್ಷ ರೂ.ಗಳ ಪರಿಹಾರ: ಸಿದ್ದರಾಮಯ್ಯ ಘೋಷಣೆ
ಬೆಂಗಳೂರು, ಆಗಸ್ಟ್ 15: ವಿಲ್ಸನ್ ಗಾರ್ಡನ್ನ ಚಿನ್ನಯ್ಯಪಾಳ್ಯದಲ್ಲಿ ನಡೆದ ನಿಗೂಢ ಸ್ಫೋಟದಿಂದಾಗಿ ಸಾವನ್ನಪ್ಪಿರುವ ಬಾಲಕನ ಕುಟುಂಬಕ್ಕೆ 5 ಲಕ್ಷ ಪರಿಹಾರ ಹಾಗೂ ಗಾಯಗೊಂಡಿರುವ 10 ಮಂದಿಗೆ ಸರ್ಕಾರದಿಂದಲೇ ಚಿಕಿತ್ಸೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಆಡುಗೋಡಿ ಬಳಿಯ ಚಿನ್ನಯ್ಯನ ಪಾಳ್ಯ ದಲ್ಲಿ ಸಂಭವಿಸಿದ ಸಿಲಿಂಡರ್ ಸ್ಫೋಟದ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಸಿಲಿಂಡರ್ ಸ್ಫೋಟದಲ್ಲಿ ಹಾನಿಗೀಡಾಗಿರುವ ಮನೆಗಳನ್ನು ಕೂಡಲೇ ದುರಸ್ತಿ ಮಾಡಿಕೊಡುವಂತೆ ಬಿಬಿಎಂಪಿ ಆಯುಕ್ತರಿಗೆ ಸೂಚಿಸಲಾಗಿದೆ. ಒಂಭತ್ತು ಜನ ಗಾಯಾಳುಗಳಾಗಿದ್ದು ಒಂದು ಸಾವು ಸಂಭವಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮುಬಾರಕ್ ಅವರ ಕುಟುಂಬದವರಿಗೆ 5 ಲಕ್ಷ ರೂ.ಗಳ ಪರಿಹಾರವನ್ನು ನೀಡಲಾಗಿದೆ. ಗಾಯಾಳುಗಳಿಗೆ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಸುತ್ತ ಗಾಯಗಳಾಗಿರುವ ಕಸ್ತೂರಮ್ಮ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. 13 ಮನೆಗಳು ಹಾನಿಗೀಡಾಗಿದ್ದು ಅದನ್ನು ದುರಸ್ತಿ ಮಾಡಲಾಗುವುದು. ನರಸಮ್ಮ ಬದುಕುಳಿಯುವ ಸಾಧ್ಯತೆಗಳಿವೆ ಎಂದು ಮುಖ್ಯಮಂತ್ರಿಗಳು ಭರವಸೆ ವ್ಯಕ್ತಪಡಿಸಿದರು. ಪೊಲೀಸರು, ಅಗ್ನಿ ಶಾಮಕ ದಳ, ಗೃಹ ಇಲಾಖೆಯವರು ಪರಿಶೀಲಿಸುತ್ತಿದ್ದು, ತ್ಯಾಜ್ಯ ವಿಲೇವಾರಿಯಾದ ನಂತರ ವರದಿ ಬಂದ ಮೇಲೆ ಘಟನೆಗೆ ನಿಜವಾದ ಕಾರಣ ತಿಳಿಯಲಿದೆ. ಮೇಲ್ನೋಟಕ್ಕೆ ಸಿಲಿಂಡರ್ ಸ್ಫೋಟವಾಗಿದೆ ಎಂದು ತಿಳಿದುಬಂದಿದೆ ಎಂದರು.
ದುರದೃಷ್ಟಕರ ಘಟನೆ ನಡೆದಿದೆ. ಮೇಲ್ನೋಟಕ್ಕೆ ಸಿಲಿಂಡರ್ ಸ್ಫೋಟವಾಗಿರಬಹುದು ಎಂದು ಕಂಡು ಬಂದಿದೆ. ಪೊಲೀಸರು ಹಾಗೂ ಬಿಬಿಎಂಪಿಯವರ ವರದಿಯೂ ಕೂಡ ಅದೇ ಹೇಳಿದೆ. ಇಲ್ಲಿನ ಜನ ಸಣ್ಣ ಸಣ್ಣ ಮನೆಗಳಲ್ಲಿ ವಾಸ ಮಾಡುತ್ತಿದ್ದಾರೆ. ಕಸ್ತೂರಮ್ಮ ಅವರಿಗೆ ಸುತ್ತ ಗಾಯಗಳಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ನರಸಮ್ಮ, ಫಾತಿಮಾ, 38 ವರ್ಷದ ಪ್ರಮೀಳಾ,ರಾಜೇಶ್ (40 ವರ್ಷ), ಸಂಜಯ ಗಾಂಧಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಮುಬಾರಕ್ ಎಂಬುವರು ತೀರಿಕೊಂಡಿದ್ದಾರೆ. ಸಬ್ರಿನಾ ಬಾನು, ಕಯಾಲಾ, ಇಂದಿರಾಗಾಂಧಿ ಆಸ್ಪತ್ರೆಯಲ್ಲಿದ್ದು, ಸುಬ್ರಮಣಿ (62 ವರ್ಷ) ಅಗಡಿ ಆಸ್ಪತ್ರೆ, ಶೇಖಾ, ನಜೀದುಲ್ಲಾ,(37 ವರ್ಷ) ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.












Click it and Unblock the Notifications