'ಸಿದ್ದರಾಮಯ್ಯ ಸಿಎಂ ಕುರ್ಚಿ ಉಳಿಸಿಕೊಳ್ಳಲು ಪ್ರತಿ ಕೈ ಶಾಸಕರಿಗೆ 50 ಕೋಟಿ'
ಬೆಂಗಳೂರು, ಜುಲೈ 19: ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಬೆಂಗಳೂರಿಗೆ ಬಂದು ಶಾಸಕರ ಜತೆ, ಸಚಿವರ ಜತೆ ಒನ್ ಟು ಒನ್ ಮಾತುಕತೆ ನಡೆಸಿದ ನಂತರದ ಬೆಳವಣಿಗೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕರ ಕ್ಷೇತ್ರಕ್ಕೆ 50 ಕೋಟಿ ರೂಪಾಯಿಗಳ ಅನುದಾನವನ್ನು ಬಿಡುಗಡೆ ಮಾಡಿದ್ದಾರೆ. ಮುಖ್ಯಮಂತ್ರಿಗಳ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆ ಅಡಿ ಅನುದಾನ ಬಿಡುಗಡೆ ಮಾಡಲಾಗಿದ್ದು, ಸಿಎಂ ಸ್ಥಾನ ಉಳಿಸಿಕೊಳ್ಳಲು ಸಿದ್ದರಾಮಯ್ಯ ಅನುದಾನ ನೀಡಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಆರೋಪಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು, ಸೂಪರ್ ಸಿಎಂ ರಣದೀಪ್ ಸುರ್ಜೇವಾಲಾ ಅವರು ಶಾಸಕರೊಂದಿಗೆ ನಡೆಸಿದ ಸಭೆ ನಂತರ ಬಹಿರಂಗವಾಗಿರುವ ಅಸಮಾಧಾನಕ್ಕೆ ಬೆಚ್ಚಿ ಬಿದ್ದಿರುವ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಕುರ್ಚಿ ಉಳಿಸಿಕೊಳ್ಳಲು ಕಾಂಗ್ರೆಸ್ ಶಾಸಕರಿಗೆ ತಲಾ ₹50 ಕೋಟಿ ಅನುದಾನ ನೀಡಲು ಮುಂದಾಗಿದ್ದಾರೆ. ಸ್ವಾಮಿ ಸಿದ್ದರಾಮಯ್ಯನವರೇ, ಮಾತೆತ್ತಿದರೆ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತೋರುತ್ತಿದೆ ಎಂದು ಬೊಬ್ಬೆ ಹೊಡೆಯುತ್ತಿರಲ್ಲ, ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ₹50 ಕೋಟಿಯ ಬೆಣ್ಣೆ ಹಚ್ಚಿ, ವಿಪಕ್ಷ ಶಾಸಕರ ಕ್ಷೇತ್ರಗಳಿಗೆ ದೊಡ್ಡ ಸೊನ್ನೆ ಸುತ್ತಿ ಸುಣ್ಣ ಹಚ್ಚಿದ್ದೀರಲ್ಲ, ಇದು ಮಲತಾಯಿ ಧೋರಣೆ ಅಲ್ಲವೇ? ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿರುವವರು ಮಾತ್ರ ಕರ್ನಾಟಕದ ಪ್ರಜೆಗಳಾ? ಕಾಂಗ್ರೆಸ್ ಶಾಸಕರನ್ನು ಗೆಲ್ಲಿಸಿರುವ ಕ್ಷೇತ್ರಗಳಿಗೆ ಮಾತ್ರ ತಾವು ಮುಖ್ಯಮಂತ್ರಿನಾ? ಕನ್ನಡಿಗರಿಗೆ ದ್ರೋಹ ಬಗೆಯುತ್ತಿರುವ ಲಜ್ಜೆಗೆಟ್ಟ ಕಾಂಗ್ರೆಸ್ ಪಕ್ಷಕ್ಕೆ ನಾಚಿಕೆಯಾಗಬೇಕು. ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರೇ, ಕ್ಷೇತ್ರದ ಅನುದಾನಕ್ಕಾಗಿ ವಿಪಕ್ಷದ ಶಾಸಕರು ತಾಳ್ಮೆಯಿಂದ ಕಾಯಬೇಕು ಎಂದರೆ ಏನು ಸ್ವಾಮಿ? ತಾವು ಈ ಮೊದಲೇ ಹೇಳಿರುವಂತೆ ಶಾಸಕರು ತಮ್ಮ ಬಳಿ ತಗ್ಗಿ-ಬಗ್ಗಿ ನಡೆಯಬೇಕು ಎನ್ನುವುದು ನಿಮ್ಮ ಮಾತಿನ ಅರ್ಥಾನಾ? ಅಥವಾ ತಾಳ್ಮೆಯಿಂದ ಇರದಿದ್ದರೆ ನಟ್ಟು-ಬೋಲ್ಟು ಟೈಟು ಮಾಡುತ್ತೇನೆ ಎನ್ನುವ ಧಮ್ಕಿನಾ? ಎಂದು ಹೇಳಿದರು.
ತಮಗೆ ಇಷ್ಟ ಬಂದ ಹಾಗೆ ಬರೀ ಕಾಂಗ್ರೆಸ್ ಶಾಸಕರಿಗೆ ಮಾತ್ರ ಅನುದಾನ ಕೊಡೋಕೆ ರಾಜ್ಯ ಸರ್ಕಾರದ ಖಜಾನೆ ನಿಮ್ಮ ಕಾಂಗ್ರೆಸ್ ಪಕ್ಷದ ಪಾರ್ಟಿ ಫಂಡ್ ಅಲ್ಲ ಡಿ.ಕೆ.ಶಿವಕುಮಾರ್ ಅವರೇ, ಅದು ಆರೂವರೆ ಕೋಟಿ ಕನ್ನಡಿಗರ ಬೆವರಿನ ತೆರಿಗೆ ಹಣ. ಈ ಮಲತಾಯಿ ದೋರಣೆ ನಿಲ್ಲಿಸಿ, ಎಲ್ಲಾ ಕ್ಷೇತ್ರಗಳಿಗೂ ಅನುದಾನ ಬಿಡುಗಡೆ ಮಾಡಿ. ಕಳೆದ 26 ತಿಂಗಳುಗಳಲ್ಲಿ ತಮ್ಮದೇ ಪಕ್ಷದ ಸರ್ಕಾರದಿಂದ ನಯಾ ಪೈಸೆ ಅನುದಾನ ಪಡೆಯಲಾಗದೆ ತಮ್ಮ ಕ್ಷೇತ್ರಗಳಲ್ಲಿ ತಲೆ ಎತ್ತಿಕೊಂಡು ಓಡಾಡಲಾಗದ ಪರಿಸ್ಥಿತಿ ಎದುರಿಸುತ್ತಿದ್ದ ಕಾಂಗ್ರೆಸ್ ಶಾಸಕರು, ಸೂಪರ್ ಸಿಎಂ ಸುರ್ಜೆವಾಲಾ ಅವರ 6 ದಿನಗಳ ಸಭೆಯ ಪರಿಣಾಮದಿಂದ, ಸಿಎಂ ಸಿದ್ದರಾಮಯ್ಯ ಅವರ ಬಳಿ ತಲಾ 50 ಕೋಟಿ ರೂಪಾಯಿ ಅನುದಾನ ಗಿಟ್ಟಿಸಿಕೊಂಡಿದ್ದಾರೆ.
ಸೂಪರ್ ಸಿಎಂ ಸುರ್ಜೆವಾಲಾ ಅವರೇ, ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಅನುದಾನ ಕೊಡಿಸಿಕೊಟ್ಟ ತಮಗೆ ಅಭಿನಂದನೆಗಳು. ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಶಾಸಕರ ಕ್ಷೇತ್ರಗಳಿಗೂ ಅನುದಾನ ಕೊಡಿಸಿ ಪುಣ್ಯ ಕಟ್ಟಿಕೊಳ್ಳಿ ಸ್ವಾಮಿ. ನಿಮ್ಮ ಸೂಚನೆಯ ಫಲವಾಗಿ ನಮ್ಮ ಪಕ್ಷದ ಶಾಸಕರ ಕ್ಷೇತ್ರಗಳಿಗೂ ಅನುದಾನ ಸಿಕ್ಕರೆ ತಮಗೆ ವಿಶೇಷ ಸನ್ಮಾನ ಮಾಡಿ ಅಭಿನಂದನೆ ಸಲ್ಲಿಸುತ್ತೇವೆ. ಕೊಡಿಸುತ್ತೀರಲ್ಲ? ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಪ್ರಶ್ನಿಸಿದ್ದಾರೆ.












Click it and Unblock the Notifications