ಖಾಸಗಿ ವೈದ್ಯ ಕಾಲೇಜುಗಳಲ್ಲಿ ಕನ್ನಡಿಗರಿಗೆ ಮೀಸಲಾತಿ?
ಬೆಂಗಳೂರು, ಜೂನ್ 20: ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ರಾಜ್ಯದ ವಿದ್ಯಾರ್ಥಿಗಳಿಗೆ ಶೇ.50ರಷ್ಟು ಸೀಟು ಮೀಸಲಿಡುವಂತೆ ಕೇಂದ್ರಕ್ಕೆ ಕೋರಲು ರಾಜ್ಯ ಸರ್ಕಾರ ಇಂದು ಸಭೆ ನಡೆಸುತ್ತಿದೆ.
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೀಟ್ ಪದ್ಧತಿಯಿಂದ ರಾಜ್ಯ ವಿದ್ಯಾರ್ಥಿಗಳಿಗೆ ವೈದ್ಯಕೀಯ ಕೋರ್ಸ್ಗಳ ಪ್ರವೇಶ ಗಗನ ಕುಸುಮವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬಳಿ ಮನವಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.
ವೈದ್ಯಕೀಯ ಶಿಕ್ಷಣ ಕೋರ್ಸ್ ಪ್ರವೇಶಕ್ಕೆ ವಿದ್ಯಾರ್ಥಿಗಳ ಹಿಂಜರಿಕೆ:ಕಾರಣ
ಇಂದು ವಿಕಾಸಸೌಧದಲ್ಲಿ 3 ಗಂಟೆಗೆ ಸಭೆ ಹಮ್ಮಿಕೊಂಡಿದೆ. ವೈದ್ಯಕೀಯ ಕೋರ್ಸ್ಗಳಿಗೆ ಪ್ರವೇಶ ಪಡೆಯಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೀಟ್ ಪದ್ಧತಿಯಿಂದ ರಾಜ್ಯದ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದ್ದು, ಶೇ.5ರಷ್ಟು ವೈದ್ಯಕೀಯ ಕೋರ್ಸ್ ಆಕಾಂಕ್ಷಿಗಳಿಗೂ ಕರ್ನಾಟಕದಲ್ಲಿ ಸೀಟು ದೊರೆಯುತ್ತಿಲ್ಲ.
ಹಾಗಾಗಿ ರಾಜ್ಯದ ಎಲ್ಲಾ ಬಗೆಯ ವೈದ್ಯಕೀಯ ಕಾಲೇಜುಗಳಲ್ಲಿ ಕರ್ನಾಟಕದ ವಿದ್ಯಾರ್ಥಿಗಳಿಗೆ ವೈದ್ಯಕೀಯ ಸೀಟು ಲಭ್ಯತೆ ಕಡಿಮೆಯಾಗುವುದರಿಂದ ಭವಿಷ್ಯದಲ್ಲಿ ಕರ್ನಾಟಕದ ಮೂಲದ ವೈದ್ಯರಿಗ ಸಂಖ್ಯೆ ಕ್ಷೀಣಿಸುತ್ತಾ ಬರುತ್ತದೆ ಎಂಬ ಆತಂಕ ಸರ್ಕಾರದಲ್ಲಿದೆ.
ವೈದ್ಯಕೀಯ ಶಿಕ್ಷಣ ಸಚಿವ ಇ ತುಕಾರಾಂ ಅವರು ಖಾಸಗಿ ವೈದ್ಯಕೀಯ ಕಾಲೇಜುಗಳ ಆಡಳಿತ ಮಂಡಳಿಗಳು, ಸ್ವಾಯತ್ತ ವಿಶ್ವವಿದ್ಯಾಲಯ ಆಡಳಿತ ಮಂಡಳಿಯ ಪ್ರಮುಖರು, ಭಾಷಾ ಹಾಗೂ ಧಾರ್ಮಿಕ ಅಲ್ಪಸಂಖ್ಯಾತ ವೈದ್ಯಕೀಯ ಕಾಲೇಜುಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಇದೇ ವೇಳೆ ವೈದ್ಯಕೀಯ ಸೀಟುಗಳ ಪ್ರವೇಶ ಶುಲ್ಕ ನಿಗದಿ ಬಗ್ಗೆಯೂ ಚರ್ಚೆ ನಡೆಯಲಿದೆ.