ಬೆಂಗಳೂರು-ಮೈಸೂರು ನಡುವೆ 6 ಪಥದ ಕಾಂಕ್ರಿಟ್ ರಸ್ತೆ
ಬೆಂಗಳೂರು, ನವೆಂಬರ್ 03 : 'ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯನ್ನು 6 ಪಥದ ಕಾಂಕ್ರೀಟ್ ರಸ್ತೆಯಾಗಿ ಅಭಿವೃದ್ಧಿ ಪಡಿಸಲಾಗುತ್ತದೆ. ಯೋಜನೆಗೆ ಅಗತ್ಯವಿರುವ ಭೂ ಸ್ವಾಧೀನಕ್ಕೆ ಕೇಂದ್ರ ಸರ್ಕಾರ 2,250 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಿದೆ' ಎಂದು ಸಚಿವ ಡಾ.ಎಚ್.ಸಿ. ಮಹದೇವಪ್ಪ ಹೇಳಿದ್ದಾರೆ.
ವಿಧಾನಸೌಧದಲ್ಲಿ ಸೋಮವಾರ ಮಾಧ್ಯಮಗಳ ಜೊತೆ ಮಾತನಾಡಿದ ಲೋಕೋಪಯೋಗಿ ಸಚಿವ ಎಚ್.ಸಿ.ಮಹದೇವಪ್ಪ ಅವರು, 'ಬೆಂಗಳೂರು-ಮೈಸೂರು ಆರು ಪಥದ ಕಾಂಕ್ರೀಟ್ ರಸ್ತೆ ಅಭಿವೃದ್ಧಿಗೆ ಕೇಂದ್ರ ಸರ್ಕಾರ 3,500 ಕೋಟಿ ನೀಡಲಿದೆ' ಎಂದರು. [ಬೆಂಗಳೂರು-ಮೈಸೂರು ಆರು ಪಥದ ರಸ್ತೆ ವಿಳಂಬ?]

'ನಿರೀಕ್ಷೆಯಂತೆ ಎಲ್ಲಾ ಕೆಲಸಗಳು ಪೂರ್ಣಗೊಂಡರೆ 2016ರ ಆರಂಭದಲ್ಲಿ ಕಾಮಗಾರಿ ಆರಂಭಿಸಲಾಗುತ್ತದೆ. ಮಾರ್ಗದ ನಡುವಿನ ಎಲ್ಲಾ ಪಟ್ಟಣಗಳಲ್ಲಿ ಬೈಪಾಸ್ ನಿರ್ಮಿಸಲಾಗುತ್ತದೆ. ಆರು ಪಥದ ಜತೆಗೆ ಎರಡು ಪಥದ ಸರ್ವೀಸ್ ರಸ್ತೆಯನ್ನು ನಿರ್ಮಿಸಲಾಗುವುದು' ಎಂದು ತಿಳಿಸಿದರು. [ಆರು ಪಥವಾಗಲಿದೆ ಬೆಂಗಳೂರು-ಮೈಸೂರು ಹೆದ್ದಾರಿ]
'ಈಗಾಗಲೇ ಬೆಂಗಳೂರು-ಮೈಸೂರು ಮಾರ್ಗದಲ್ಲಿ ಸಂಚಾರ ದಟ್ಟಣೆ ಅಧಿಕವಾಗಿದೆ. ಆದ್ದರಿಂದ, ಪರ್ಯಾಯ ಮಾರ್ಗಗಳನ್ನು ಅಭಿವೃದ್ಧಿಗೊಳಿಸಲಾಗುತ್ತದೆ. ಬೆಂಗಳೂರಿನ ನೈಸ್ ರಸ್ತೆಯಿಂದ ಕನಕಪುರವರೆಗೆ 4 ಪಥದ ರಸ್ತೆ ನಿರ್ಮಿಸುವ ಕಾಮಗಾರಿ ಮುಂದಿನ ತಿಂಗಳು ಆರಂಭವಾಗಲಿದೆ' ಎಂದು ಮಾಹಿತಿ ನೀಡಿದರು.
ಎಷ್ಟು ವಾಹನ ಸಂಚಾರ? : ಬೆಂಗಳೂರು-ಮೈಸೂರು ರಾಜ್ಯ ಹೆದ್ದಾರಿಯಲ್ಲಿ ವಾಹನ ದಟ್ಟಣೆ ಅಧಿಕವಾಗಿದೆ. 2007ರಲ್ಲಿ ಪ್ರತಿದಿನ 38,000ಕಾರುಗಳು ಸಂಚರಿಸುತ್ತಿದ್ದವು. ಸದ್ಯ 78,000 ಕಾರುಗಳು ಸಂಚರಿಸುತ್ತಿವೆ ಎಂದು ಸಮೀಕ್ಷೆಯಿಂದ ತಿಳಿದುಬಂದಿದೆ.












Click it and Unblock the Notifications