ಬಿಜೆಪಿಯ 6 ಹಾಲಿ ಸಂಸದರಿಗೆ ಟಿಕೆಟ್ ನೀಡಲು ವಿರೋಧ
Recommended Video

ಬೆಂಗಳೂರು, ಮಾರ್ಚ್ 07 : ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಲು ನವದೆಹಲಿಯಲ್ಲಿ ಶುಕ್ರವಾರ ಮಹತ್ವದ ಸಭೆ ನಡೆಯಲಿದೆ. ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಎಲ್ಲಾ ಹಾಲಿ ಸಂಸದರಿಗೆ ಟಿಕೆಟ್ ಖಚಿತ ಎಂದು ಬಿಜೆಪಿ ಹೈಕಮಾಂಡ್ ಸಂದೇಶ ನೀಡಿದೆ. ಆದರೆ, 6 ಕ್ಷೇತ್ರಗಳಲ್ಲಿ ಹಾಲಿ ಸಂಸದರಿಗೆ ಟಿಕೆಟ್ ನೀಡದಂತೆ ಕೂಗು ಕೇಳಿಬರುತ್ತಿದೆ. ಆದ್ದರಿಂದ, ಬಿಜೆಪಿ ಹೈಕಮಾಂಡ್ ನಡೆ ಕುತೂಹಲಕ್ಕೆ ಕಾರಣವಾಗಿದೆ.
ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಶುಕ್ರವಾರ ಬಿ.ಎಸ್.ಯಡಿಯೂರಪ್ಪ ಜೊತೆ ಸಭೆ ನಡೆಸಲಿದ್ದು, ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಈಗಾಗಲೇ ಅಮಿತ ಶಾ ಅವರು ಕಳಿಸಿದ ತಂಡ ರಾಜ್ಯದಲ್ಲಿ ಮೂರು ಸುತ್ತಿನ ಸಮೀಕ್ಷೆ ನಡೆಸಿದ್ದು, ವರದಿಯನ್ನು ಸಲ್ಲಿಕೆ ಮಾಡಿದೆ.
ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 20ಕ್ಕೂ ಅಧಿಕ ಸ್ಥಾನಗಳಲ್ಲಿ ಜಯಗಳಿಸಬೇಕು ಎಂಬುದು ಬಿಜೆಪಿಯ ಗುರಿ. ಆದರೆ, ಕೇವಲ 12 ಸ್ಥಾನಗಳಲ್ಲಿ ಪಕ್ಷ ಜಯಗಳಿಸಲಿದೆ ಎಂದು ಗುಪ್ತಚರ ಇಲಾಖೆ ವರದಿ ಹೇಳಿದೆ. ಆದ್ದರಿಂದ, ಭಾರಿ ಲೆಕ್ಕಾಚಾರ ಹಾಕಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗುತ್ತದೆ...ಪ್ರತಿರೋಧ ಎದುರಿಸುತ್ತಿರುವ ಹಾಲಿ ಸಂಸದರ ಪಟ್ಟಿ ಇಲ್ಲಿದೆ....

ಉಡುಪಿ-ಚಿಕ್ಕಮಗಳೂರು
ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಹಾಲಿ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಟಿಕೆಟ್ ನೀಡಲು ಭಾರಿ ವಿರೋಧ ವ್ಯಕ್ತವಾಗುತ್ತಿದೆ. ಸ್ಥಳೀಯ ನಾಯಕರಿಗೆ ಈ ಬಾರಿ ಟಿಕೆಟ್ ನೀಡಬೇಕು. ಸಂಸದರು ಕ್ಷೇತ್ರದ ಅಭಿವೃದ್ಧಿಗಿಂತ ರಾಜ್ಯ ರಾಜಕಾರಣದಲ್ಲಿಯೇ ಹೆಚ್ಚು ಬ್ಯುಸಿಯಾಗಿದ್ದಾರೆ ಎಂದು ಆರೋಪ ಮಾಡಲಾಗುತ್ತಿದೆ.

ಮೈಸೂರು-ಕೊಡಗು
ಮೈಸೂರು-ಕೊಡಗು ಕ್ಷೇತ್ರದ ಹಾಲಿ ಸಂಸದ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ನೀಡಲು ವಿರೋಧ ವ್ಯಕ್ತಪಡಿಸಲಾಗುತ್ತಿದೆ. ಪಕ್ಷದ ವಲಯದಲ್ಲಿಯೇ ಅವರ ವಿರುದ್ಧ ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಟಕೆಟ್ ಸಿಕ್ಕರೆ ಸ್ಪರ್ಧೆ ಮಾಡಲು ಸಿದ್ಧ ಎಂದು ಅಪ್ಪಚ್ಚು ರಂಜ್ ಹೇಳಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಒಂದಾದರೆ ಬಿಜೆಪಿ ಅಭ್ಯರ್ಥಿ ಗೆಲ್ಲುವುದು ಕಷ್ಟ ಎಂಬ ಮಾತುಗಳು ಕೇಳಿಬರುತ್ತಿವೆ.

ವಿಜಯಪುರ
ವಿಜಯಪುರ ಕ್ಷೇತ್ರದ ಸಂಸದ ರಮೇಶ ಜಿಗಜಿಣಗಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಸಚಿವರಾಗಿದ್ದಾರೆ. ಆದರೆ, ಅವರಿಗೆ ಈ ಬಾರಿಯ ಚುನಾವಣೆಯಲ್ಲಿ ಟಿಕೆಟ್ ನೀಡಲು ವಿರೋಧ ವ್ಯಕ್ತವಾಗುತ್ತಿದೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ರಮೇಶ ಜಿಗಜಿಣಗಿ ಅವರ ನಡುವಿನ ಅಸಮಾಧಾನ ಗುಟ್ಟಾಗಿ ಉಳಿದಿಲ್ಲ.

ದಕ್ಷಿಣ ಕನ್ನಡ
ಮತ್ತೊಮ್ಮೆ ಮೋದಿ ಓಕೆ ನಳೀನ್ ಯಾಕೆ? ಎಂದು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ನಡೆಯುತ್ತಿದೆ. ದಕ್ಷಿಣ ಕನ್ನಡ ಕ್ಷೇತ್ರದ ಹಾಲಿ ಸಂಸದ ನಳೀನ್ ಕುಮಾರ್ ಕಟೀಲ್ ಅವರಿಗೆ ಈ ಬಾರಿ ಟಿಕೆಟ್ ಬೇಡ ಎಂಬುದು ಸ್ಥಳೀಯ ನಾಯಕರ ಆಗ್ರಹವಾಗಿದೆ. ಪಂಪ್ವೆಲ್ ಮೇಲ್ಸೇತುವೆ ಆಮೆಗತಿ ಕಾಮಗಾರಿಯನ್ನು ಮುಂದಿಟ್ಟುಕೊಂಡು ಕಟೀಲ್ ಅವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಲಾಗುತ್ತಿದೆ.

ಬೆಳಗಾವಿ
ಬೆಳಗಾವಿ ಕ್ಷೇತ್ರದ ಹಾಲಿ ಸಂಸದ ಸುರೇಶ ಅಂಗಡಿ ಅವರಿಗೆ ಟಿಕೆಟ್ ನೀಡಬಾರದು ಎಂದು ಆಗ್ರಹಿಸಲಾಗುತ್ತಿದೆ. ರಾಜ್ಯಸಭಾ ಸದಸ್ಯರಾದ ಪ್ರಭಾಕರ ಕೋರೆ ಅವರಿಗೆ ಈ ಬಾರಿ ಟಿಕೆಟ್ ನೀಡಬೇಕು ಎಂದು ಸ್ಥಳೀಯ ನಾಯಕರು ಆಗ್ರಹಿಸುತ್ತಿದ್ದಾರೆ.

ಕೊಪ್ಪಳ
ಕೊಪ್ಪಳ ಕ್ಷೇತ್ರದ ಹಾಲಿ ಸಂಸದ ಸಂಗಣ್ಣ ಕರಡಿ ವಿರುದ್ಧ ಸ್ಥಳೀಯ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಾರಿ ಸಂಗಣ್ಣ ಕರಡಿ ಅವರು ಅಭ್ಯರ್ಥಿಯಾದರೆ ಗೆಲುವು ಕಷ್ಟ ಎಂಬ ಸಂದೇಶವನ್ನು ರಾಜ್ಯ ನಾಯಕರಿಗೆ ರವಾನೆ ಮಾಡಿದ್ದಾರೆ. ವಿರೂಪಾಕ್ಷಪ್ಪ ಸಿಂಗನಾಳ, ಡಾ.ಬಸವರಾಜ್ ಅವರು ಟಿಕೆಟ್ ಪಡೆಯಲು ಪ್ರಯತ್ನ ನಡೆಸುತ್ತಿದ್ದಾರೆ.












Click it and Unblock the Notifications