SSLC Exam: ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿದ 7 ಶಿಕ್ಷಕರು ಅಮಾನತು
ಗದಗ, ಮಾರ್ಚ್ 30: ಗದಗ ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿದ ಆರೋಪದ ಮೇಲೆ ಇಬ್ಬರು ಮುಖ್ಯ ನಿರೀಕ್ಷಕರು ಸೇರಿದಂತೆ ಏಳು ಶಿಕ್ಷಕರನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ.
ಇಂದು ನಡೆದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಪರೀಕ್ಷೆ ಬರೆಯುತ್ತಿರುವ ವಿಡಿಯೋವನ್ನು ಮಾಧ್ಯಮಗಳಲ್ಲಿ ಪ್ರಸಾರ ಮಾಡಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಗದಗನ ಸಿ.ಎಸ್. ಪಾಟೀಲ ಬಾಲಕರ ಪ್ರೌಢಶಾಲೆ ಮತ್ತು ಸಿ.ಎಸ್. ಪಾಟೀಲ ಬಾಲಕಿಯರ ಪ್ರೌಢಶಾಲೆಯ ಪರೀಕ್ಷಾ ಕೇಂದ್ರಗಳಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.
ಹೈಕೋರ್ಟ್ ಆದೇಶವನ್ನು ಉಲ್ಲಂಘಿಸಿ ವಿದ್ಯಾರ್ಥಿಗಳಿಗೆ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿದ್ದಕ್ಕಾಗಿ ಶಿಕ್ಷಕರನ್ನು ಅಮಾನತುಗೊಳಿಸಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಸವಲಿಂಗಪ್ಪ ಜಿ.ಎಂ. ಆದೇಶ ಹೊರಡಿಸಿದ್ದಾರೆ.

ಶಿಕ್ಷಕರಾದ ಎಸ್.ಯು. ಹೊಕ್ಕಲದ್, ಎಸ್.ಎಂ. ಪತ್ತಾರ, ಎಸ್.ಜಿ. ಗೋಡ್ಕೆ, ಎಸ್.ಎಸ್. ಗುಜಮಾಗಡಿ, ಮತ್ತು ವಿ.ಎನ್. ಕಿವುಡಾರ್ ಮತ್ತು ಮುಖ್ಯ ನಿರೀಕ್ಷಕರಾದ ಕೆ.ಬಿ. ಭಜಂತ್ರಿ ಮತ್ತು ಬಿ.ಎಸ್. ಹೊನಗುಡಿ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಆದೇಶದಲ್ಲಿ ತಿಳಿಸಲಾಗಿದೆ.
ದೃಶ್ಯ ಮಾಧ್ಯಮಗಳಲ್ಲಿ ವರದಿಯಾದ ಹಿನ್ನೆಲೆಯಲ್ಲಿ ಗದಗ ತಹಶೀಲ್ದಾರ್ ಅವರು ಶಾಲೆಗಳಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಸಲ್ಲಿಸಿದ ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಮಾಧ್ಯಮಗಳಲ್ಲಿ ವರದಿಯಾದ ಹಿನ್ನೆಲೆಯಲ್ಲಿ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸರ್ಕಾರಿ ಅಧಿಕಾರಿಗಳ ಜತೆ ನ್ಯಾಯಾಲಯದ ಆದೇಶ ಉಲ್ಲಂಘಿಸಿರುವ ಶಿಕ್ಷಕರು ವಾಗ್ವಾದಕ್ಕಿಳಿದಿರುವ ಬಗ್ಗೆಯೂ ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಅಮಾನತುಗೊಂಡಿರುವ ಶಿಕ್ಷಕರು ಸಿ.ಎಸ್. ಪಾಟೀಲ ಪ್ರೌಢಶಾಲೆ ಸೇರಿದಂತೆ ವಿವಿಧ ಅನುದಾನಿತ ಶಿಕ್ಷಣ ಸಂಸ್ಥೆಗಳ ಶಿಕ್ಷಕರಾಗಿದ್ದಾರೆ.












Click it and Unblock the Notifications