ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ
ಕರ್ನಾಟಕ, ಆಗಸ್ಟ್ 15: ಸ್ವಾತಂತ್ರ್ಯ ದಿನಾಚರಣೆ ಬಂತೆಂದರೆ ದೇಶದೆಲ್ಲೆಡೆ ಸಂಭ್ರಮ ಸಡಗರದ ವಾತಾವರಣ ನಿರ್ಮಾಣವಾಗುತ್ತದೆ. ದೇಶದ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಮತ್ತಿತರ ಕಡೆಗಳಲ್ಲಿ ರಂಗು ರಂಗಿನ ಬೆಳಕಿನ ಮಧ್ಯೆ ತ್ರಿವರ್ಣ ಧ್ವಜ ಹಾರಾಟ ಕಣ್ಮನ ಸೆಳೆಯುತ್ತದೆ.
ಚಿತ್ರದುರ್ಗ ವರದಿ
75ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕೋಟೆನಾಡು ಚಿತ್ರದುರ್ಗ ನಗರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ಶ್ರೀರಾಮುಲು ಧ್ವಜಾರೋಹಣ ನೆರವೇರಿಸಿ, ಪೋಲಿಸ್, ಎನ್ಸಿಸಿ, ಸ್ಕೌಟ್ ಮತ್ತು ಗೈಡ್ಸ್, ಅರಣ್ಯ ಹಾಗೂ ಅಬಕಾರಿ ದಳದಿಂದ ಗೌರವ ವಂದನೆಯನ್ನು ಸ್ವೀಕರಿಸಿದರು.

ನಂತರ ಮಾತನಾಡಿದ ಸಚಿವ ಬಿ. ಶ್ರೀರಾಮುಲು, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನಿಯರನ್ನು ನಾವು ನೆನಸಿಕೊಳ್ಳಬೇಕಾಗಿದೆ. ಕೋವಿಡ್ ಮೂರನೇ ಅಲೆ ಬಂದರೆ ಅದನ್ನು ಸಮರ್ಥವಾಗಿ ಎದುರಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಸಜ್ಜಾಗಿದೆ. ಇನ್ನು ಒಂದು ಕಡೆ ಬರಗಾಲ, ಇನ್ನೊಂದು ಕಡೆ ಅತೀವೃಷ್ಟಿಯನ್ನು ಸರ್ಕಾರ ಸಮರ್ಥವಾಗಿ ಎದುರಿಸಿದೆ. ಇನ್ನು ಕೂಡ ಮೂರನೇ ಅಲೆಯ ಬಗ್ಗೆ ಸಂಭವಿನೀಯತೆ ಇದೆ ಎಂದು ತಜ್ಞರು ಹೇಳುತ್ತಿದ್ದು, ಅದನ್ನು ಕೂಡ ನಾವು ಎಸದುರಿಸಲು ಸನ್ನದ್ಧರಾಗಿದ್ದೇವೆ ಎಂದು ಹೇಳಿದರು.
ಇತ್ತ ಹಿರಿಯೂರು ನಗರದಲ್ಲಿ ಶಾಸಕಿ ಕೆ. ಪೂರ್ಣಿಮಾ ಶ್ರೀನಿವಾಸ್ ಕೂಡ ಧ್ವಜಾರೋಹಣ ನೆರವೇರಿಸಿದರು. ಹಿರಿಯೂರು ತಾಲ್ಲೂಕು ಕ್ರೀಡಾಂಗಣದಲ್ಲಿ ಧ್ವಜಾರೋಹಣ ಕಾರ್ಯಕ್ರಮ ಮುಗಿದ ನಂತರ ನಗರಸಭೆ ಅಧ್ಯಕ್ಷೆ ಶಂಶುನ್ನಿಸಾ ಅವರು ಕಾರ್ಯಕ್ರಮಕ್ಕೆ ತಡವಾಗಿ ಆಗಮಿಸಿದರು. ಕೋವಿಡ್ ಮೂರನೇ ಅಲೆಯ ಭೀತಿ ಇರುವುದರಿಂದ ಶಾಲಾ ಮಕ್ಕಳಿಗೆ ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶವಿರಲಿಲ್ಲ. ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಗಳೂ ಇರಲಿಲ್ಲ.

ರಾಮನಗರ ವರದಿ
ರಾಮನಗರ ಜಿಲ್ಲಾ ಕ್ರೀಡಾಂಗಣದಲ್ಲಿ 75ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ ನೇರವೇರಿಸಿದರು.
ನಂತರ ಮಾತನಾಡಿದ ಮಾಡಿದ ಸಚಿವ ಅಶ್ವಥ್ ನಾರಾಯಣ, "ರಾಮನಗರ ಜಿಲ್ಲೆಯೂ ಸೇರಿ ರಾಜ್ಯದ ಪಾಲಿನ ಜೀವನಾಡಿ ಆಗಲಿರುವ ಮೇಕೆದಾಟು ಯೋಜನೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಕುಡಿಯುವ ನೀರಿನ ಉದ್ದೇಶಕ್ಕಾಗಿ ಅನಷ್ಠಾನವಾಗುತ್ತಿರುವ ಈ ಯೋಜನೆ ನಿಲ್ಲುವುದಿಲ್ಲ. ಈಗಾಗಲೇ ಯೋಜನೆಯ ಸಮಗ್ರ ಯೋಜನಾ ವರದಿ (ಡಿಪಿಆರ್)ಯನ್ನು ಕೇಂದ್ರ ಜಲ ಆಯೋಗಕ್ಕೆ ಸಲ್ಲಿಸಲಾಗಿದೆ ಎಂದರು.
ಆಯೋಗದಿಂದ ಒಪ್ಪಿಗೆ ಸಿಕ್ಕಿದ ಕೂಡಲೇ ಯೋಜನೆ ಕಾಮಗಾರಿ ಆರಂಭ ಮಾಡಲಾಗುವುದು ಎಂದ ಅವರು, ಈ ಯೋಜನೆಯನ್ನು ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ. ಬೆಂಗಳೂರು ಮಹಾನಗರಕ್ಕೆ ಕುಡಿಯುವ ನೀರು ಪೂರೈಕೆಗೆ ಇದು ಅಗತ್ಯವಾದ ಯೋಜನೆ ಎಂದರು.

ಅರ್ಧಕ್ಕೆ ಹಾರಿದ ಬಾವುಟ
75ನೇ ಸ್ವಾತಂತ್ರ್ಯ ದಿನದಂದೇ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕು ಕಚೇರಿಯಲ್ಲಿ ಧ್ವಜಸ್ತಂಭದ ಅರ್ಧಕ್ಕೆ ಬಾವುಟ ಹಾರಿರುವ ಘಟನೆ ನಡೆದಿದೆ. ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಕ್ಷೇತ್ರದಲ್ಲಿ ಚನ್ನಪಟ್ಟಣ ತಾಲೂಕು ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ ರಾಷ್ಟ್ರಧ್ವಜಕ್ಕೆ ಅವಮಾನವಾಗಿದೆ.

ಚಿಕ್ಕಮಗಳೂರು ವರದಿ
ಚಿಕ್ಕಮಗಳೂರು ಜಿಲ್ಲೆಯಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಧ್ವಜಾರೋಹಣ ನೆರವೇರಿಸಿದರು. ಚಿಕ್ಕಮಗಳೂರು ನಗರದ ಸುಭಾಷ್ ಚಂದ್ರ ಬೋಸ್ ಆಟದ ಮೈದಾನದಲ್ಲಿ ಪೊಲೀಸ್, ಗೃಹರಕ್ಷಕ, ಅರಣ್ಯ, ಅಗ್ನಿಶಾಮಕ ದಳದಿಂದ ಪಥ ಸಂಚಲನ ನಡೆಯಿತು.
ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ. ಪ್ರಾಣೇಶ್, ಶಾಸಕ ಸಿ.ಟಿ. ರವಿ, ಎಂಎಲ್ಸಿ ಎಸ್.ಎಲ್. ಭೋಜೆಗೌಡ ಸೇರಿ ಹಲವರು ಭಾಗಿಯಾಗಿದ್ದರು.

ಉತ್ತರ ಕನ್ನಡ ವರದಿ
ಕಾರವಾರದ ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿದ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್, ನಂತರ ಕವಾಯತು ತಂಡದಿಂದ ಗೌರವ ಸ್ವೀಕರಿಸಿದರು.
ಉತ್ತರ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಮೂರನೇ ಅಲೆ ಎದುರಿಸಲು ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಯಾವುದೇ ತಾಲೂಕಿನಲ್ಲೂ ಆಕ್ಸಿಜನ್ ಕೊರತೆಯಾಗದಂತೆ ಎಲ್ಲಾ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಹೇಳಿದರು.

ದಕ್ಷಿಣ ಕನ್ನಡ ವರದಿ
Recommended Video
ವೀರ್ ಸಾವರ್ಕರ್ ಫೋಟೋವನ್ನು ಸ್ವಾತಂತ್ರ್ಯ ಹೋರಾಟಗಾರರ ಬ್ಯಾನರ್ನಲ್ಲಿ ಹಾಕಿರುವುದನ್ನು ವಿರೋಧಿಸಿ ಸ್ವಾತಂತ್ರ್ಯ ರಥಕ್ಕೆ SDPI ಕಾರ್ಯಕರ್ತರು ಅಡ್ಡಿಪಡಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಬಕದಲ್ಲಿ ನಡೆದಿದೆ.












Click it and Unblock the Notifications