7th Pay Commission; ಅವಧಿ ಅಂತ್ಯ, ಆಯೋಗದಿಂದ ನೌಕರರಿಗೆ ಭರವಸೆ ಏನು
ಬೆಂಗಳೂರು, ಮಾರ್ಚ್ 07: ಕರ್ನಾಟಕದ ಸರ್ಕಾರಿ ನೌಕರರ ಬೇಡಿಕೆಯಂತೆ ಕೆ. ಸುಧಾಕರ್ ರಾವ್ ನೇತೃತ್ವದ 7ನೇ ವೇತನ ಆಯೋಗ ರಚನೆ ಮಾಡಿದೆ. ಈ ಆಯೋಗದ ಅವಧಿ ಮಾರ್ಚ್ 15ರಂದು ಅಂತ್ಯಗೊಳ್ಳಲಿದೆ. ಇದರಿಂದಾಗಿ ಆಯೋಗದ ವರದಿ ಬಗ್ಗೆ ಕುತೂಹಲ ಹೆಚ್ಚಿದೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ. ಎಸ್. ಷಡಾಕ್ಷರಿ ನೇತೃತ್ವದ ನಿಯೋಗ ಬುಧವಾರ 7ನೇ ವೇತನ ಆಯೋಗವನ್ನು ಭೇಟಿ ಮಾಡಿತು. ಆಯೋಗದ ಅವಧಿ ಅಂತ್ಯಗೊಳ್ಳುತ್ತಿರುವ ಹಿನ್ನಲೆಯಲ್ಲಿ ಹಲವಾರು ವಿಚಾರಗಳ ಕುರಿತು ಚರ್ಚಿಸಿತು.

ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಫೆಬ್ರವರಿ 16ರಂದು ಬಜೆಟ್ ಮಂಡಿಸಿದ 2024-25ನೇ ಸಾಲಿನ ಬಜೆಟ್ನಲ್ಲಿ 7ನೇ ರಾಜ್ಯ ವೇತನದ ಆಯೋಗದ ವರದಿ ಜಾರಿಯ ಮುನ್ಸೂಚನೆ ನೀಡಿದ್ದಾರೆ ಎಂದು ಆಯೋಗಕ್ಕೆ ಮನವರಿಕೆ ಮಾಡಿಕೊಟ್ಟರು.
ಫೆಬ್ರವರಿ 27ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ನಡೆದಿತ್ತು. ಈ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದ ಸಿದ್ದರಾಮಯ್ಯ ಅವರು 7ನೇ ವೇತನ ಆಯೋಗದ ವರದಿ ಬಂದ ಬಳಿಕ ಪರಿಶೀಲಿಸಿ ಮುಂದಿನ ತೀರ್ಮಾನ ಎಂದು ಹೇಳಿದ್ದರು.
ಆದ್ದರಿಂದ ಸಿ. ಎಸ್. ಷಡಾಕ್ಷರಿ ನೇತೃತ್ವದ ನಿಯೋಗ ವೇತನ ಆಯೋಗದ ಅಧ್ಯಕ್ಷ ಡಾ. ಸುಧಾಕರ್ ರಾವ್ ಹಾಗೂ ಸದಸ್ಯರ ಬಳಿ ವೇತನ ಆಯೋಗದ ಜಾರಿಗೆ ಸಂಬಂಧಿಸಿದಂತೆ ನಿರ್ಣಯ ತೆಗೆದುಕೊಳ್ಳಲು ಸಂಘದ ಮೇಲೆ ಒತ್ತಡ ಹೆಚ್ಚಾಗುತ್ತಿದೆ. ವೇತನ ಆಯೋಗದ ವರದಿಯನ್ನು ಶೀಘ್ರವಾಗಿ ಸರ್ಕಾರಕ್ಕೆ ಸಲ್ಲಿಸುವಂತೆ ಮನವಿ ಮಾಡಿದರು.
ಭರವಸೆ ಏನು?: ರಾಜ್ಯ ಸರ್ಕಾರಿ ನೌಕರರ ಸಂಘದ ಮನವಿಗೆ ಪೂರಕವಾಗಿ ಪ್ರತಿಕ್ರಿಯಿಸಿದ ವೇತನ ಆಯೋಗದ ಅಧ್ಯಕ್ಷ ಕೆ. ಸುಧಾಕರ್ ರಾವ್, ವರದಿ ಸಲ್ಲಿಸುವ ನಿಟ್ಟಿನಲ್ಲಿ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದು, ಶೀಘ್ರದಲ್ಲಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುತ್ತದೆ ಎಂದು ಭರವಸೆ ನೀಡಿದರು.
ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಇದ್ದಾಗ ಸರ್ಕಾರಿ ನೌಕರರ ವೇತನ, ಭತ್ಯೆ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳನ್ನು ಪರಿಶೀಲಿಸಿ ವರದಿ ನೀಡಲು ಕೆ. ಸುಧಾಕರ್ ನೇತೃತ್ವದ ತ್ರಿ ಸದಸ್ಯರ 7ನೇ ರಾಜ್ಯ ವೇತನ ಆಯೋಗ ರಚನೆ ಮಾಡಲಾಗಿತ್ತು.
ಆಯೋಗದ ಅವಧಿ 2023ರ ನವೆಂಬರ್ನಲ್ಲಿ ಅಂತ್ಯವಾಗಬೇಕಿತ್ತು. ಆಗ ಆಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾಗಿತ್ತು. ಆದರೆ ಸರ್ಕಾರಕ್ಕೆ ವರದಿ ನೀಡಿರಲಿಲ್ಲ. ಬಳಿಕ ಸರ್ಕಾರ ರಾಜ್ಯ 7ನೇ ವೇತನ ಆಯೋಗದ ಅವಧಿಯನ್ನು 15/3/2024ರ ತನಕ ವಿಸ್ತರಣೆ ಮಾಡಿದೆ.
ಆದ್ದರಿಂದ ಈಗ ಆಯೋಗ ಸಲ್ಲಿಕೆ ಮಾಡುವ ವರದಿಯನ್ನು ಪಡೆದು ಅದನ್ನು ಅನುಷ್ಠಾನಗೊಳಿಸುವ ಕುರಿತು ಸರ್ಕಾರ ಘೋಷಣೆ ಮಾಡಬೇಕು ಎಂಬುದು ರಾಜ್ಯ ಸರ್ಕಾರಿ ನೌಕರರ ಸಂಘದ ಬೇಡಿಕೆಯಾಗಿದೆ. ಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿಗೆ ಬರುವ ಮೊದಲೇ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಬಜೆಟ್ ಅಧಿವೇಶನದ ಕೊನೆ ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ನೀಡುವಾಗ 7ನೇ ವೇತನ ಆಯೋಗದ ಕುರಿತು ಮಾತನಾಡಿದ್ದಾರೆ. ವರದಿ ಜಾರಿಗಾಗಿ ಖರ್ಚಾಗುವ ವೆಚ್ಚದ ಕುರಿತು ಮಾಹಿತಿ ನೀಡಿದರು.
ಆಯೋಗದ ವರದಿ ಜಾರಿಯಿಂದಾಗಿ ಸರ್ಕಾರಿ ನೌಕರರ ವೇತನ ಹಾಗೂ ಪಿಂಚಣಿಯಲ್ಲಿ ಶೇ 25ರಷ್ಟು ಹೆಚ್ಚಳವಾಗಲಿದೆ. 7ನೇ ವೇತನ ಆಯೋಗದ ಶಿಫಾರಸ್ಸಿನಿಂದ ವೇತನ ಶ್ರೇಣಿಯಲ್ಲಿ ಸಂಭವಿಸಬಹುದಾದ ಹೆಚ್ಚಳವನ್ನು ಅಂದಾಜಿಸಿ 2024-25ನೇ ಸಾಲಿನಲ್ಲಿ ವೇತನ ಹಾಗೂ ಪಿಂಚಣಿಗೆ 1,12,789 ಕೋಟಿ ಅಂದಾಜಿಸಲಾಗಿರುತ್ತದೆ ಎಂದು ಮುಖ್ಯಮಂತ್ರಿಗಳು ಮಾಹಿತಿ ಕೊಟ್ಟರು.
ಕಳೆದ ಸಾಲಿಗೆ ಹೋಲಿಸಿದರೆ ಇದು ಶೇ 25ರಷ್ಟು ಅಂದರೆ, 22,670 ಕೋಟಿ ಹೆಚ್ಚಳವಾಗಿರುತ್ತದೆ. 7ನೇ ವೇತನ ಆಯೋಗದ ಶಿಫಾರಸ್ಸು ಜಾರಿಗೆ 13,000 ಕೋಟಿ ಆಯವ್ಯಯದಲ್ಲಿ ಒದಗಿಸಲಾಗಿದ್ದು, ಆಯೋಗದ ವರದಿ ಅನುಸರಸಿ ಇನ್ನೂ ಹೆಚ್ಚಿನ ಅನುದಾನದ ಅವಶ್ಯಕತೆ ಉಂಟಾದರೆ ಪೂರಕ ಅಂದಾಜಿನಲ್ಲಿ ಒದಗಿಸಲಾಗುವುದು ಎಂದು ಮುಖ್ಯಮಂತ್ರಿಗಳು ಸರ್ಕಾರಿ ನೌಕರರಿಗೆ ಭರವಸೆಯನ್ನು ಕೊಟ್ಟಿದ್ದಾರೆ.












Click it and Unblock the Notifications