ಸರ್ಕಾರಿ ನೌಕರರಿಗೆ ಸಿಹಿಸುದ್ದಿ; 7ನೇ ವೇತನ ಆಯೋಗಕ್ಕೆ ಅಧ್ಯಕ್ಷರ ನೇಮಕ
ಬೆಂಗಳೂರು, ನವೆಂಬರ್ 09; ಸರ್ಕಾರಿ ನೌಕರರಿಗೆ ಕರ್ನಾಟಕ ಸರ್ಕಾರ ಸಿಹಿಸುದ್ದಿ ನೀಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೌಕರರಿಗೆ ಕೊಟ್ಟ ಮಾತು ಉಳಿಸಿಕೊಂಡಿದ್ದಾರೆ. 7ನೇ ವೇತನ ಆಯೋಗಕ್ಕೆ ಅಧ್ಯಕ್ಷರನ್ನು ನೇಮಕ ಮಾಡಿದ್ದಾರೆ.
ಕರ್ನಾಟಕ ಸರ್ಕಾರ 7ನೇ ವೇತನ ಆಯೋಗದ ಅಧ್ಯಕ್ಷರನ್ನಾಗಿ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿಗಳಾಗಿದ್ದ ಸುಧಾಕರ್ ರಾವ್ ನೇಮಕ ಮಾಡಿದೆ. ಈ ಮೂಲಕ ಸರ್ಕಾರಿ ನೌಕರರ ಬೇಡಿಕೆ ಈಡೇರಿಸಿದೆ.
ಬುಧವಾರ ಬೆಳಗ್ಗೆ ದಾವಣಗೆರೆಯಲ್ಲಿ ಮಾತನಾಡಿದ್ದ ಮುಖ್ಯಮಂತ್ರಿಗಳು, "7ನೇ ವೇತನ ಆಯೋಗ ರಚನೆ ಮಾಡಲು ತೀರ್ಮಾನ ಮಾಡಿದ್ದೇವೆ. ನಿವೃತ್ತ ಮುಖ್ಯ ಮುಖ್ಯ ಕಾರ್ಯದರ್ಶಿ ಸುಧಾಕರ ರಾವ್ ನೇತೃತ್ವದಲ್ಲಿ ಏಳನೇ ವೇತನ ಆಯೋಗ ರಚನೆಯಾಗುತ್ತದೆ" ಎಂದು ಹೇಳಿದ್ದರು.

ನೌಕರರ ಸಂತಸ; 7ನೇ ವೇತನ ಆಯೋಗಕ್ಕೆ ಅಧ್ಯಕ್ಷರನ್ನು ನೇಮಕ ಮಾಡಿರುವುದಕ್ಕೆ ಸರ್ಕಾರಿ ನೌಕರರು ಸಂತಸ ವ್ಯಕ್ತಪಡಿಸಿದ್ದಾರೆ. ಆಯೋಗದ ಶಿಫಾರಸುಗಳು 2023ರ ಏಪ್ರಿಲ್ನಿಂದಲೇ ಜಾರಿಯಾಗುವ ನಿರೀಕ್ಷೆಯಲ್ಲಿ ಉದ್ಯೋಗಿಗಳಿದ್ದಾರೆ.
ಸುಧಾಕರ ರಾವ್ ನೇಮಕದ ಕುರಿತು ಸರ್ಕಾರದ ಅಧಿಕೃತ ಆದೇಶ ಪ್ರಕಟವಾಗಬೇಕಿದೆ. 7ನೇ ವೇತನ ಆಯೋಗ ರಚನೆಯಾದ ಬಳಿಕ ಎರಡು ತಿಂಗಳಿನಲ್ಲಿ ಮಧ್ಯಂತರ ವರದಿಯನ್ನು ಸಲ್ಲಿಸಬೇಕಾಗುತ್ತದೆ. ಸರ್ಕಾರ ಅಧಿಸೂಚನೆ ಪ್ರಕಟಿಸುವಾಗ ಆಯೋಗದ ವಿವರಗಳನ್ನು ಪ್ರಕಟಿಸಲಿದೆ.
ವೇತನ ಆಯೋಕ್ಕೆ ಅಧ್ಯಕ್ಷರ ನೇಮಕದ ಬಳಿಕ ಮಾತನಾಡಿದ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ. ಎಸ್. ಷಡಾಕ್ಷರಿ, "ಸರ್ಕಾರ ವೇತನ ಆಯೋಗ ರಚನೆ ಮಾಡಿ ಆದೇಶ ಹೊರಡಿಸುತ್ತಿರುವುದು ಖುಷಿಯ ವಿಚಾರ. ಸರ್ಕಾರಿ ನೌಕರರ ಬಗ್ಗೆ ವಿಶೇಷ ಕಾಳಜಿ ತೋರುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಧನ್ಯವಾದಗಳು" ಎಂದು ಹೇಳಿದ್ದಾರೆ.
ಮುಖ್ಯಮಂತ್ರಿಗಳಿಗೆ ಅಭಿನಂದನೆ; 7ನೇ ವೇತನ ಆಯೋಗ ರಚನೆ ಮಾಡಿದ ಮುಖ್ಯಮಂತ್ರಿಗಳಿಗೆ ಕರ್ನಾಟಕ ಸರ್ಕಾರಿ ನೌಕರರ ಸಂಘ ಅಭಿನಂದನೆ ಸಲ್ಲಿಸಲಿದೆ. ಗುರುವಾರ ಬೆಳಗ್ಗೆ 10.30ಕ್ಕೆ ಮುಖ್ಯಮಂತ್ರಿಗಳನ್ನು ಗೃಹ ಕಚೇರಿ ಕೃಷ್ಣದಲ್ಲಿ ನೌಕರರ ಸಂಘದ ಸದಸ್ಯರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ, ಅಭಿನಂದನೆ ಸಲ್ಲಿಸಲಿದ್ದಾರೆ ಎಂದು ಸಂಘದ ರಾಜ್ಯಾಧ್ಯಕ್ಷ ಸಿ. ಎಸ್. ಷಡಕ್ಷರಿ ತಿಳಿಸಿದ್ದಾರೆ.
ರಾಜ್ಯ ಸರ್ಕಾರಿ ನೌಕರರು ವೇತನ, ಭತ್ಯೆಗಳನ್ನು ಪರಿಷ್ಕರಿಸಲು 7ನೇ ವೇತನ ಆಯೋಗ ರಚನೆ ಮಾಡಬೇಕು ಎಂದು ಒತ್ತಾಯಿಸುತ್ತಲೇ ಬಂದಿದ್ದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಕ್ಟೋಬರ್ನಲ್ಲಿ ವೇತನ ಆಯೋಗ ರಚನೆ ಮಾಡಲಾಗುತ್ತದೆ ಎಂದು ಭರವಸೆ ನೀಡಿದ್ದರು.
ವೇತನ ಆಯೋಗ ವೇತನ ಪರಿಷ್ಕರಿಸಿ ಶಿಫಾರಸು ಮಾಡಲು ಸುಮಾರು 4 ತಿಂಗಳ ಕಾಲಾವಕಾಶ ಬೇಕಾಗುತ್ತದೆ ಎಂದು ಅಂದಾಜಿಸಲಾಗಿದೆ. 2023ರ ಮಾರ್ಚ್ ಬಳಿಕ ಆಯೋಗ ಸರ್ಕಾರಕ್ಕೆ ವರದಿ ನೀಡಬಹುದು ಎಂದು ಅಂದಾಜಿಸಲಾಗಿದೆ.
ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ 1966 ರಿಂದ 2017ರ ಅವಧಿಯಲ್ಲಿ 11 ವೇತನ ಆಯೋಗ ರಚನೆಯಾಗಬೇಕಿತ್ತು. ಆದರೆ ರಚನೆಯಾಗಿರುವುದು 6 ಮಾತ್ರ. 3 ಅಕಾರಿ ಸಮಿತಿ ಮತ್ತು ಒಂದು ಸಂಪುಟ ಉಪ ಸಮಿತಿ ರಚನೆಯಾಗಿದೆ.
ರಾಜ್ಯದ ಸರ್ಕಾರಿ ನೌಕರರು ಕೇಂದ್ರ ಸರ್ಕಾರಿ ನೌಕರರ ಮಾದರಿಯಲ್ಲಿ ಸಮಾನ ಕೆಲಸಕ್ಕೆ ಸಮಾನ ವೇತನ ಎಂಬ ಬೇಡಿಕೆ ಇಟ್ಟಿದ್ದಾರೆ. ಆದರೆ ಸರ್ಕಾರ ಕೇವಲ ಆಯೋಗ ರಚನೆ ಮಾಡಿ ಸುಮ್ಮನಾಗಲಿದೆಯೇ?, ಆಯೋಗದ ಶಿಫಾರಸು ಸಹ ಜಾರಿಗೆ ತರಲಿದೆಯೇ? ಕಾದು ನೋಡಬೇಕಿದೆ.
ರಾಜ್ಯದಲ್ಲಿ ಸುಮಾರು 7 ಲಕ್ಷ ಸರ್ಕಾರಿ ನೌಕರರು ಇದ್ದಾರೆ. 2023ರಲ್ಲಿ ರಾಜ್ಯದಲ್ಲಿ ಚುನಾವಣೆ ಇರುವುದರಿಂದ ವೋಟ್ ಬ್ಯಾಂಕ್ ಮೇಲೆ ಕಣ್ಣಿಟ್ಟಿರುವ ಬಿಜೆಪಿ ಸರ್ಕಾರಿ ನೌಕರರಿಗೆ ಶುಭ ಸುದ್ದಿ ನೀಡುವ ನಿರೀಕ್ಷೆಯೂ ಇದೆ.












Click it and Unblock the Notifications