7th Pay Commission; ಆಯೋಗದ ಅವಧಿ ವಿಸ್ತರಣೆ, ಸರ್ಕಾರಿ ನೌಕರರ ಪ್ರಶ್ನೆ
ಬೆಂಗಳೂರು, ನವೆಂಬರ್ 21: ಕರ್ನಾಟಕದ ಕಾಂಗ್ರೆಸ್ ಸರ್ಕಾರ ಸರ್ಕಾರಿ ನೌಕರರಿಗೆ ನಿರಾಸೆ ಉಂಟು ಮಾಡಿದೆ. ವೇತನ ಪರಿಷ್ಕರಣೆಗಾಗಿ ನೌಕರರು ಕಾದು ಕುಳಿತಿದ್ದರು. ಆದರೆ ರಾಜ್ಯ ಸರ್ಕಾರ ಕೆ. ಸುಧಾಕರ್ ರಾವ್ ಅಧ್ಯಕ್ಷತೆಯ 7ನೇ ರಾಜ್ಯ ವೇತನ ಆಯೋಗದ ಅವಧಿಯನ್ನು 15/3/2024ರವರೆಗೆ ವಿಸ್ತರಿಸಿ ಆದೇಶಿಸಿದೆ.
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಉಮಾ ಕೆ. ಸರ್ಕಾರದ ಜಂಟಿ ಕಾರ್ಯದರ್ಶಿ, ಆರ್ಥಿಕ ಇಲಾಖೆ (ಸೇವೆಗಳು-2) 7ನೇ ರಾಜ್ಯ ವೇತನ ಆಯೋಗದ ಅವಧಿಯನ್ನು ವಿಸ್ತರಿಸುವ ಬಗ್ಗೆ ಆದೇಶ ಹೊರಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಎರಡು ಬಾರಿ ವೇತನ ಆಯೋಗದ ಅವಧಿ ವಿಸ್ತರಣೆ ಮಾಡಿದೆ.

ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಇದ್ದಾಗ, ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾಗ ರಾಜ್ಯ ಸರ್ಕಾರಿ ನೌಕರರ ವೇತನ ಶ್ರೇಣಿಗಳನ್ನು ಪರಿಷ್ಕರಿಸಲು ಮತ್ತು ನೂತನ ವೇತನ ರಚನೆ ಇತ್ಯಾದಿಗಳನ್ನು ರೂಪಿಸಲು ದಿನಾಂಕ 19/11/2022ರಂದು 7ನೇ ರಾಜ್ಯ ವೇತನ ಆಯೋಗವನ್ನು ರಚಿಸಿ ಆದೇಶ ಹೊರಡಿಸಲಾಗಿತ್ತು.
ಬಳಿಕ ದಿನಾಂಕ 15/05/2023ರ ಸರ್ಕಾರಿ ಆದೇಶದಲ್ಲಿ 7ನೇ ರಾಜ್ಯ ವೇತನ ಆಯೋಗದ ಕಾಲಾವಧಿಯನ್ನು ದಿನಾಂಕ 18/11/202ರ ತನಕ ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿತ್ತು. ಈಗ ಸರ್ಕಾರ 7ನೇ ರಾಜ್ಯ ವೇತನ ಆಯೋಗವು ತನ್ನ ಕಾರ್ಯಕಲಾಪಗಳನ್ನು ಪೂರ್ಣಗೊಳಿಸಿ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಲು ಅನುಕೂಲವಾಗುವಂತೆ, ಆಯೋಗದ ಕಾಲಾವಧಿಯನ್ನು ದಿನಾಂಕ 15/3/2024ರವರೆಗೆ ವಿಸ್ತರಿಸಿದೆ.
8 ತಿಂಗಳಿಗೆ ವರದಿ ನೀಡಿದ್ದ ಆಯೋಗ; ರಾಜ್ಯದ ಸರ್ಕಾರಿ ನೌಕರರು ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗಲೇ 6ನೇ ವೇತನ ಆಯೋಗ 8 ತಿಂಗಳಿಗೆ ವರದಿ ನೀಡಿದ್ದನ್ನು ನೆನಪು ಮಾಡಿಕೊಂಡಿದ್ದಾರೆ. ಈಗ ಹಣಕಾಸು ಸಚಿವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಆಗಿದ್ದದಾರೆ. ಆದರೆ ಆಯೋಗವ ಅವಧಿ ವಿಸ್ತರಣೆ ಮಾಡುತ್ತಿರುವುದು ಏಕೆ? ಎಂದು ಪ್ರಶ್ನೆ ಮಾಡಿದ್ದಾರೆ.
2013-18ರ ತನಕ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದರು. ಜೂನ್ 1, 2017ರಂದು ಅವರು 6ನೇ ವೇತನ ಆಯೋಗ ರಚನೆ ಮಾಡಿದ್ದರು. ವೇತನ ಆಯೋಗ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಕುರಿತು 8 ತಿಂಗಳಿನಲ್ಲಿಯೇ (ಮಾರ್ಚ್ 31, 2018) ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಿತ್ತು.
ಆಗ ವಿಧಾನಸಭೆ ಚುನಾವಣೆ ಹತ್ತಿರವಿದ್ದ ಕಾರಣ ಸರ್ಕಾರ ಸಹ ಮಾರ್ಚ್ನಲ್ಲಿಯೇ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಿತ್ತು. ಅಂದು ವೇತನ ಪರಿಷ್ಕರಣೆ ಕಾರಣ ಸರ್ಕಾರಕ್ಕೆ ಸುಮಾರು 10,500 ಕೋಟಿ ಹೆಚ್ಚುವರಿ ಹೊರೆಯಾಗಿತ್ತು.
ಕರ್ನಾಟಕ ಸರ್ಕಾರ ನವೆಂಬರ್ನಲ್ಲಿಯೇ 7ನೇ ರಾಜ್ಯ ವೇತನ ಆಯೋಗದ ವರದಿ ಸ್ವೀಕಾರ ಮಾಡಲಿದೆ ಎಂದು ಅಂದಾಜಿಸಲಾಗಿತ್ತು. ಆದರೆ ವೇತನ ಆಯೋಗದ ಅವಧಿಯನ್ನು 2024ರ ಮಾರ್ಚ್ ತನಕ ವಿಸ್ತರಣೆ ಮಾಡಲಾಗಿದೆ. ಆದ್ದರಿಂದ ವೇತನ ಪರಿಷ್ಕರಣೆಯ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ನಿರಾಸೆಯಾಗಿದೆ.
ಸೆಪ್ಟೆಂಬರ್ 29ರಂದು ವೇತನ ಆಯೋಗದ ಅಧ್ಯಕ್ಷ ಸುಧಾಕರ್ ರಾವ್ ಹಾಗೂ ಸದಸ್ಯರ ನಿಯೋಗ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾಗಿತ್ತು. ಆದ್ದರಿಂದ ಆಯೋಗ ವರದಿಯನ್ನು ನವೆಂಬರ್ನಲ್ಲಿಯೇ ನೀಡಲಿದೆ ಎಂದು ನಿರೀಕ್ಷೆ ಮಾಡಲಾಗಿತ್ತು.
ಈಗ ರಾಜ್ಯದ ರಾಜಕೀಯ ಚಿತ್ರಣ ಬೇರೆ ಆಗಿದೆ. ಕರ್ನಾಟಕ ಕಾಂಗ್ರೆಸ್ ಐದು ಗ್ಯಾರಂಟಿಗಳನ್ನು ರಾಜ್ಯದ ಜನರಿಗೆ ನೀಡಿ ರಾಜ್ಯದಲ್ಲಿ ಅಧಿಕಾರ ಪಡೆದಿದೆ. 4 ಗ್ಯಾರಂಟಿಗಳನ್ನು ಜಾರಿಗೆ ತಂದಿರುವ ಸರ್ಕಾರ ಆ ಯೋಜನೆಗಳಿಗೆ ಹಣ ಹೊಂದಿಕೆ ಮಾಡಲು ಪ್ರಯತ್ನ ನಡೆಸಿದೆ. ಈಗ 7ನೇ ವೇತನ ಆಯೋಗದ ವರದಿ ಸ್ವೀಕಾರ ಮಾಡಿದರೂ ಸಹ ವೇತನ ಪರಿಷ್ಕರಣೆ ಮಾಡುವ ಸ್ಥಿತಿಯಲ್ಲಿ ಹಣಕಾಸು ಪರಿಸ್ಥಿತಿ ಇಲ್ಲ.
7ನೇ ರಾಜ್ಯ ವೇತನ ಆಯೋಗದ ವರದಿ ಸ್ವೀಕಾರ ಮಾಡಿದರೆ ಸರ್ಕಾರಿ ನೌಕರರು ವೇತನ ಪರಿಷ್ಕರಣೆಗೆ ಪಟ್ಟು ಹಿಡಿಯಲಿದ್ದಾರೆ. ಇದರಿಂದಾಗಿ ಸರ್ಕಾರಕ್ಕೆ ಸುಮಾರು 8 ಸಾವಿರ ಕೋಟಿ ರೂ. ಹೆಚ್ಚುವರಿ ಹೊರೆ ಆಗಲಿದೆ ಎಂದು ಅಂದಾಜಿಸಲಾಗಿದೆ. ಆದ್ದರಿಂದ ಸರ್ಕಾರ ಆಯೋಗದ ಅವಧಿಯನ್ನು ಮಾರ್ಚ್ ತನಕ ವಿಸ್ತರಣೆ ಮಾಡಿದೆ. 2024-25ರ ಬಜೆಟ್ನಲ್ಲಿ ಆದಾಯ ಸಂಗ್ರಹದ ಮೂಲಕ ವರದಿ ಶಿಫಾರಸು ಜಾರಿಯ ತಂತ್ರ ರೂಪಿಸಿದೆ ಎಂಬ ಮಾತಿದೆ.












Click it and Unblock the Notifications