7th Pay Commission; ವೇತನ ಪರಿಷ್ಕರಣೆ, ಸರ್ಕಾರಿ ನೌಕರರಿಗೆ ನಿರಾಸೆ
ಬೆಂಗಳೂರು, ನವೆಂಬರ್ 07; ಕರ್ನಾಟಕದ ಸರ್ಕಾರಿ ನೌಕರರಿಗೆ ನಿರಾಸೆಯಾಗಿದೆ. ವೇತನ ಪರಿಷ್ಕರಣೆಗಾಗಿ ಕಾದು ಕುಳಿತಿದ್ದ ನೌಕರರು ರಾಜ್ಯ ಸರ್ಕಾರ ಸುಧಾಕರ್ ರಾವ್ ಅಧ್ಯಕ್ಷತೆಯ 7ನೇ ರಾಜ್ಯ ವೇತನ ಆಯೋಗದ ವರದಿಯನ್ನು ನವೆಂಬರ್ನಲ್ಲಿ ಸ್ವೀಕಾರ ಮಾಡಲಿದೆ ಎಂದು ಅಂದಾಜಿಸಿತ್ತು. ಆದರೆ ಸರ್ಕಾರ ವೇತನ ಆಯೋಗದ ಅವಧಿ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.
ಸೋಮವಾರ ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಉಮಾ ಕೆ. ಸರ್ಕಾರದ ಜಂಟಿ ಕಾರ್ಯದರ್ಶಿ, ಆರ್ಥಿಕ ಇಲಾಖೆ (ಸೇವೆಗಳು-2) ಈ ಕುರಿತು ಆದೇಶ ಹೊರಡಿಸಿದ್ದಾರೆ. ಆದೇಶ 7ನೇ ರಾಜ್ಯ ವೇತನ ಆಯೋಗದ ಅವಧಿಯನ್ನು ವಿಸ್ತರಿಸುವ ಬಗ್ಗೆ ಎಂಬ ವಿಷಯವನ್ನು ಒಳಗೊಂಡಿದೆ.

ಸರ್ಕಾರದ ಆದೇಶ ದಿನಾಂಕ 19/11/2022, ದಿನಾಂಕ 01/12/2022ರ ಸರ್ಕಾರಿ ಆದೇಶ, ದಿನಾಂಕ 08/03/2023ರ ಸರ್ಕಾರಿ ಆದೇಶ ಮತ್ತು ದಿನಾಂಕ 15/05/2023ರ ಸರ್ಕಾರಿ ಆದೇಶವನ್ನು ಉಲ್ಲೇಖ ಮಾಡಲಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ 2ನೇ ಬಾರಿಗೆ ರಾಜ್ಯ ವೇತನ ಆಯೋಗದ ಅವಧಿ ವಿಸ್ತರಣೆ ಮಾಡಲಾಗಿದೆ.
ಆದೇಶದ ವಿವರ; ರಾಜ್ಯ ಸರ್ಕಾರಿ ನೌಕರರ ವೇತನ ಶ್ರೇಣಿಗಳನ್ನು ಪರಿಷ್ಕರಿಸಲು ಮತ್ತು ನೂತನ ವೇತನ ರಚನೆ ಇತ್ಯಾದಿಗಳನ್ನು ರೂಪಿಸಲು ದಿನಾಂಕ 19/11/2022ರ ಸರ್ಕಾರಿ ಆದೇಶದಲ್ಲಿ 7ನೇ ರಾಜ್ಯ ವೇತನ ಆಯೋಗವನ್ನು ರಚಿಸಲಾಗಿರುತ್ತದೆ. ದಿನಾಂಕ 15/05/2023ರ ಸರ್ಕಾರಿ ಆದೇಶದಲ್ಲಿ 7ನೇ ರಾಜ್ಯ ವೇತನ ಆಯೋಗದ ಕಾಲಾವಧಿಯನ್ನು ವಿಸ್ತರಿಸಲಾಗಿರುತ್ತದೆ ಎಂದು ಹೇಳಿದೆ.
ಪ್ರಸ್ತುತ 7ನೇ ರಾಜ್ಯ ವೇತನ ಆಯೋಗದ ಕಾಲಾವಧಿಯು ದಿನಾಂಕ 18/11/2023ಕ್ಕೆ ಕೊನೆಗೊಳ್ಳುತ್ತಿದ್ದು, ಸರ್ಕಾರವು ಈ ಆದೇಶವನ್ನು ಹೊರಡಿಸಿದೆ ಎಂದು ಹೇಳಿದ್ದು, 7ನೇ ರಾಜ್ಯ ವೇತನ ಆಯೋಗವು ತನ್ನ ಕಾರ್ಯಕಲಾಪಗಳನ್ನು ಪೂರ್ಣಗೊಳಿಸಿ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಲು ಅನುಕೂಲವಾಗುವಂತೆ, ಆಯೋಗದ ಕಾಲಾವಧಿಯನ್ನು ದಿನಾಂಕ 15/3/2024ರವರೆಗೆ ವಿಸ್ತರಿಸಿ ಆದೇಶಿಸಿದೆ ಎಂದು ಆದೇಶ ತಿಳಿಸಿದೆ.
ಕರ್ನಾಟಕ ಸರ್ಕಾರ ನವೆಂಬರ್ನಲ್ಲಿಯೇ 7ನೇ ರಾಜ್ಯ ವೇತನ ಆಯೋಗದ ವರದಿ ಸ್ವೀಕಾರ ಮಾಡಲಿದೆ ಎಂದು ಅಂದಾಜಿಸಲಾಗಿತ್ತು. ಆದರೆ ವೇತನ ಆಯೋಗದ ಅವಧಿಯನ್ನು 2024ರ ಮಾರ್ಚ್ ತನಕ ವಿಸ್ತರಣೆ ಮಾಡಲಾಗಿದೆ. ಆದ್ದರಿಂದ ವೇತನ ಪರಿಷ್ಕರಣೆಯ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ನಿರಾಸೆಯಾಗಿದೆ.
ಸೆಪ್ಟೆಂಬರ್ 29ರಂದು ವೇತನ ಆಯೋಗದ ಅಧ್ಯಕ್ಷ ಸುಧಾಕರ್ ರಾವ್ ಹಾಗೂ ಸದಸ್ಯರ ನಿಯೋಗ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾಗಿತ್ತು. ಆದ್ದರಿಂದ ಆಯೋಗ ವರದಿಯನ್ನು ನವೆಂಬರ್ನಲ್ಲಿಯೇ ನೀಡಲಿದೆ ಎಂದು ನಿರೀಕ್ಷೆ ಮಾಡಲಾಗಿತ್ತು.
2024-25ರ ಬಜೆಟ್; ವೇತನ ಆಯೋಗದ ಅವಧಿಯನ್ನು ಮಾರ್ಚ್ 15, 2024ರ ತನಕ ವಿಸ್ತರಣೆ ಮಾಡಲಾಗಿದೆ. ಆದ್ದರಿಂದ ಫೆಬ್ರವರಿಯಲ್ಲಿ ಮಂಡನೆಯಾಗಲಿರುವ 2024-25ನೇ ಸಾಲಿನ ಬಜೆಟ್ನಲ್ಲಿ ಸರ್ಕಾರಿ ನೌಕರರಿಗೆ ಯಾವ ಭರವಸೆ ನೀಡಲಾಗುತ್ತದೆ? ಎಂದು ಕಾದು ನೋಡಬೇಕಿದೆ. ಏಪ್ರಿಲ್ ಅಥವ ಮೇ ತಿಂಗಳಿನಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಆದ್ದರಿಂದ ನೀತಿ ಸಂಹಿತೆ ಜಾರಿಗೆ ಬಂದರೆ ವೇತನ ಪರಿಷ್ಕರಣೆಯ ಬಗ್ಗೆ ಸರ್ಕಾರದ ಘೋಷಣೆ ಮತ್ತಷ್ಟು ಮುಂದಕ್ಕೆ ಹೋಗಲಿದೆ.
ಸರ್ಕಾರಿ ನೌಕರರು ವೇತನ ಆಯೋಗದ ವರದಿ ಎದುರು ನೋಡುತ್ತಿದ್ದಾರೆ. ವರದಿ ಸಲ್ಲಿಕೆಯಾದ ತಕ್ಷಣ ವೇತನ ಪರಿಷ್ಕರಣೆಗೆ ಒತ್ತಾಯ ಕೇಳಿ ಬರಲಿದೆ. ಗ್ಯಾರಂಟಿ ಯೋಜನೆಗಳ ಜಾರಿ ಬಳಿಕ ಸಂಪನ್ಮೂಲ ಸಂಗ್ರಹತ್ತ ಗಮನ ಹರಿಸಿದೆ. ಇಂತಹ ಸಂದರ್ಭದಲ್ಲಿ ವೇತನ ಪರಿಷ್ಕರಣೆ ಕಷ್ಟಸಾಧ್ಯ. ಆದ್ದರಿಂದ ಆರ್ಥಿಕ ಇಲಾಖೆ 7ನೇ ರಾಜ್ಯ ವೇತನ ಆಯೋಗದ ಅವಧಿ ವಿಸ್ತರಣೆ ಮಾಡುವ ಕುರಿತು ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಕೆ ಮಾಡಿತ್ತು. ಅದಕ್ಕೆ ಈಗ ಒಪ್ಪಿಗೆ ಸಿಕ್ಕಿದೆ.
2023ರ ಮಾರ್ಚ್ನಲ್ಲಿ ರಾಜ್ಯದ ಸರ್ಕಾರಿ ನೌಕರರು ಮುಷ್ಕರ ಆರಂಭಿಸಿದ್ದರು. ಆಗ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ 7ನೇ ರಾಜ್ಯ ವೇತನ ಆಯೋಗದ ಅಂತಿಮ ವರದಿಯನ್ನು ಕಾಯ್ದಿರಿಸಿ ಮೂಲ ವೇತನದ ಶೇ 17ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಿತ್ತು. ಏಪ್ರಿಲ್ನಿಂದಲೇ ಸರ್ಕಾರಿ ನೌಕರರಿಗೆ ಮಧ್ಯಂತರ ಪರಿಹಾರದ ಲಾಭ ಸಿಕ್ಕಿತ್ತು. ಇದರಿಂದಾಗಿ ರಾಜ್ಯದ ಬೊಕ್ಕಸಕ್ಕೆ ಸುಮಾರು 10,500 ಕೋಟಿ ರೂ. ಹೆಚ್ಚುವರಿ ಹೊರೆಯಾಗಿದೆ.












Click it and Unblock the Notifications