7th Pay Commission: 7 ನೇ ವೇತನ ಆಯೋಗ ಜಾರಿ: ಶೇ.27ರಷ್ಟು ವೇತನ ಹೆಚ್ಚಳ?
ಬೆಂಗಳೂರು, ಜೂನ್ 21: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರವು ರಾಜ್ಯ ಸರ್ಕಾರಿ ನೌಕರರಿಗೆ 7 ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೆ ತರಲು ಕುರಿತು ಚರ್ಚೆ ನಡೆದಿದೆ. ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೆಲ ನಿರ್ಧಾರ ಕೈಗೊಳ್ಳಲಾಗಿದೆ.
ಬಹುದಿನಗಳಿಂದ ಸರ್ಕಾರಿ ನೌಕರರು 7 ನೇ ವೇತನ ಆಯೋಗ ಜಾರಿ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ಭೇಟಿ ಮಾಡಿ ಒತ್ತಡ ಹಾಕಿದ್ರು. ಇದೀಗ ಸರ್ಕಾರಿ ನೌಕರರ ವೇತನ ಹೆಚ್ಚಳ ಸೇರಿದಂತೆ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಲು ಸಂಪುಟವು ಮುಖ್ಯಮಂತ್ರಿಗೆ ಅಧಿಕಾರ ನೀಡಿದೆ. ಕೆಲ ಸಚಿವರು ಶೇ.25ರಷ್ಟು ಹೆಚ್ಚಳ ಮಾಡುವಂತೆ ಸೂಚಿಸಿದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಶೇ.27ರಷ್ಟು ಹೆಚ್ಚಳಕ್ಕೆ ಒಲವು ತೋರಿದ್ದಾರೆ ಎಂದು ಹೇಳಲಾಗಿದೆ.

ಮಾಜಿ ಮುಖ್ಯ ಕಾರ್ಯದರ್ಶಿ ಕೆ.ಸುಧಾಕರ್ ರಾವ್ ನೇತೃತ್ವದ 7 ನೇ ವೇತನ ಆಯೋಗವು ಮಾರ್ಚ್ 16 ರಂದು ತನ್ನ ಅಂತಿಮ ವರದಿಯನ್ನು ಸಲ್ಲಿಸಿದ್ದು, ಕರ್ನಾಟಕ ಸರ್ಕಾರಿ ನೌಕರರಿಗೆ ಮೂಲ ವೇತನದಲ್ಲಿ 27.5% ವೇತನ ಹೆಚ್ಚಳಕ್ಕೆ ಶಿಫಾರಸು ಮಾಡಿತ್ತು. ಶಿಫಾರಸುಗಳನ್ನು ಜಾರಿಗೊಳಿಸಲು ಜೂನ್ ಅಂತ್ಯಕ್ಕೆ ಗಡುವು ನಿಗದಿಪಡಿಸಲಾಗಿದೆ.
ಸರಕಾರ ಅಂತಿಮ ವರದಿಯನ್ನು ಜಾರಿಗೊಳಿಸಿದರೆ ಸರಕಾರಿ ನೌಕರರ ಕನಿಷ್ಠ ವೇತನ ಮಾಸಿಕ 17,000 ರೂ.ನಿಂದ 27,000 ರೂ.ಗೆ ಏರಿಕೆಯಾಗಲಿದೆ. ಈ ಹೆಚ್ಚಳವು ರಾಜ್ಯದಾದ್ಯಂತ ಸುಮಾರು 1.2 ಮಿಲಿಯನ್ ಉದ್ಯೋಗಿಗಳು ಮತ್ತು ಪಿಂಚಣಿದಾರರಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ನಿರೀಕ್ಷಿಸಲಾಗಿದೆ.
ಈ ಬೆಳವಣಿಗೆಯಿಂದ ರಾಜ್ಯದ ಖಜಾನೆಗೆ ಗಣನೀಯ ಹೊರೆಯಾಗುವುದಿಲ್ಲ ಎಂದು ಕರ್ನಾಟಕ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ತಿಳಿಸಿದ್ದು, ವೇತನ ಆಯೋಗದ ಶಿಫಾರಸುಗಳನ್ನು ಸ್ವೀಕರಿಸುವ ಮುಖ್ಯಮಂತ್ರಿಯವರ ನಿರ್ಧಾರವನ್ನು ನಾವು ಪ್ರಶಂಸಿಸುತ್ತೇವೆ ಎಂದು ಹೇಳಿದರು. ಸರ್ಕಾರಿ ನೌಕರರು ರಾಜ್ಯದ ಬೊಕ್ಕಸಕ್ಕೆ ಗಣನೀಯ ಸಂಪನ್ಮೂಲಗಳನ್ನು ಉತ್ಪಾದಿಸುತ್ತಾರೆ ಮತ್ತು ಹಂಚಿಕೆ ಮಾಡುತ್ತಾರೆ ಎಂದು ಹೇಳಲಾಗಿದೆ.
ಷಡಕ್ಷರಿ ಅವರು ಇತ್ತೀಚೆಗೆ ರಾಜ್ಯ ಸರಕಾರಕ್ಕೆ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಲು ಜೂನ್ ಗಡುವು ನೀಡಿದ್ದು, ನಿರ್ಲಕ್ಷ್ಯ, ಉದಾಸೀನತೆ ತೋರಿದರೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು. ಇದೀಗ ಸಂಪುಟದಲ್ಲಿ ಚರ್ಚೆಯಾಗಿದ್ದು, 7ನೇ ವೇತನ ಆಯೋಗದ ಶಿಫಾರಸ್ಸುಗಳ ಜಾರಿ ಕುರಿತು ಅಧಿಕೃತ ಘೋಷಣೆ ಶೀಘ್ರದಲ್ಲೇ ಹೊರಬೀಳಲಿದೆ.












Click it and Unblock the Notifications