7th Pay Commission; ಸರ್ಕಾರಕ್ಕೆ ಆರ್ಥಿಕ ತಜ್ಞರ ಎಚ್ಚರಿಕೆ
ಬೆಂಗಳೂರು, ಡಿಸೆಂಬರ್ 19; ಕರ್ನಾಟಕ ಸರ್ಕಾರ 7ನೇ ರಾಜ್ಯ ವೇತನ ಆಯೋಗದ ವರದಿಯನ್ನು ಪಡೆದು ಯಾವಾಗ ಜಾರಿ ಮಾಡಲಿದೆ? ಎಂದು ಸರ್ಕಾರಿ ನೌಕರರು ಕಾಯುತ್ತಿದ್ದಾರೆ. ಆಯೋಗದ ಶಿಫಾರಸು ಜಾರಿ ಮಾಡಲು ಮುಂದಾದರೆ ಸರ್ಕಾರಕ್ಕೆ ಎಷ್ಟು ಆರ್ಥಿಕ ಹೊರೆಯಾಗಲಿದೆ? ಎಂಬ ಲೆಕ್ಕಾಚಾರ ನಡೆಯುತ್ತಿದೆ.
7ನೇ ರಾಜ್ಯ ವೇತನ ಆಯೋಗದ ಶಿಫಾರಸಿನ ಅನ್ವಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಮಾಡಲು ಸರ್ಕಾರ ಅನುದಾನ ಮೀಸಲಿಟ್ಟಿಲ್ಲ. ಸರ್ಕಾರ ದಿನಾಂಕ 6/11/2023ರಂದು ಆದೇಶವೊಂದನ್ನು ಹೊರಡಿಸಿ ಆಯೋಗದ ಕಾಲಾವಧಿಯನ್ನು ದಿನಾಂಕ 15/3/2023ರ ತನಕ ವಿಸ್ತರಣೆ ಮಾಡಿದೆ.

ಬೆಳಗಾವಿ ಅಧಿವೇಶನದಲ್ಲಿ ವಿಧಾನ ಪರಿಷತ್ನಲ್ಲಿ 7ನೇ ವೇತನ ಆಯೋಗದ ಕುರಿತು ಪ್ರಶ್ನೆ ಮಾಡಲಾಗಿತ್ತು. ಆಗ ಮುಖ್ಯಮಂತ್ರಿಗಳ ಲಿಖಿತ ಉತ್ತರದಲ್ಲಿ, 2024ರ ಮಾರ್ಚ್ 15ಕ್ಕೆ ವೇತನ ಆಯೋಗದ ಅಂತಿಮ ವರದಿ ಬರಲಿದೆ. ಆ ಬಳಿಕ ಸೂಕ್ತ ನಿರ್ಧಾರ ಕೈಗೊಂಡು ನೌಕರರಿಗೆ ನ್ಯಾಯ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಭರವಸೆ ನೀಡಲಾಗಿದೆ.
ಆರ್ಥಿಕ ತಜ್ಞರ ಎಚ್ಚರಿಕೆ; ಕಾಂಗ್ರೆಸ್ ಸರ್ಕಾರಕ್ಕೆ ಆರ್ಥಿಕ ತಜ್ಞರು ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಈಗಾಗಲೇ 5 ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವ ಮೂಲಕ ಆರ್ಥಿಕ ಹೊರೆಯನ್ನು ಹೆಚ್ಚಿಸಿಕೊಂಡಿರುವ ಸರ್ಕಾರ 7ನೇ ರಾಜ್ಯ ವೇತನ ಆಯೋಗದ ಶಿಫಾರಸು ಜಾರಿಗೊಳಿಸಬೇಕಾದರೆ ಸುಮಾರು 12 ಸಾವಿರ ಕೋಟಿ ರೂ. ಹೊರೆ ಎದುರಿಸಬೇಕು ಎಂದು ತಿಳಿಸಲಾಗಿದೆ.
ರಾಜ್ಯದಲ್ಲಿ 6.80 ಲಕ್ಷ ಸರ್ಕಾರಿ ನೌಕರರು ಇದ್ದಾರೆ. ಆದರೆ 2.55 ಲಕ್ಷ ಹುದ್ದೆಗಳು ಖಾಲಿ ಇವೆ. ಹೊಸ ನೇಮಕಾತಿಗೆ ಸಹ ಸರ್ಕಾರ ಮುಂದಾಗಿದೆ. ಅಲ್ಲದೇ ಹಾಲಿ ನೌಕರರ ವೇತನಕ್ಕಾಗಿಯೇ ಸರ್ಕಾರ 65 ಸಾವಿರ ಕೋಟಿ ರೂ. ಭರಿಸುತ್ತಿದೆ. ವೇತನ ಆಯೋಗದ ಶಿಫಾರಸು ಅನ್ವಯ ವೇತನ ಪರಿಷ್ಕರಣೆ ಮಾಡಲು ಮುಂದಾದರೆ ಹೆಚ್ಚುವರಿ ವೆಚ್ಚವನ್ನು ಭರಿಸಲು ಸಹ ಸರ್ಕಾರ ಸಿದ್ಧವಾಗಬೇಕಿದೆ.
ವೇತನ ಪರಿಷ್ಕರಣೆ ಬಳಿಕ ಸರ್ಕಾರ ವೇತನಕ್ಕಾಗಿಯೇ 77 ಸಾವಿರ ಕೋಟಿ ರೂ. ಮೀಸಲಿಡಬೇಕು. ಖಾಲಿ ಇರುವ ವಿವಿಧ ಇಲಾಖೆಗಳ ಹುದ್ದೆಗಳು ಭರ್ತಿಯಾದರೆ ಸುಮಾರು 1 ಲಕ್ಷ ಕೋಟಿ ರೂ. ವೇತನಕ್ಕಾಗಿಯೇ ಖರ್ಚಾಗಲಿದೆ ಎಂದು ಆರ್ಥಿಕ ತಜ್ಞರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು, ಕಾಮಗಾರಿಗಳು, ಸರ್ಕಾರಿ ನೌಕರರ ವೇತನ ಹೀಗೆ ಅನುದಾನ ಹೊಂದಿಸಲು ಆದಾಯಗಳಿಕೆಗೆ ಹೊಸ ಮಾರ್ಗವನ್ನು ಹುಡುಕುವುದು ಅನಿವಾರ್ಯವಾಗಲಿದೆ. ಆದ್ದರಿಂದ ರಾಜ್ಯದ 2024-25ರ ಬಜೆಟ್ ಸಹ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಅನಗತ್ಯ ವೆಚ್ಚಗಳಿಗೆ ಕಡಿವಾಣ ಹಾಕಬೇಕು, ಖಾಲಿ ಹುದ್ದೆಗಳ ನೇಮಕಾತಿ ಬದಲು ಹೊರ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಹಣಕಾಸು ಸಚಿವರು. ಆದ್ದರಿಂದ ಆದಾಯ ಸಂಗ್ರಹಕ್ಕೆ ಅವರು ಯಾವ ಕ್ರಮ ಕೈಗೊಳ್ಳಲಿದ್ದಾರೆ? ಎಂದು ಕಾದು ನೋಡಬೇಕು.
ಸರ್ಕಾರಕ್ಕೆ 7ನೇ ರಾಜ್ಯ ವೇತನ ಆಯೋಗದ ವರದಿ 2024ರ ಮಾರ್ಚ್ನಲ್ಲಿ ಸಲ್ಲಿಕೆಯಾಗುವ ನಿರೀಕ್ಷೆ ಇದೆ. ಆದರೆ ಅದಕ್ಕೂ ಮೊದಲು ಬಜೆಟ್ ಮಂಡನೆಯಾಗಿರುತ್ತದೆ. ಆದ್ದರಿಂದ ಸರ್ಕಾರ 2024-25ರ ಬಜೆಟ್ನಲ್ಲಿ ವೇತನ ಆಯೋಗ ವರದಿ ಜಾರಿಗಾಗಿಯೇ ಅನುದಾನ ಮೀಸಲಿಡಲಿದೆಯೇ? ಎಂಬುದಕ್ಕೆ ಸ್ಪಷ್ಟವಾದ ಭರವಸೆ ಸಿಕ್ಕಿಲ್ಲ.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗ, ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾಗ ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳನ್ನು ಪರಿಶೀಲಿಸಲು ದಿನಾಂಕ 9/11/2022ರ ಸರ್ಕಾರಿ ಆದೇಶದಲ್ಲಿ ತ್ರಿ ಸದಸ್ಯರ 7ನೇ ರಾಜ್ಯ ವೇತನ ಆಯೋಗವನ್ನು ರಚಿಸಿ ಆದೇಶಿಸಲಾಗಿತ್ತು. ಚುನಾವಣೆ ಮುಗಿದು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಎರಡು ಬಾರಿ ಆಯೋಗದ ಅವಧಿ ವಿಸ್ತರಣೆ ಮಾಡಲಾಗಿದೆ.
ಸರ್ಕಾರದ ನಿವೃತ್ತ ಮುಖ್ಯಕಾರ್ಯದರ್ಶಿ ಕೆ. ಸುಧಾಕರ್ ರಾವ್ ಅಧ್ಯಕ್ಷತೆಯ ರಾಜ್ಯ 7ನೇ ವೇತನ ಆಯೋಗ ನವೆಂಬರ್ನಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿತ್ತು. ಆಗ ಸರ್ಕಾರಿ ನೌಕರರು ವರದಿ ಸಲ್ಲಿಕೆಯಾಗಲಿದೆ. ಈ ವರ್ಷವೇ ವೇತನ ಪರಿಷ್ಕರಣೆ ಆಗಲಿದೆ ಎಂಬ ನಿರೀಕ್ಷೆಯಲ್ಲಿದ್ದರು. ಆದರೆ ವೇತನ ಆಯೋಗದ ಅವಧಿಯನ್ನು 2024ರ ಮಾರ್ಚ್ ತನಕ ವಿಸ್ತರಣೆ ಮಾಡಲಾಗಿದೆ.












Click it and Unblock the Notifications