7th Pay Commission: 7 ನೇ ವೇತನ ಆಯೋಗದ ಶಿಫಾರಸು ಆಗಸ್ಟ್ನಲ್ಲಿ ಜಾರಿ? ಸಿದ್ದರಾಮಯ್ಯ ಕೊಟ್ಟ ಸೂಚನೆ ಏನು?
ಬೆಂಗಳೂರು,ಜುಲೈ 09: ಸರ್ಕಾರಿ ನೌಕರರು ಬಹುದಿನಗಳಿಂದ 7 ನೇ ವೇತನ ಆಯೋಗ ಶಿಫಾರಸು ಕುರಿತು ಹೋರಾಟ ನಡೆಸುತ್ತಿದ್ದಾರೆ. ಕಳೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆಯಾಗದ ಹಿನ್ನೆಲೆ ಪ್ರತಿಭಟನೆಗೆ ಸರ್ಕಾರಿ ನೌಕರರು ಮುಂದಾಗಿದ್ದು, ವೇತನ ಹೆಚ್ಚಳದ ನಿರೀಕ್ಷೆಯಲ್ಲಿರುವ ಕರ್ನಾಟಕ ರಾಜ್ಯ ಸರಕಾರಿ ನೌಕರರಿಗೆ ರಾಜ್ಯ ಸರಕಾರ ಭರ್ಜರಿ ಗುಡ್ನ್ಯೂಸ್ ಕೊಟ್ಟಿದೆ.
7ನೇ ವೇತನ ಆಯೋಗ ವರದಿ ರಾಜ್ಯ ಸರ್ಕಾರದ ಕೈ ಸೇರಿ ಮೂರು ತಿಂಗಳಾಗಿದ್ದು, ಅಗಸ್ಟ್ನಿಂದ ವೇತನ ಆಯೋಗದ ವರದಿಯಲ್ಲಿನ ಶಿಫಾರಸ್ಸುಗಳು ಜಾರಿಗೆ ಬರುವ ಸಾಧ್ಯತೆ ಇದೆ. ಮಾರ್ಚ್ ತಿಂಗಳಿನಲ್ಲೇ ಕೆ.ಸುಧಾಕರ್ ರಾವ್ ನೇತೃತ್ವದ 7ನೇ ವೇತನ ಆಯೋಗ ತನ್ನ ವರದಿಯನ್ನು ಸರಕಾರಕ್ಕೆ ಸಲ್ಲಿಕೆ ಮಾಡಿತ್ತು. ಸರಕಾರಿ ನೌಕರರ ವೇತನ, ಕೆಲಸದ ಅವಧಿ ಸೇರಿದಂತೆ ಹಲವು ಶಿಫಾರಸ್ಸುಗಳನ್ನು ಮಾಡಲಾಗಿತ್ತು. ಆದರೆ ರಾಜ್ಯ ಸರಕಾರ ವೇತನ ಆಯೋಗದ ವರದಿಯನ್ನು ಜಾರಿಗೆ ತಂದಿರಲಿಲ್ಲ.

ಇನ್ನೂ ಜೂನ್ ತಿಂಗಳಿನಲ್ಲಿ ನಡೆದ ಸಂಪುಟ ಸಭೆಯಲ್ಲಿ 7ನೇ ವೇತನ ಆಯೋಗದ ವರದಿ ಜಾರಿಗೆ ಸಂಬಂಧಿಸಿದಂತೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಹೇಳಲಾಗಿತ್ತು. ಆದರೆ, ಸಚಿವ ಸಂಪುಟ ಸಭೆಯಲ್ಲಿ ವೇತನ ಆಯೋಗ ವರದಿಯ ವಿಚಾರ ಚರ್ಚೆಯೇ ನಡೆದಿರಲಿಲ್ಲ. ಇದೀಗ ರಾಜ್ಯದಲ್ಲಿನ ಸರ್ಕಾರಿ ನೌಕರರ ಒತ್ತಡಕ್ಕೆ ಮಣಿದಿರುವ ರಾಜ್ಯ ಸರಕಾರ ಕೊನೆಗೂ ಗುಡ್ನ್ಯೂಸ್ ಕೊಡಲು ಮುಂದಾಗಿದೆ.
ಏಳನೇ ವೇತನ ಆಯೋಗದಲ್ಲಿ ಶಿಫಾರಸ್ಸುಗಳನ್ನು ಜಾರಿಗೊಳಿಸುವ ಸಲುವಾಗಿ ಹಣಕಾಸು ಹೊಂದಾಣಿಕೆಯ ಕುರಿತು ಪರಿಶೀಲನೆ ನಡೆಸಿ ಮಾಹಿತಿ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರು ಆರ್ಥಿಕ ಇಲಾಖೆಗೆ ಸೂಚನೆಯನ್ನು ನೀಡಿದ್ದರು. ನೀತಿ ಸಂಹಿತೆ ಮುಗಿದ ಬಳಿಕ ಏಳನೇ ವೇತನ ಆಯೋಗ ಶಿಫಾರಸು ಜಾರಿಗೊಳಿಸುವ ಕುರಿತು ಸರ್ಕಾರಿ ನೌಕರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ರು. ಇದೀಗ ಆರ್ಥಿಕ ಇಲಾಖೆ ಕೂಡ ವೇತನ ಹೆಚ್ಚಳಕ್ಕೆ ಒಪ್ಪಿಗೆಯನ್ನು ಸೂಚಿಸಿದೆ ಎನ್ನಲಾಗುತ್ತಿದೆ.
ಇನ್ನೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಜುಲೈ 15 ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ 7ನೇ ವೇತನ ಆಯೋಗದ ವರದಿ ಜಾರಿಗೆ ತರುವ ನಿಟ್ಟಿನಲ್ಲಿ ಚರ್ಚೆಯನ್ನು ನಡೆಸಿ, ನಂತರ ಆದೇಶ ಹೊರಡಿಸುವುದು ಬಹುತೇಕ ಖಚಿತವಾಗಿದೆ. ಈ ಮೂಲಕ ಸರಕಾರಿ ನೌಕರರು ಕಳೆದ ಎರಡು ಮೂರು ವರ್ಷಗಳಿಂದ ಕಾಯುತ್ತಿರುವ ವೇತನ ಹೆಚ್ಚಳ ಆಗಸ್ಟ್ ತಿಂಗಳಿನಿಂದಲೇ ಸರ್ಕಾರ ಅಧಿಕೃತ ಆದೇಶ ಹೊರಡಿಸಲಿದೆ ಎಂದು ಹೇಳಲಾಗಿದೆ.
ವೇತನದಲ್ಲಿ ಎಷ್ಟು ಹೆಚ್ಚಳವಾಗಲಿದೆ ?
ರಾಜ್ಯ ಸರಕಾರಿ ನೌಕರರ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರ ಕಳೆದ ಬಜೆಟ್ನಲ್ಲಿ 14 ಸಾವಿರ ಕೋಟಿ ರೂ.ಗಳನ್ನು ಮೀಸಲು ಇರಿಸಲಾಗಿದೆ. ಏಳನೇ ವೇತನ ಆಯೋಗದ ಶಿಫಾರಸ್ಸಿನಂತೆ ಸರಕಾರಿ ನೌಕರರ ವೇತನದಲ್ಲಿ ಶೇ.27.5 ರಷ್ಟು ಹೆಚ್ಚಳವಾಗಲಿದೆ. ಆದರೆ ಈ ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ಶೇ.17 ಮಧ್ಯಂತರ ಪರಿಹಾರ ನೀಡಿತ್ತು. ಹೀಗಾಗಿ ಉಳಿದ ಶೇ.10.5ರಷ್ಟು ವೇತನ ಹೆಚ್ಚಳಕ್ಕೆ ರಾಜ್ಯ ಸರಕಾರ ನಿರ್ಧಾರ ಮಾಡಿದೆ.
ಜುಲೈ 15ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 7ನೇ ವೇತನ ಆಯೋಗದ ವರದಿ ಅನುಷ್ಠಾನದ ಕುರಿತು ತೀರ್ಮಾನವನ್ನು ಕೈಗೊಳ್ಳಬಹುದು ಅಥವಾ ನೌಕರರಿಗೆ ಯಾವುದರೂ ಭರವಸೆ ನೀಡಬಹುದು ಎಂದು ಅಂದಾಜಿಸಲಾಗಿದೆ.












Click it and Unblock the Notifications