7th Pay Commission; ಸಿದ್ದರಾಮಯ್ಯ ಭೇಟಿಯಾದ ಆಯೋಗದ ಅಧ್ಯಕ್ಷರು
ಬೆಂಗಳೂರು, ಸೆಪ್ಟೆಂಬರ್ 29; ಕರ್ನಾಟಕದ ಸರ್ಕಾರ ಈಗಾಗಲೇ ರಾಜ್ಯ ಸರ್ಕಾರಿ ನೌಕರರ ವೇತನ ಶ್ರೇಣಿಗಳನ್ನು ಪರಿಷ್ಕರಿಸಲು ಮತ್ತು ನೂತನ ವೇತನ ರಚನೆ ಇತ್ಯಾದಿಗಳನ್ನು ರೂಪಿಸಲು ಸುಧಾಕರ್ ರಾವ್ ಅಧ್ಯಕ್ಷತೆಯ 7ನೇ ರಾಜ್ಯ ವೇತನ ಆಯೋಗವನ್ನು ರಚನೆ ಮಾಡಿದೆ.
ಶುಕ್ರವಾರ 7ನೇ ರಾಜ್ಯ ವೇತನ ಆಯೋಗದ ಅಧ್ಯಕ್ಷ ಸುಧಾಕರ್ ರಾವ್ ಹಾಗೂ ಸದಸ್ಯರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿಯಾಗಿ ವಿವಿಧ ವಿಚಾರಗಳ ಕುರಿತು ಚರ್ಚೆ ನಡೆಸಿತು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹ್ಮದ್ ಹಾಗೂ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಇದ್ದಾಗ, ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾಗ ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳ ಪರಿಷ್ಕರಣೆ ಕುರಿತಂತೆ ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳನ್ನು ಪರಿಶೀಲಿಸಿ 6 ತಿಂಗಳ ಕಾಲಮಿತಿಯಲ್ಲಿ ವರದಿಯನ್ನು ಸಲ್ಲಿಸಲು, ತ್ರಿಸದಸ್ಯರ 7ನೇ ರಾಜ್ಯ ವೇತನ ಆಯೋಗ ರಚನೆ ಮಾಡಲಾಗಿತ್ತು.
ಸರ್ಕಾರ ದಿನಾಂಕ 19/11/2022ರಂದು ಈ ಕುರಿತು ಆದೇಶ ಹೊರಡಿಸಿತ್ತು. 7ನೇ ರಾಜ್ಯ ವೇತನ ಆಯೋಗಕ್ಕೆ ಸುಧಾಕರ್ ರಾವ್ ಅಧ್ಯಕ್ಷರು. ಪಿ. ಬಿ. ರಾಮಮೂರ್ತಿ, ಶ್ರೀಕಾಂತ್ ಬಿ. ವನಹಳ್ಳಿ, ಹೆಪ್ಸಿಬಾ ರಾಣಿ ಕೊರ್ಲಪಾಟಿ ಕಾರ್ಯದರ್ಶಿಗಳಾಗಿದ್ದಾರೆ. ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಮುಗಿದು ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಆಯೋಗ ವರದಿ ನೀಡಲು ನಿಗದಿಪಡಿಸಿರುವ ಕಾಲಾವಧಿಯನ್ನು ದಿನಾಂಕ 19/5/2023ರಿಂದ 6 ತಿಂಗಳು ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದೆ.
7ನೇ ವೇತನ ಆಯೋಗದ ಪರಿಶೀಲನಾರ್ಹ ಅಂಶಗಳು; ಕರ್ನಾಟಕ ಸರ್ಕಾರ ಆಯೋಗದ ಪರಿಶೀಲನಾರ್ಹ ಅಂಶಗಳ ಕುರಿತು ಸಹ ಈಗಾಗಲೇ ಆದೇಶ ಹೊಡಿಸಿದೆ. ರಾಜ್ಯ ಸರ್ಕಾರಿ ನೌಕರರ (ಯುಜಿಸಿ/ ಎಐಸಿಟಿಇ/ ಐಸಿಎಆರ್/ ಎನ್ಜೆಪಿಸಿ ವೇತನ ಶ್ರೇಣಿ ಹೊಂದಿರುವವರನ್ನು ಹೊರತುಪಡಿಸಿ), ಅನುದಾನಿತ ಶಿಕ್ಷಣ ಸಂಸ್ಥೆಗಳು, ಸ್ಥಳೀಯ ಸಂಸ್ಥೆಗಳು, ವಿಶ್ವವಿದ್ಯಾನಿಲಯಗಳು ಮತ್ತು ಕಾಲೇಜುಗಳ ಬೋಧಕೇತರ ಸಿಬ್ಬಂದಿಗಳಿಗೆ ಮರಣ ಹಾಗೂ ನಿವೃತ್ತಿ ಉಪದಾನ ಸೌಲಭ್ಯಗಳನ್ನೊಳಗೊಂಡಂತೆ ಲಭ್ಯವಿರುವ ಎಲ್ಲಾ ಕ್ರೋಢೀಕೃತ ಸೌಲಭ್ಯಗಳನ್ನು ಗಣನೆಗೆ ತೆಗೆದುಕೊಂಡು, ಈ ಸಿಬ್ಬಂದಿಗಳ ಪ್ರಸ್ತುತ ವೇತನ ರಚನೆಯನ್ನು ಪರಿಶೀಲಿಸುವುದು ಹಾಗೂ ಅಪೇಕ್ಷಣೀಯವಾದ ಹಾಗೂ ಕಾರ್ಯಸಾಧ್ಯವಿರುವ ನೂತನ ವೇತನ ರಚನೆಯನ್ನು ರೂಪಿಸಬೇಕು ಎಂದು ಹೇಳಿದೆ.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ವೃಂದದ ಹುದ್ದೆಗಳನ್ನು ಸಮೀಕರಿಸಿ ಕೇಂದ್ರ ಸರ್ಕಾರದ ವೇತನ ರಚನೆಯನ್ನು ಅಳವಡಿಸಿಕೊಳ್ಳುವ ಕಾರ್ಯಸಾಧ್ಯತೆಗಳನ್ನು ಪರಿಶೀಲಿಸಬೇಕು. ರಾಜ್ಯ ಸರ್ಕಾರವು ಅಳವಡಿಸಿಕೊಳ್ಳಬಹುದಾದ ತುಟ್ಟಿಭತ್ಯೆಯ ಸೂತ್ರವನ್ನು ನಿರ್ಧರಿಸಿ ಪರಿಶೀಲಿಸಬೇಕು. ಮನೆ ಬಾಡಿಗೆ ಭತ್ಯೆ ಮತ್ತು ನಗರ ಪರಿಹಾರ ಭತ್ಯೆ, ವಿಶೇಷ ಭತ್ಯೆಗಳು ಇತ್ಯಾದಿ ಮತ್ತು ರಜೆ ಪ್ರಯಾಣ ರಿಯಾಯಿತಿ ಮತ್ತು ವೈದ್ಯಕೀಯ ಮರುಪಾವತಿ ಸೌಲಭ್ಯಗಳನ್ನೊಳಗೊಂಡಂತ ವಿವಿಧ ಭತ್ಯೆಗಳ ಪರಿಶೀಲಿಸಬೇಕು ಎಂದು ತಿಳಿಸಿದೆ. ಅಪೇಕ್ಷಣೀಯವಾದ ಹಾಗೂ ಕಾರ್ಯಸಾಧ್ಯವಿರುವ ಬದಲಾವಣೆಗಳನ್ನು ಆಯೋಗ ಸಲಹೆ ಮಾಡಬೇಕಿದೆ.
ನಿವೃತ್ತಿ ವೇತನ ಮತ್ತು ನಿವೃತ್ತಿ ಸೌಲಭ್ಯಗಳನ್ನು ಪರಿಶೀಲಿಸುವುದು. ರಾಜ್ಯ ಸರ್ಕಾರದಿಂದ ವಹಿಸಲ್ಪಡುವ/ ಸೂಚಿಸಬಹುದಾದ ಇತರೆ ವಿಷಯಗಳನ್ನು ಪರಿಶೀಲಿಸುವುದು. ಆಯೋಗವು ತನ್ನ ಶಿಫಾರಸ್ಸುಗಳನ್ನು ಮಾಡುವಲ್ಲಿ, ರಾಜ್ಯ ಸಂಪನ್ಮೂಲಗಳು ಹಾಗೂ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳು ಮತ್ತು ಯೋಜನೆಗಳ ಕುರಿತಾಗಿ ರಾಜ್ಯ ಸರ್ಕಾರದ ಹೊಣೆಗಳು, ಶಾಸನಬದ್ಧ ಹಾಗೂ ಕ್ರಮಬದ್ಧ ಕಾರ್ಯಗಳು, ಋಣಸೇವಾ ನಿರ್ವಹಣೆಗಳು ಮತ್ತು ಇತರೆ ಅಭಿವೃದ್ಧಿಯೇತರ ಅಗತ್ಯಗಳನ್ನು ಹಾಗೂ ವಿತ್ತೀಯ ಹೊಣೆಗಾರಿಕೆ ನಿರ್ವಹಣೆ ಅಧಿನಿಯಮ, 2002ರ ಅಧ್ಯಾದೇಶದ ಅವಕಾಶಗಳ ಪರಿಮಿತಿಯನ್ನು ಗಮನದಲ್ಲಿರಿಸಿಕೊಳ್ಳುವುದು.
ಆಯೋಗವು ತನ್ನದೇ ಆದ ಕಾರ್ಯವಿಧಾನಗಳನ್ನು ರೂಪಿಸಿಕೊಳ್ಳುವುದು ಹಾಗೂ ಪರಿಶೀಲನಾರ್ಹ ಅಂಶಗಳಿಗೆ ಅಗತ್ಯವೆನಿಸಿದ ಮಾಹಿತಿಗಳನ್ನು ವಿವಿಧ ಇಲಾಖೆಗಳಿಂದ ಪಡೆಯಬಹುದಾಗಿರುತ್ತದೆ. ಸರ್ಕಾರದ ಎಲ್ಲಾ ಇಲಾಖೆಗಳು ಆಯೋಗವು ಅಪೇಕ್ಷಿಸುವ ಎಲ್ಲಾ ಮಾಹಿತಿ, ದಾಖಲೆ ಹಾಗೂ ಇನ್ನಿತರೆ ಸಹಕಾರವನ್ನು ಒದಗಿಸತಕ್ಕದ್ದು. ಎಲ್ಲಾ ಸೇವಾ ಸಂಘಟನೆಗಳು, ಸ್ಥಳೀಯ ಸಂಸ್ಥೆಗಳು, ಅನುದಾನಿತ ಸಂಸ್ಥೆಗಳು ಮತ್ತು ಇತರೆ ಸಂಬಂಧಪಟ್ಟವರು ಆಯೋಗಕ್ಕೆ ಅವುಗಳ ಸಂಪೂರ್ಣ ಸಹಕಾರ ಮತ್ತು ನೆರವನ್ನು ನೀಡುತ್ತವೆ ಎಂದು ಸರ್ಕಾರವು ಭಾವಿಸುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿತ್ತು.
ಯಾವಾಗ ವರದಿ ನೀಡಲಿದೆ?; 7ನೇ ರಾಜ್ಯ ವೇತನ ಆಯೋಗ ಸರ್ಕಾರಕ್ಕೆ ಯಾವಾಗ ವರದಿ ನೀಡಲಿದೆ? ಎಂದು ಸರ್ಕಾರಿ ನೌಕರರು ಕಾದು ಕುಳಿತಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ. ಎಸ್. ಷಡಾಕ್ಷರಿ ಅವರ ಪ್ರಕಾರ, "ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸಿನ ಅನ್ವಯ ಶೇ 38 ರಿಂದ 40ರಷ್ಟು ವೇತನ ಹೆಚ್ಚಾಗುವ ವಿಶ್ವಾಸವಿದೆ" ಎಂದು ಹೇಳಿದ್ದಾರೆ.
"7ನೇ ವೇತನ ಆಯೋಗ ನವೆಂಬರ್ ಅಂತ್ಯದ ವೇಳೆಗೆ ವೇತನ ಹೆಚ್ಚಳಕ್ಕೆ ಪೂರಕವಾಗಿರುವ ವರದಿ ಸಲ್ಲಿಸಲಿದೆ. ಸಮಿತಿಯ ಸದಸ್ಯರನ್ನು ಭೇಟಿ ಮಾಡಿ ಶೇ 38 ರಿಂದ 40ವೇತನ ಹೆಚ್ಚಳಕ್ಕೆ ಮನವಿ ಮಾಡಲಾಗಿದೆ" ಎಂದು ತಿಳಿಸಿದ್ದಾರೆ.












Click it and Unblock the Notifications