7th Pay Commission: 7ನೇ ವೇತನ ಆಯೋಗ ಜಾರಿ: ಸರ್ಕಾರಿ ನೌಕರರಿಗೆ ಸಂಬಳ ಹೆಚ್ಚಳದ ಜೊತೆಗೆ ಏನೆಲ್ಲಾ ಸೌಲಭ್ಯ ಸಿಗಲಿದೆ?
ಬೆಂಗಳೂರು, ಜುಲೈ 16: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಕರ್ನಾಟಕದ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ನೀಡಿದೆ. ಆಗಸ್ಟ್ 1 ರಿಂದ 7 ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿ ಮಾಡುವುದಾಗಿ ನಿರ್ಧರಿಸಲಾಗಿದೆ. ಈ ಮೂಲಕ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆ ಈಡೇರಿದೆ.
ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 7 ನೇ ವೇತನ ಆಯೋಗ ವರದಿ ಜಾರಿ ಕುರಿತು ಸಂಪುಟ ಒಪ್ಪಿಗೆ ಸೂಚಿಸಿದೆ. ಈ ನಿರ್ಧಾರದಿಂದ ಸರ್ಕಾರಿ ನೌಕರರಿಗೆ ಸಂಬಳ ಹೆಚ್ಚಳವಾಗಲಿದೆ. ಕರ್ನಾಟಕ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ 7ನೇ ರಾಜ್ಯ ವೇತನ ಆಯೋಗದ ಅಂತಿಮ ವರದಿ ಶಿಫಾರಸು ಜಾರಿಗೆ ರಾಜ್ಯ ಸಚಿವ ಸಂಪುಟ ಸಭೆ ನಿರ್ಧರಿಸಿದೆ. ಇದರಿಂದ ನೌಕರರ ವೇತನ ಶೇಕಡಾ 10 ರಷ್ಟು ಹೆಚ್ಚಳವಾಗಿದೆ.

ಈ ಹಿಂದೆ 7 ನೇ ವೇತನ ಆಯೋಗವು ಶೇಕಡಾ 27.5 ವೇತನ ಪರಿಷ್ಕರಣೆಗೆ ಶಿಫಾರಸು ಮಾಡಿತ್ತು. ಹಿಂದಿನ ಸರ್ಕಾರ ದ ಅವಧಿಯಲ್ಲಿ ಶೇಕಡಾ 17 ರ ಮಧ್ಯಂತರ ಪರಿಹಾರ ನೀಡಲಾಗಿತ್ತು. ಈಗ ಉಳಿದ ಶೇಕಡಾ 10.5 ವೇತನ ಪರಿಷ್ಕರಣೆಯಾಗಲಿದ್ದು, ಸರ್ಕಾರಿ ನೌಕರರು ಸರ್ಕಾರದ ತಿರ್ಮಾನಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.
ಆಗಸ್ಟ್ 1 ರಿಂದ 7 ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಯಾಗಲಿದ್ದು, ವೇತನ ಆಯೋಗದ ಅಂತಿಮ ಶಿಫಾರಸ್ಸುಗಳು ಜಾರಿಯಿಂದ ರಾಜ್ಯದ ಸುಮಾರು 5.20 ಲಕ್ಷ ಸರ್ಕಾರಿ ನೌಕರರು, ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳಲ್ಲಿ 2.50 ಲಕ್ಷ ನೌಕರರು ಹಾಗೂ 4.50 ಲಕ್ಷ ನಿವೃತ್ತ ನೌಕರರು ಸೇರಿ ಒಟ್ಟು 12.20 ಲಕ್ಷ ನೌಕರ ಕುಟುಂಬಗಳಿಗೆ ಅನುಕೂಲವಾಗಲಿದೆ.
ಈ ಹಿಂದೆ ನಡೆದ ಸಚಿವ ಸಂಪುಟ ಸಭೆಯಲ್ಲಿ 7 ನೇ ವೇತನ ಆಯೋಗ ಜಾರಿ ಸೇರಿದಂತೆ ಹಲವು ಬೇಡಿಕೆಗಳನ್ನ ಸರ್ಕಾರಿ ನೌಕರರ ಸಂಘ ಇಟ್ಟಿದ್ದು, ಇದರಿಂದ ಸರ್ಕಾರಕ್ಕೆ ಸಾಕಷ್ಟು ಹೊರಯಾಗಲಿದೆ ಎಂಬ ಮಾತುಗಳು ಕೇಳಿ ಬಂದಿತ್ತು. ಅಲ್ಲದೇ ಸಂಪನ್ಮೂಲ ಕೊರತಯಿಂದಾಗಿ ಆರ್ಥಿಕ ಹೊರೆ ಭರಿಸಲು ಸಾಧ್ಯವಿಲ್ಲಎಂಬ ಹಣಕಾಸು ಇಲಾಖೆ ತಕರಾರು ಕಾರಣಕ್ಕೆ 7ನೇ ವೇತನ ಆಯೋಗದ ಶಿಫಾರಸು ಜಾರಿಗೆ ಸರ್ಕಾರ ಹಿಂದೇಟು ಹಾಕಿತ್ತು.
ಸಂಪನ್ಮೂಲ ಕೊರತೆ ಕಾರಣಕ್ಕೆ ಸರ್ಕಾರ ಕೇವಲ ಭರವಸೆಯನ್ನ ನೀಡಿ ಸುಮ್ಮನಾಗುತ್ತಿದೆ ಎಂದು ಸರ್ಕಾರಿ ನೌಕರರು ಅಸಮಾಧಾನ ವ್ಯಕ್ತಪಡಿಸಿದ್ದರು. ಅಲ್ಲದೇ ವೇತನ ಆಯೋಗದ ವರದಿಯ ಯಥಾವತ್ ಜಾರಿಗೆ ಆಗ್ರಹಿಸಿ, ಜುಲೈ 29ರಿಂದ ಕರ್ತವ್ಯಕ್ಕೆ ಗೈರಾಗುವ ಮೂಲಕ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸುವುದಾಗಿ ನೌಕರ ಸಂಘಟನೆಗಳ ಪ್ರತಿನಿಧಿಗಳು ಕಳೆದ ಶುಕ್ರವಾರ ಮುಖ್ಯ ಕಾರ್ಯದರ್ಶಿಗೆ ಮಾಹಿತಿ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಎಚ್ಚೆತ್ತುಕೊಂಡಿದ್ದು, 7 ನೇ ವೇತನ ಆಯೋಗ ಜಾರಿಗೆ ಗ್ರೀನ್ ಸಿಗ್ನಲ್ ನೀಡಿದೆ.
ಇನ್ನೂ ವೇತನ ಮತ್ತು ಭತ್ಯೆ ಪರಿಷ್ಕರಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಚಿವ ಸಂಪುಟ ಅಸ್ತು ನೀಡಿದೆ. ಆದರೆ, ವೇತನ ಪರಿಷ್ಕರಣೆ ಪೂರ್ವಾನ್ವಯ ಜಾರಿಯಾಗಬೇಕು ಎಂಬ ನೌಕರರ ಬೇಡಿಕೆಗೆ ಮಾನ್ಯತೆ ಸಿಕ್ಕಿಲ್ಲ. ಸರ್ಕಾರಿ ನೌಕರ ಸಮುದಾಯದ ಇನ್ನೂ ಎರಡು ಪ್ರಮುಖ ಬೇಡಿಕೆಗಳ ವಿಚಾರದಲ್ಲಿಯಾವುದೇ ನಿರ್ಧಾರ ಕೈಗೊಂಡಿಲ್ಲ. ಎನ್ಪಿಎಸ್ ಯೋಜನೆ ರದ್ದುಗೊಳಿಸಿ ಹಳೇ ಪಿಂಚಣಿ ಯೋಜನೆಯನ್ನು ಮರು ಜಾರಿ ಮಾಡಬೇಕು ಹಾಗೂ ಆರೋಗ್ಯ ಸಂಜೀವಿನಿ ಯೋಜನೆಯನ್ನು ಶೀಘ್ರ ಅನುಷ್ಠಾನಗೊಳಿಸಬೇಕು ಎಂಬ ಬೇಡಿಕೆಗಳಿಗೆ ಸ್ಪಂದನೆ ಸಿಕ್ಕಿಲ್ಲ.












Click it and Unblock the Notifications