ಲೋಕಸಭೆ ಚುನಾವಣೆ ಕಣದಲ್ಲಿದ್ದಾರೆ 8 ಶಾಸಕರು
ಬೆಂಗಳೂರು, ಮಾ.29 : ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ನಂತರ ಉಪ ಚುನಾವಣೆ ನಡೆಯುವುದು ಖಚಿತವಾಗಿದೆ. ಲೋಕಸಭೆ ಚುನಾವಣೆ ಕಣಕ್ಕೆ 2 ವಿಧಾನಪರಿಷತ್ ಸದಸ್ಯರು ಸೇರಿದಂತೆ ಎಂಟು ಮಂದಿ ಶಾಸಕರು ಧುಮುಕಿದ್ದಾರೆ. ಇವರಲ್ಲಿ ಯಾರು ಗೆದ್ದು, ರಾಜೀವಾಮೆ ನೀಡಿದರೂ ಉಪ ಚುನಾವಣೆ ನಡೆಯಲಿದೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತವಿದೆ. ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಶಾಸಕ ಮತ್ತು ಸಚಿವ ಪ್ರಕಾಶ್ ಹುಕ್ಕೇರಿ ಅವರನ್ನು ಚಿಕ್ಕೋಡಿ ಕ್ಷೇತ್ರದಿಂದ, ದಾವಣಗೆರೆಯಿಂದ ಶಾಸಕ ಎಸ್.ಎಸ್. ಮಲ್ಲಿಕಾರ್ಜುನ, ಹಾಸನದಿಂದ ಎ. ಮಂಜು, ಧಾರವಾಡದಿಂದ ವಿನಯ್ ಕುಲಕರ್ಣಿ ಅವರನ್ನು ಕಣಕ್ಕಿಳಿಸಿದೆ.

ವಿರೋಧ ಪಕ್ಷವಾದ ಬಿಜೆಪಿಯಲ್ಲಿ ಶಿಕಾರಿಪುರ ಕ್ಷೇತ್ರದ ಶಾಸಕ ಬಿ.ಎಸ್.ಯಡಿಯೂರಪ್ಪ ಶಿವಮೊಗ್ಗದಿಂದ, ವಿಧಾನ ಪರಿಷತ್ ಸದಸ್ಯರಾದ ಡಿ.ವಿ. ಸದಾನಂದಗೌಡರು ಬೆಂಗಳೂರು ಉತ್ತರದಿಂದ ಹಾಗೂ ಸಿ.ಎಚ್. ವಿಜಯಶಂಕರ್ ಹಾಸನ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ.
ಬಳ್ಳಾರಿಯಲ್ಲಿ ಚುನಾವಣೆ : ಬಳ್ಳಾರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಬಿಎಸ್ಆರ್ ಕಾಂಗ್ರೆಸ್ ಅಧ್ಯಕ್ಷ ಬಿ.ಶ್ರೀರಾಮುಲು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದ್ದರಿಂದ ಅವರು ಚುನಾವಣೆ ಗೆಲ್ಲಲಿ ಬಿಡಲಿ ಬಳ್ಳಾರಿ ಗ್ರಾಮಾಂತರ ಕ್ಷೇತ್ರಕ್ಕೆ ಚುನಾವಣೆ ಅನಿವಾರ್ಯವಾಗಿದೆ. [ಮೋದಿ ಮಾತನ್ನು ಕನ್ನಡದಲ್ಲಿ ಕೇಳಿ]
ಗೌಡರಿಗೆ ಚುನಾವಣೆ ಅನಿವಾರ್ಯ : ವಿಧಾನಪರಿಷತ್ ವಿಪಕ್ಷ ನಾಯಕ ಸದಾನಂದ ಗೌಡರ ಪರಿಷತ್ ಸದಸ್ಯತ್ವದ ಅವಧಿ ಜೂನ್ 30ಕ್ಕೆ ಕೊನೆಗೊಳ್ಳಲಿದೆ. ಆದ್ದರಿಂದ ಆ ಸ್ಥಾನಕ್ಕಾಗಿ ಚುನಾವಣೆ ನಡೆಯಲೇ ಬೇಕಾಗಿದೆ. ಆದರೆ, ಹಾಸನ ಕ್ಷೇತ್ರದಿಂದ ಸ್ಪರ್ಧಿಸಿರುವ ಸಿ.ಎಚ್.ವಿಜಯಶಂಕರ್ ಅವರ ಪರಿಷತ್ ಸದಸ್ಯತ್ವದ ಅವಧಿ 2016ರ ಜೂನ್ 14ರವರೆಗೆ ಇದೆ.
ಕುಮಾರಸ್ವಾಮಿ ಸ್ಪರ್ಧೆ : ಕಳೆದ ವಿಧಾನಸಭೆ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದ ಗೆಲುವು ಸಾಧಿಸಿ ಬೆ.ಗ್ರಾಮಾಂತರ ಕ್ಷೇತ್ರದ ಸಂಸದ ಸ್ಥಾನ ತೊರೆದಿದ್ದ ಕುಮಾರಸ್ವಾಮಿ, ಸದ್ಯ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಲೋಕಸಭೆ ಅಖಾಡಕ್ಕೆ ಇಳಿದಿದ್ದಾರೆ. ಅವರು ಗೆದ್ದು ಮತ್ತೆ ರಾಜೀನಾಮೆ ನೀಡಿದರೆ, ರಾಮನಗರದಲ್ಲಿ ಮತ್ತೊಮ್ಮೆ ಉಪ ಚುನಾವಣೆ ನಡೆಯಬೇಕು.












Click it and Unblock the Notifications