ಮುಂಬೈ ವಿಮಾನ ಹತ್ತಿದ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್!
ಬೆಂಗಳೂರು, ಜುಲೈ 08 : ಕರ್ನಾಟಕ ಕಾಂಗ್ರೆಸ್ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಮುಂಬೈಗೆ ಹೊರಟಿದ್ದಾರೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ನಾಯಕರು ಮುಂಬೈನಲ್ಲಿದ್ದು, ಡಿ.ಕೆ.ಶಿವಕುಮಾರ್ ಭೇಟಿ ಕುತೂಹಲಕ್ಕೆ ಕಾರಣವಾಗಿದೆ.
ಸೋಮವಾರ ಸಂಜೆ ಕೆಂಪೇಗೌಡ ವಿಮಾನ ನಿಲ್ದಾಣದಿಂದ ಡಿ.ಕೆ.ಶಿವಕುಮಾರ್ ಮುಂಬೈಗೆ ತೆರಳಿದರು. ಭಾನುವಾರದಿಂದ ಸರಣಿ ಸಭೆಗಳಲ್ಲಿ ಪಾಲ್ಗೊಂಡಿದ್ದ ಅವರು, ಸರ್ಕಾರ ಉಳಿಸಲು ಕೊನೆ ಕ್ಷಣದ ಕಸರತ್ತನ್ನು ನಡೆಸುತ್ತಿದ್ದಾರೆ.
ಸಚಿವ ಸ್ಥಾನಕ್ಕೆ ಆರ್.ಶಂಕರ್ ರಾಜೀನಾಮೆ, ಬಿಜೆಪಿಗೆ ಸೇರ್ತಾರಾ?
ಶನಿವಾರ ಕಾಂಗ್ರೆಸ್ನ 9 ಶಾಸಕರು ರಾಜೀನಾಮೆ ನೀಡಿದ್ದಾರೆ. ಇವರಲ್ಲಿ ರಾಮಲಿಂಗಾ ರೆಡ್ಡಿ ಮತ್ತು ಮುನಿರತ್ನ ಹೊರತುಪಡಿಸಿ ಉಳಿದ ನಾಯಕರು ಮುಂಬೈನಲ್ಲಿದ್ದಾರೆ. ಮೂವರು ಜೆಡಿಎಸ್ ಶಾಸಕರು ಸಹ ಮುಂಬೈನ ಸೋಫಿಟೆಲ್ ಹೋಟೆಲ್ನಲ್ಲಿ ವಾಸ್ತವ್ಯ ಹೂಡಿದ್ದಾರೆ.
ಡಿಕೆಶಿ ಆರೋಪದ ಬಗ್ಗೆ ಅರವಿಂದ ಲಿಂಬಾವಳಿ ಸ್ಪಷ್ಟನೆ
ಡಿ.ಕೆ.ಶಿವಕುಮಾರ್ ಅವರು ಸೋಫಿಟೆಲ್ ಹೋಟೆಲ್ಗೆ ಭೇಟಿ ನೀಡಿ ಶಾಸಕರ ಜೊತೆ ಮಾತುಕತೆ ನಡೆಸುವ ಸಾಧ್ಯತೆ ಇದೆ. ಹೋಟೆಲ್ಗೆ ಬಿಗಿ ಭದ್ರತೆ ಒದಗಿಸಲಾಗಿದ್ದು, ಡಿ.ಕೆ.ಶಿವಕುಮಾರ್ ಅವರಿಗೆ ಪ್ರವೇಶ ನೀಡಲಾಗುತ್ತದೆಯೇ? ಎಂದು ಕಾದು ನೋಡಬೇಕು. 13 ಶಾಸಕರ ರಾಜೀನಾಮೆ ಬಗ್ಗೆ ಸ್ಪೀಕರ್ ಮಂಗಳವಾರ ತೀರ್ಮಾನ ಕೈಗೊಳ್ಳಲಿದ್ದಾರೆ...
ಜೆಡಿಎಸ್ನ ಎಲ್ಲಾ ಸಚಿವರ ರಾಜೀನಾಮೆ : ಎಚ್.ಡಿ.ಕುಮಾರಸ್ವಾಮಿ
ಮುಂಬೈನಲ್ಲಿರುವ ಶಾಸಕರು
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ರಮೇಶ್ ಜಾರಕಿಹೊಳಿ (ಗೋಕಾಕ್), ಮಹೇಶ್ ಕಮಟಳ್ಳಿ (ಅಥಣಿ), ಬಿ.ಸಿ.ಪಾಟೀಲ್ (ಹಿರೇಕೆರೂರು), ಶಿವರಾಂ ಹೆಬ್ಬಾರ್ (ಯಲ್ಲಾಪುರ), ಪ್ರತಾಪ್ ಗೌಡ ಪಾಟೀಲ್ (ಮಸ್ಕಿ), ಬೈರತಿ ಬಸವರಾಜು (ಕೆ.ಆರ್.ಪುರ), ಎಸ್.ಟಿ.ಸೋಮಶೇಖರ್ (ಯಶವಂತಪುರ) ಅವರು ಮುಂಬೈನಲ್ಲಿ ಸೋಫಿಟೆಲ್ ಹೋಟೆಲ್ನಲ್ಲಿದ್ದಾರೆ.
ಮನವೊಲಿಸಲಿರುವ ಡಿಕೆಶಿ
ಸೋಮವಾರ ಬೆಳಗ್ಗೆ 21 ಕಾಂಗ್ರೆಸ್ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವವರ ಜೊತೆ ಮಾತುಕತೆ ನಡೆಸಲಿರುವ ಡಿ.ಕೆ.ಶಿವಕುಮಾರ್ ಅವರು ಸಚಿವ ಸ್ಥಾನದ ಆಫರ್ ನೀಡಿ ಎಲ್ಲರ ಮನವೊಲಿಸಲಿದ್ದಾರೆ. ಆದರೆ, ಇದಕ್ಕೆ ಶಾಸಕರು ಒಪ್ಪಿಗೆ ನೀಡಲಿದ್ದಾರೆಯೇ? ಕಾದು ನೋಡಬೇಕು.
ಸಿದ್ದರಾಮಯ್ಯ ಜೊತೆ ಮಾತುಕತೆ
ಸೋಮವಾರ ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರ ಜೊತೆ ಮಾತಕತೆ ನಡೆಸಿದ ಬಳಿಕ ಡಿ.ಕೆ.ಶಿವಕುಮಾರ್ ಅವರು ಮುಂಬೈ ವಿಮಾನವೇರಿದ್ದಾರೆ.
ಕುಮಾರಸ್ವಾಮಿ ಗಡುವು
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್ ನಾಯಕರಿಗೆ 24 ಗಂಟೆಗಳ ಗಡುವು ನೀಡಿದ್ದಾರೆ. ಮುಂಬೈನಲ್ಲಿರುವ ಶಾಸಕರನ್ನು ಕರೆತನ್ನಿ, ಇಲ್ಲವಾದರೆ ರಾಜೀನಾಮೆ ನೀಡುತ್ತೇನೆ ಎಂದು ಅವರು ಖಡಕ್ ಸಂದೇಶ ರವಾನೆ ಮಾಡಿದ್ದಾರೆ. ಆದ್ದರಿಂದ, ಕಾಂಗ್ರೆಸ್ ಸರ್ಕಾರ ಉಳಿಸಿಕೊಳ್ಳುವ ಕೊನೆ ಕ್ಷಣದ ಹೋರಾಟ ಆರಂಭಿಸಿದೆ.