9 ವರ್ಷವಾದರೂ ರಚನೆಯಾಗದ ಸಿಎಸ್ಬಿ: ಐಪಿಎಸ್, ಐಎಎಸ್ ವರ್ಗಾವಣೆಗಿಲ್ಲ ಬ್ರೇಕ್..!
ಬೆಂಗಳೂರು, ಮಾರ್ಚ್ 30: ಐಎಎಸ್ ಮತ್ತು ಐಪಿಎಸ್ ಸೇರಿ ನಾಗರಿಕ ಸೇವೆಯಲ್ಲಿರುವ ಅಧಿಕಾರಿಗಳ ವರ್ಗಾವಣೆಗೆ ಕನಿಷ್ಠ ಅವಧಿ ನಿಗದಿಪಡಿಸಲು ಹಾಗೂ ನಿರ್ದಿಷ್ಟ ನೀತಿ ರೂಪಿಸಲು ಕೇಂದ್ರ ನಾಗರಿಕ ಸೇವಾ ಮಂಡಳಿ (ಸಿಎಸ್ಬಿ) ರಚಿಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿ 9 ವರ್ಷವಾದರೂ ರಾಜ್ಯದಲ್ಲಿ ಇನ್ನೂ ಸಿಎಸ್ ಬಿ ರಚನೆಯಾಗಿಲ್ಲ.
ಅಲ್ಲದೆ, ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಬಿ.ಶರತ್ ಮತ್ತು ರೋಹಿಣಿ ಸಿಂಧೂರಿ ಪ್ರಕರಣದಲ್ಲಿ ಹೈಕೋರ್ಟ್ ಹಾಗೂ ಕೇಂದ್ರೀಯ ಆಡಳಿತ ನ್ಯಾಯಮಂಡಳಿ (ಸಿಎಟಿ) ಕೂಡಲೇ ಸಿಎಸ್ಬಿ ರಚನೆ ಮಾಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿದ್ದರೂ ಸರ್ಕಾರ ಇನ್ನೂ ತಲೆಕೆಡಿಸಿಕೊಂಡಿಲ್ಲ. ಅದರ ಪರಿಣಾಮ ರಾಜ್ಯದಲ್ಲಿ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ಎಗಿಲ್ಲದ ವರ್ಗಾವಣೆ ಮುಂದುವರಿದಿದ್ದು, ಅದಕ್ಕೆ ಯಾವುದೇ ಬ್ರೇಕ್ ಇಲ್ಲದಂತಾಗಿದೆ.
ಸಿಎಸ್ಬಿ ರಚನೆ ಮಾಡದಿರುವ ಕ್ರಮ ಪ್ರಶ್ನಿಸಿ ವಕೀಲೆ ಸುಧಾ ಕಾಟ್ವಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯಪೀಠ, ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಿದೆ.

ಅಲ್ಲದೆ, ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ಆದೇಶ ನೀಡಿ ಹಲವು ವರ್ಷ ಕಳೆದರೂ ಈವರೆಗೂ ರಾಜ್ಯದಲ್ಲಿ ಏಕೆ ಸಿಎಚ್ಬಿ ರಚನೆ ಮಾಡಿಲ್ಲ ಎಂದು ಸರ್ಕಾರವನ್ನು ಪ್ರಶ್ನಿಸಿರುವ ನ್ಯಾಯಾಲಯ ಆ ಬಗ್ಗೆ ಮುಂದಿನ ವಿಚಾರಣೆ ವೇಳೆ ವಿವರಣೆ ನೀಡಿ ವರದಿ ಸಲ್ಲಿಸುವಂತೆ ಸೂಚಿಸಿ ವಿಚಾರಣೆಯನ್ನು ಮೂರು ವಾರ ಮುಂದೂಡಿದೆ.
ಅರ್ಜಿದಾರರ ವಾದವೇನು?
ಅರ್ಜಿದಾರ ಪರ ವಕೀಲರು, ನಾಗರಿಕ ಸೇವೆಯಲ್ಲಿರುವ ಐಪಿಎಸ್ ಮತ್ತು ಐಎಎಸ್ ಅಧಿಕಾರಿಗಳು ದಕ್ಷತೆ ಹಾಗೂ ನಿರ್ಭೀತಿಯಿಂದ ಕರ್ತವ್ಯ ನಿರ್ವಹಿಸಬೇಕು. ಪದೇ ಪದೇ ವರ್ಗಾವಣೆ ಮಾಡುವುದರಿಂದ ಅವರ ಕಾರ್ಯಕ್ಷಮತೆಗೆ ಧಕ್ಕೆಯಾಗುತ್ತದೆ. ವರ್ಗಾವಣೆಗೆ ಕನಿಷ್ಠ ಅವಧಿ ನಿಗದಿ ಮಾಡದ ಕಾರಣ ರಾಜಕಾರಣಿಗಳು ಅಧಿಕಾರಿಗಳನ್ನು ಮನ ಬಂದಂತೆ ವರ್ಗಾವಣೆ ಮಾಡುತ್ತಿರುವುದು ಸರ್ವೇಸಾಮಾನ್ಯವಾಗಿದ್ದು, ಅವರನ್ನು ಅವಧಿಗೆ ಮುನ್ನ ಇದ್ದಕ್ಕಿದ್ದಂತೆ ವರ್ಗಾವಣೆ ಮಾಡಲಾಗುತ್ತಿದ್ದು, ಇದರಲ್ಲಿ ವ್ಯಾಪಕ ಭ್ರಷ್ಟಾಚಾರವೂ ನಡೆಯುತ್ತಿದೆ ಎಂದರು.
ಅಲ್ಲದೆ, ನಾಗರಿಕ ಸೇವೆಯಲ್ಲಿರುವ ಅಧಿಕಾರಿಗಳ ವರ್ಗಾವಣೆಗೆ ಕನಿಷ್ಠ ಸೇವಾವಧಿ ನೀತಿ ರೂಪಿಸಿ ಸುಪ್ರೀಂಕೋರ್ಟ್ ತೀರ್ಪು ಜಾರಿಗೆ ತರಬೇಕು. ಅದಕ್ಕಾಗಿ ಸಿಎಸ್ಬಿ ರಚಿಸಬೇಕು ಎಂದು ಸುಪ್ರೀಂಕೋರ್ಟ್ 2013ರ ಅ.30ರಂದು ಎಲ್ಲ ರಾಜ್ಯ ಸರ್ಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶಿಸಿತ್ತು. ಆದರೆ ಸರ್ಕಾರ ಆ ಬಗ್ಗೆ ತಲೆಕಡಿಸಿಕೊಂಡಿಲ್ಲ ಎಂದು ಹೇಳಿದರು.
ಆದೇಶ ಪಾಲಿಸದ ಸರ್ಕಾರ:
ಸುಪ್ರೀಂಕೋರ್ಟ್ ಆದೇಶದ ನಂತರ, ಐಎಎಸ್ ಅಧಿಕಾರಿಗಳಾದ ರೋಹಿಣಿ ಸಿಂಧೂರಿ ಮತ್ತು ಶರತ್ ನಡುವಿನ ವರ್ಗಾವಣೆ ವ್ಯಾಜ್ಯ ಸಂಬಂಧ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್, ಎರಡು ತಿಂಗಳಲ್ಲಿ ಸಿಎಸ್ಬಿ ರಚನೆ ಮಾಡುವಂತೆ ಸರ್ಕಾರಕ್ಕೆ 2021ರ ಜು.8ರಂದು ಆದೇಶಿಸಿತ್ತು. ಆದರೆ, ಈ ಆದೇಶಗಳನ್ನು ಸರ್ಕಾರ ಈವರೆಗೂ ಪಾಲನೆ ಮಾಡಿಲ್ಲ. ಆದ್ದರಿಂದ, ನಾಗರಿಕ ಸೇವೆಯಲ್ಲಿರುವ ಅಧಿಕಾರಿಗಳ ವರ್ಗಾವಣೆಗೆ ಕನಿಷ್ಠ ಅವಧಿ ನಿಗದಿಪಡಿಸಲು ನೀತಿ ರೂಪಿಸಲು ಹಾಗೂ ಸಿಎಸ್ಬಿ ರಚಿಸಲು ರಾಜ್ಯ ಸರ್ಕಾರಕ್ಕೆ ಅಗತ್ಯ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.












Click it and Unblock the Notifications