ವೈದ್ಯರಿಗೆ ಖಡಕ್ ಎಚ್ಚರಿಕೆ ನೀಡಿದ ಸಚಿವ ಖಾದರ್
ಬೆಂಗಳೂರು, ಅ.28 : ಸರ್ಕಾರ ಮತ್ತು ವೈದ್ಯರ ನಡುವಿನ ಜಟಾಪಟಿ ಮುಂದುವರೆದಿದ್ದು ರಾಜ್ಯದಲ್ಲಿ 911 ವೈದ್ಯರು ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆ ಸಲ್ಲಿಸಿರುವ ವೈದ್ಯರು ಮಂಗಳವಾರ ಬೆಳಗ್ಗೆ ಸೇವೆಗೆ ಹಾಜರಾಗಬೇಕು. ಇಲ್ಲದಿದ್ದರೆ ನೋಟಿಸ್ ಜಾರಿ ಮಾಡಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಯುಟಿ ಖಾದರ್ ಎಚ್ಚರಿಕೆ ನೀಡಿದ್ದಾರೆ.
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರಕ್ಕೆ ನೀಡಿದ್ದ ಗಡುವು ಮುಗಿದ ಹಿನ್ನೆಲೆಯಲ್ಲಿ ಸರ್ಕಾರಿ ವೈದ್ಯರು ಸೋಮವಾರ ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಒಂದು ತಿಂಗಳಲ್ಲಿ ಬೇಡಿಕೆ ಈಡೇರಿಸದಿದ್ದರೆ ರಾಜೀನಾಮೆ ಅಂಗೀಕರಿಸಿ ಸೇವೆಯಿಂದ ಮುಕ್ತಗೊಳಿಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ. [ರಾಜೀನಾಮೆ ನೀಡಿದ ವೈದ್ಯರು ಹೇಳಿದ್ದೇನು?]

ಸಾಮೂಹಿಕ ರಾಜೀನಾಮೆ ಸಲ್ಲಿಸಲು ಹಲವು ಜಿಲ್ಲೆಗಳಿಂದ ವೈದ್ಯರು ಬೆಂಗಳೂರಿಗೆ ಆಗಮಿಸಿದ್ದರು. ಬೆಂಗಳೂರಿಗೆ ಹಲವು ವೈದ್ಯರು ಆಗಮಿಸಿದ್ದರಿಂದ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಉಂಟಾಗಿ ರೋಗಿಗಳು ಪರದಾಡಿದರು. [ವೈದ್ಯರ ಸಮಸ್ಯೆಗಳಿಗೆ ರಾಜೀನಾಮೆ ಪರಿಹಾರವಲ್ಲ]
ಸಚಿವರ ಎಚ್ಚರಿಕೆ : ಮಂಗಳವಾರ ಬೆಳಗ್ಗೆ ವೈದ್ಯರು ಸೇವೆಗೆ ಹಾಜರಾಗಬೇಕು ಎಂದು ಆರೋಗ್ಯ ಸಚಿವ ಯುಟಿ ಖಾದರ್ ಎಚ್ಚರಿಕೆ ನೀಡಿದ್ದಾರೆ. ಹಲವು ಬೇಡಿಕೆ ಈಡೇರಿಸಲು ಕ್ರಮ ಕೈಗೊಂಡಿದ್ದರೂ ಒತ್ತಡ ಹೇರಿ ಸರ್ಕಾರವನ್ನು ಬ್ಲ್ಯಾಕ್ಮೇಲ್ ಮಾಡಲಾಡುತ್ತಿದೆ ಎಂದು ಸಚಿವರು ಆರೋಪಿಸಿದ್ದಾರೆ.
ಇಂದು ಸಭೆ : ರಾಜೀನಾಮೆ ಸಲ್ಲಿಸಿರುವ ವೈದ್ಯರ ಜೊತೆ ಇಂದು ಸಿಎಂ ಸಿದ್ದರಾಮಯ್ಯ ಮತ್ತು ಆರೋಗ್ಯ ಸಚಿವ ಯುಟಿ ಖಾದರ್ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಸರ್ಕಾರ ಬೇಡಿಕೆಗಳ ಈಡೇರಿಕೆಗೆ ಒಪ್ಪಿಗೆ ನೀಡಿದರೆ. ವೈದ್ಯರು ರಾಜೀನಾಮೆ ವಾಪಸ್ ಪಡೆದು ಕೆಲಸಕ್ಕೆ ಹಾಜರಾಗುವ ಸಾಧ್ಯತೆ ಇದೆ.
ವೈದ್ಯರ ಬೇಡಿಕೆಗಳು
* ಜಿಲ್ಲಾ ಆಸ್ಪತ್ರೆಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲೇ ಉಳಿಸುವುದು
* ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಆಸ್ಪತ್ರೆ ವೈದ್ಯರಿಗೆ ಇಲಾಖೆ ವತಿಯಿಂದ ನೇರವಾಗಿ ವೇತನ ನೀಡುವುದು
* ಖಾಲಿ ಹುದ್ದೆಗಳಿಗೆ ತಕ್ಷಣ ನೇಮಕ ಮಾಡುವುದು












Click it and Unblock the Notifications