ಚಾಮರಾಜನಗರದಲ್ಲಿ ಹಳೆ ನಾಯಕರ ಮುಖಾಮುಖಿ!
ಚಾಮರಾಜನಗರ, ಮಾ. 20 : ಗಡಿನಾಡು ಚಾಮರಾಜನಗರದಲ್ಲಿಯೂ ಚುನಾವಣೆ ಕಾವು ನಿಧಾನವಾಗಿ ಏರುತ್ತಿದೆ. ಕ್ಷೇತ್ರದಿಂದ ಎರಡನೇ ಬಾರಿಗೆ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಸಂಸದ ಆರ್. ಧ್ರುವನಾರಾಯಣ ಮಾ. 22 ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ಸಹ ಅಭ್ಯರ್ಥಿಯನ್ನು ಘೋಷಿಸಿದ್ದು, ಕಳೆದ ಚುನಾವಣೆಯಲ್ಲಿ ಸ್ಪರ್ಧಿಸಿದ ಮೂವರು ಈ ಬಾರಿ ಮತ್ತೆ ಮುಖಾಮುಖಿಯಾಗಿದ್ದಾರೆ.
ಮಾ.22ರಂದು ಕಾಂಗ್ರೆಸ್ ಅಭ್ಯರ್ಥಿ ಧ್ರುವನಾರಾಯಣ ನಾಮಪತ್ರ ಸಲ್ಲಿಸಲಿದ್ದು, ಕಂದಾಯ ಸಚಿವ ವಿ. ಶ್ರೀನಿವಾಸ ಪ್ರಸಾದ್, ಲೋಕೋಪಯೋಗಿ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಎಸ್. ಮಹದೇವಪ್ರಸಾದ್ ಮುಂತಾದವರು ಉಪಸ್ಥಿತರಿರುವರು.
ಮಾ. 22ರ ಶನಿವಾರ ಬೆಳಗ್ಗೆ ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಧ್ರುವನಾರಾಯಣ ವಿಶೇಷ ಪೂಜೆ ಸಲ್ಲಿಸಲಿದ್ದು ನಂತರ, ಆದಿಶಕ್ತಿ, ಕೊಳದ ಗಣಪತಿ ಮತ್ತು ಚಾಮರಾಜೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಕಾಂಗ್ರೆಸ್ ಕಚೇರಿಗೆ ಆಗಮಿಸಲಿದ್ದಾರೆ. ಅಲ್ಲಿಂದ ಮೆರವಣಿಗೆ ಮೂಲಕ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ.
ಜಿಲ್ಲೆಯ ಚುನಾವಣಾ ಕಣದ ಕುರಿತು ಸ್ಪಷ್ಟ ಚಿತ್ರಣ ಲಭ್ಯವಾಗಿದ್ದು ಕಾಂಗ್ರೆಸ್ ಹಾಲಿ ಸಂಸದ ಧ್ರುವನಾರಾಯಣ ಅವರಿಗೆ ಟಿಕೆಟ್ ನೀಡಿದೆ. ಕಳೆದ ಬಾರಿ ಕೆಲವು ಮತಗಳ ಅಂತರದಿಂದ ಸೋಲುಂಡಿದ್ದ ಎ.ಆರ್.ಕೃಷ್ಣಮೂರ್ತಿ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಜೆಡಿಎಸ್ ಸಹ ಕಳೆದ ಬಾರಿ ಸೋಲು ಅನುಭವಿಸಿದ್ದ ಕೋಟೆ ಶಿವಣ್ಣ ಅವರಿಗೆ ಟಿಕೆಟ್ ನೀಡಿದೆ. ಆದ್ದರಿಂದ ಹಳೆಯ ವೈರಿಗಗಳು ಮತ್ತೊಮ್ಮೆ ಸ್ಪರ್ಧೆಗೆ ಸಜ್ಜಾಗಿದ್ದಾರೆ.
ಭರ್ಜರಿ ಪ್ರಚಾರ ಆರಂಭಿಸಿರುವ ಧ್ರುವನಾರಾಯಣ ಅವರು, ನರೇಂದ್ರ ಮೋದಿ ಅಲೆ ನಮಗೆ ಲೆಕ್ಕಕ್ಕೆ ಇಲ್ಲ. ಮೋದಿ ಮೊದಲು ಗುಜರಾತ್ ರಾಜ್ಯವನ್ನು ಅಭಿವೃದ್ಧಿ ಮಾಡಲಿ. ನಾವು ಎಲ್ಲೋ ಇರುವ ಮೋದಿ ಅಲೆಯನ್ನು ನಂಬಿಲ್ಲ. ಆದ್ದರಿಂದ ನಮಗೆ ಎದುರಾಳಿಗಳ ಬಗ್ಗೆ ಯಾವುದೇ ಭಯವಿಲ್ಲ ಎಂದು ಹೇಳಿದ್ದಾರೆ.
ಹಿನ್ನೋಟ : 2009ರಲ್ಲಿ ಮೊದಲ ಬಾರಿಗೆ ಲೋಸಕಭೆ ಚುನಾವಣೆಗೆ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಧ್ರುವನಾರಾಯಣ ಅವರು, 369,970 ಮತಗಳನ್ನು ಪಡೆದು ಸಂಸತ್ ಪ್ರವೇಶಿಸಿದ್ದರು. ಬಿಜೆಪಿ ಅಭ್ಯರ್ಥಿ ಕೃಷ್ಣಮೂರ್ತಿ 365,968 ಮತಗಳನ್ನು ಪಡೆದು ಸೋಲುಂಡಿದ್ದರು. ಜೆಡಿಎಸ್ ಅಭ್ಯರ್ಥಿ ಕೋಟೆ ಶಿವಣ್ಣ 106,876 ಮತಗಳನ್ನು ಪಡೆದು ಮೂರನೇ ಸ್ಥಾನಕ್ಕೆ ಕುಸಿದಿದ್ದರು. [ಮಾಹಿತಿ : ಇಂಡಿಯಾ ವೋಟ್ಸ್.ಕಾಮ್]