ಜೆಡಿಎಸ್ ಅಭ್ಯರ್ಥಿ ನಾನೇ ಎಂದು ಘೋಷಿಸಿಕೊಂಡ ಮಾಜಿ ಸಚಿವ!
ಹಾಸನ,ಮಾರ್ಚ್7: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು ಚುನಾವಣಾ ಕಣ ರಂಗೇರುತ್ತಿದೆ. ಈಗಾಗಲೇ ಅರಕಲಗೂಡು ಹಾಲಿ ಶಾಸಕ ಎ.ಟಿ ರಾಮಸ್ವಾಮಿ ಕಾಂಗ್ರೆಸ್ ಸೇರ್ಪಡೆಗೆ ನಿರ್ಧರಿಸಿದ್ದು, ಮಾಜಿ ಸಚಿವ ಎ ಮಂಜು ಜೆಡಿಎಸ್ ಅಭ್ಯರ್ಥಿಯಾಗಿ ಅರಕಲಗೂಡು ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುತ್ತಾರೆ ಎಂಬ ಚರ್ಚೆ ಜೋರಾಗಿತ್ತು.
ಇನ್ನೂ ಜೆಡಿಎಸ್ ಪಕ್ಷದಲ್ಲಿ ಈಗಾಗಲೇ ನಾನೇ ಅಭ್ಯರ್ಥಿ ಎಂದು ಭವಾನಿ ರೇವಣ್ಣ ಹೇಳುವ ಮೂಲಕ ದೇವೇಗೌಡರ ಕುಟುಂಬದಲ್ಲಿ ಹೆಚ್ಚು ಚರ್ಚೆಯಾಗಿತ್ತು, ಇದರ ಬೆನ್ನಲ್ಲೇ ಮಾಜಿ ಸಚಿವ ಎ ಮಂಜು ನಾನು ಜೆಡಿಎಸ್ ಅಭ್ಯರ್ಥಿ ಎಂದು ಘೋಷಿಸಿಕೊಂಡಿದ್ದಾರೆ.

ಮಂಗಳವಾರ ಅರಕಲಗೂಡು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಾನೇ ಎಂದು ಮಾಜಿ ಸಚಿವ ಎ. ಮಂಜು ಅಧಿಕೃತವಾಗಿ ಘೋಷಣೆ ಮಾಡಿಕೊಂಡಿದ್ದಾರೆ. ಅರಕಲಗೂಡು ತಾಲೂಕಿನಲ್ಲಿ ತಮ್ಮ ಬೆಂಬಲಿಗರು ಹಾಗೂ ಕಾರ್ಯಕರ್ತರ ಜೊತೆ ಸಭೆಯಲ್ಲಿ ಎಲ್ಲರೊಂದಿಗೆ ಚರ್ಚಿಸಿದ ಎ.ಮಂಜು, ಎಲ್ಲರ ಸಮ್ಮುಖದಲ್ಲಿ ನಾನು ಜೆಡಿಎಸ್ನಿಂದ ಸ್ಪರ್ಧಿಸುತ್ತೇನೆ ಎಂದು ಹೇಳಿದರು. ಅಲ್ಲದೇ ಸಭೆಯಲ್ಲಿದ್ದ ಕಾರ್ಯಕರ್ತರು ಹಾಗೂ ಬೆಂಬಲಿಗರೊಂದಿಗೆ ಆಣೆ ಪ್ರಮಾಣ ಮಾಡಿಸಿದರು.
ಜೆಡಿಎಸ್ ಪಕ್ಷಕ್ಕೆ ಸೇರಿ ಎಂ ಮಂಜು ಗೆಲ್ಲಸುವ ಜವಾಬ್ದಾರಿ ನಿಮ್ಮದು. ನಾವು ಇನ್ಮುಂದೆ ಜೆಡಿಎಸ್ ಎಂದು ಹೇಳಿದ್ದಾರೆ. ಅಲ್ಲದೆ ಬೆಂಬಲಿಗರಿಂದ ಹೆಚ್.ಡಿ ದೇವೇಗೌಡರು, ಹೆಚ್.ಡಿ ಕುಮಾರಸ್ವಾಮಿ ಪರ ಘೋಷಣೆ ಕೂಗಿಸಿದ್ದಾರೆ.

ಈಗಾಗಲೇ ಜೆಡಿಎಸ್ ವರಿಷ್ಠರಾದ ಹೆಚ್ ಡಿ ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಮಾಜಿ ಸಚಿವ ಎ. ಮಂಜು ಬೆಂಗಳೂರಿನಲ್ಲಿ ಭೇಟಿ ಮಾಡಿದ್ದಾರೆ. ಇನ್ನೂ ಕ್ಷೇತ್ರದಲ್ಲಿ ಜನರ ಒಲವು, ತಯಾರಿ ಕುರಿತಂತೆ ದೇವೇಗೌಡರ ಜೊತೆಗೆ ಚರ್ಚಿಸಿದ್ದಾರೆ. ಮಾರ್ಚ್ 12 ರಂದು ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷ ಸೇರಲಿದ್ದಾರೆ ಎಂದು ಹೇಳಲಾಗಿದೆ.












Click it and Unblock the Notifications