ಬಿಜೆಪಿ ಬಿಟ್ಟು ದೇವೇಗೌಡ ಸಮ್ಮುಖದಲ್ಲಿ ಜೆಡಿಎಸ್ ಸೇರಿದ ಮಾಜಿ ಸಚಿವ!
ಮಾಜಿ ಸಚಿವ ಅರಕಲಗೂಡು ಮಂಜು (ಎ. ಮಂಜು) ಬಿಜೆಪಿ ಬಿಟ್ಟು ಜೆಡಿಎಸ್ ಸೇರಿದರರು. ಈ ಹಿಂದೆ ಕಾಂಗ್ರೆಸ್ ಬಿಟ್ಟು ಅವರು ಬಿಜೆಪಿ ಸೇರಿದ್ದರು.
ಬೆಂಗಳೂರು, ಮಾರ್ಚ್ 12; ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಇರುವಾಗ ಪಕ್ಷಾಂತರ ಪರ್ವವೇ ನಡೆಯುತ್ತಿದೆ. ಮಾಜಿ ಸಚಿವ, ಬಿಜೆಪಿ ನಾಯಕ ಬಿಜೆಪಿ ಬಿಟ್ಟು ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ಸಮ್ಮುಖದಲ್ಲಿ ಪಕ್ಷ ಸೇರಿದ್ದಾರೆ. ರಾಜಕೀಯ ಜೀವನದಲ್ಲಿ ದೇವೇಗೌಡರ ಕುಟುಂಬವನ್ನು ವಿರೋಧಿಸಿಕೊಂಡೇ ಬಂದ ಮಾಜಿ ಸಚಿವ ಅರಕಲಗೂಡು ವಿಧಾನಸಭಾ ಕ್ಷೇತ್ರದಿಂದ ಈ ಬಾರಿಯ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿ.
ಬಿಡದಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ತೋಟದ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಅರಕಲಗೂಡು ಮಂಜು (ಎ. ಮಂಜು) ಬಿಜೆಪಿ ಬಿಟ್ಟು ಜೆಡಿಎಸ್ ಸೇರಿದರು. ಜೆಡಿಎಸ್ ರಾಜ್ಯಾಧ್ಯಕ್ಷ ಸಿ. ಎಂ. ಇಬ್ರಾಹಿಂ, ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಸೇರಿದಂತೆ ವಿವಿಧ ನಾಯಕರು ಈ ಸಂದರ್ಭದಲ್ಲಿಉಪಸ್ಥಿತರಿದ್ದರು. ಅರಕಲಗೂಡು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಎ. ಟಿ. ರಾಮಸ್ವಾಮಿ ಪಕ್ಷ ತೊರೆಯಲಿದ್ದಾರೆ.

ರಾಜಕೀಯ ಜೀವನದ ಆರಂಭದಿಂದಲೇ ಹಾಸನ ಜಿಲ್ಲೆಯಲ್ಲಿ ಎಚ್. ಡಿ. ದೇವೇಗೌಡರ ಕುಟುಂಬವನ್ನು ವಿರೋಧಿಸಿಕೊಂಡು ಬಂದ ಎ. ಮಂಜು ಈಗ ಜೆಡಿಎಸ್ ಅಭ್ಯರ್ಥಿ. ಹಾಸನದಲ್ಲಿ ಎಚ್. ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಪಂಚರತ್ನ ರಥಯಾತ್ರೆಗೆ ದಿನಾಂಕ ನಿಗದಿಯಾಗಿದೆ. ಮಾರ್ಚ್ 16ರಂದು ಅರಕಲಗೂಡು ವಿಧಾನಸಭಾ ಕ್ಷೇತ್ರದಲ್ಲಿ ಯಾತ್ರೆ ನಡೆಯಲಿದೆ. ಈ ರಥಯಾತ್ರೆಯ ಮೂಲಕವೇ ಕ್ಷೇತ್ರದಲ್ಲಿ ಜೆಡಿಎಸ್ನ ಚುನಾವಣಾ ಪ್ರಚಾರ ಆರಂಭವಾಗಲಿದೆ.
ಜೆಡಿಎಸ್ ಸೇರ್ಪಡೆ ಕುರಿತು ಎ. ಮಂಜು ಪೋಸ್ಟ್ ಹಾಕಿದ್ದು, ಅರಕಲಗೂಡು ವಿಧಾನಸಭಾ ಕ್ಷೇತ್ರದ ನನ್ನ ಮತದಾರ ಬಂಧುಗಳು, ಕಾರ್ಯಕರ್ತರುಗಳ ಅಭಿಪ್ರಾಯದಂತೆ ಈ ದಿನ ಭಾರತ ದೇಶದ ಮಾಜಿ ಪ್ರಧಾನ ಮಂತ್ರಿಗಳು, ಹಾಲಿ ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಆದ ಶ್ರೀಯುತ ದೇವೇಗೌಡರು, ಪಕ್ಷದ ರಾಜ್ಯಾಧ್ಯಕ್ಷರಾದ ಶ್ರೀ ಸಿ. ಎಂ. ಇಬ್ರಾಹಿಂರವರು, ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಶ್ರೀಯುತ ಹೆಚ್. ಡಿ. ಕುಮಾರಸ್ವಾಮಿಯವರು, ಮಾಜಿ ಸಚಿವರಾದ ಶ್ರೀಯುತ ಹೆಚ್. ಡಿ. ರೇವಣ್ಣನವರು, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ಶ್ರೀಯುತ ನಿಖಿಲ್ ಕುಮಾರ್ ರವರ ಸಮ್ಮುಖದಲ್ಲಿ ಇಂದು ಅಧಿಕೃತವಾಗಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡಿರುತ್ತೇನೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ನಿಂದ ಬಿಜೆಪಿಗೆ; ಅರಕಲಗೂಡು ಮಂಜು ಕಾಂಗ್ರೆಸ್ ಪಕ್ಷದಲ್ಲಿದ್ದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತರಾಗಿದ್ದರು 2013ರ ವಿಧಾನಸಭೆ ಚುನಾವಣೆಯಲ್ಲಿ ಅರಕಲಗೂಡು ಕ್ಷೇತ್ರದಲ್ಲಿ ಜೆಡಿಎಸ್ನ ಎ. ಟಿ. ರಾಮಸ್ವಾಮಿ ಸೋಲಿಸಿ ಶಾಸಕರಾಗಿ ಆಯ್ಕೆಯಾಗಿದ್ದರು. ಸಿದ್ದರಾಮಯ್ಯ ಸಂಪುಟದಲ್ಲಿ ಪಶುಸಂಗೋಪನಾ ಖಾತೆ ಸಚಿವರು ಆಗಿದ್ದರು. ಆದರೆ 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸೇರಿದ್ದರು.

2019ರ ಲೋಕಸಭೆ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. 535,282 ಮತಗಳನ್ನು ಪಡೆದು ಜೆಡಿಎಸ್ನ ಪ್ರಜ್ವಲ್ ರೇವಣ್ಣ ವಿರುದ್ಧ ಸೋಲು ಕಂಡಿದ್ದರು. ಪ್ರಜ್ವಲ್ ರೇವಣ್ಣ ಚುನಾವಣೆ ವೇಳೆ ಸುಳ್ಳು ಆಸ್ತಿ ಪ್ರಯಾಣ ಪತ್ರ ಸಲ್ಲಿಕೆ ಮಾಡಿದ್ದಾರೆ ಎಂದು ಎ. ಮಂಜು ಕಾನೂನು ಹೋರಾಟ ಸಹ ಆರಂಭಿಸಿದ್ದರು. ಚುನಾವಣೆಯಲ್ಲಿ ಸೋತ ಬಳಿಕ ಬಿಜೆಪಿ ಚಟುವಟಿಕೆಯಿಂದ ದೂರವಾಗಿದ್ದರು. ಹಾಸನದ ಶಾಸಕ ಪ್ರೀತಂ ಗೌಡ ಜೊತೆಗಿನ ಜಟಾಪಟಿ ಕಾರಣದಿಂದ ಸುದ್ದಿಯಾಗಿದ್ದರು. ಎ. ಮಂಜು ಕಾಂಗ್ರೆಸ್ಗೆ ವಾಪಸ್ ಆಗಲಿದ್ದಾರೆ ಎಂಬ ಸುದ್ದಿಗಳು ಹಬ್ಬಿತ್ತು.
ಅಭ್ಯರ್ಥಿ ಎಂದು ಘೋಷಣೆ; ಈ ಬಾರಿಯ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಈಗಾಗಲೇ 93 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಫೆಬ್ರವರಿ ತಿಂಗಳಿನಲ್ಲಿಯೇ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅರಕಲಗೂಡು ಕ್ಷೇತ್ರಕ್ಕೆ ಮಾಜಿ ಸಚಿವ ಎ. ಮಂಜು ಜೆಡಿಎಸ್ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದರು. ಟಿಕೆಟ್ ಘೋಷಣೆ ಮಾಡಿದ್ದಕ್ಕೆ ಸಂತಸ ವ್ಯಕ್ತಪಡಿಸಿದ್ದ ಎ. ಮಂಜು, "ಕ್ಷೇತ್ರದಲ್ಲಿ ಪಕ್ಷವನ್ನು ಬಲಪಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಈ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರೊಂದಿಗೆ ಅರಕಲಗೂಡು ಕ್ಷೇತ್ರದ ರಾಜಕೀಯ ಸನ್ನಿವೇಶದ ಕುರಿತು ಚರ್ಚಿಸಿದ್ದೇನೆ" ಎಂದು ಹೇಳಿದ್ದರು.
ಮಾಧ್ಯಮಗಳ ಜೊತೆ ಮಾತನಾಡಿದ್ದ ಎ. ಮಂಜು, "ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ, ಮಾಜಿ ಸಚಿವ ಎಚ್. ಡಿ. ರೇವಣ್ಣ ಸೇರಿದಂತೆ ಜೆಡಿಎಸ್ ಮುಖಂಡರು ಪಕ್ಷಕ್ಕೆ ಬರುವಂತೆ ಒತ್ತಾಯಿಸಿದರು. 1994ರಲ್ಲಿ ಎಚ್. ಡಿ. ದೇವೇಗೌಡರು ಸಂಸತ್ತಿನ ಚುನಾವಣೆಯಲ್ಲಿ ಸ್ಪರ್ಧಿಸಿದಾಗ ಅವರಿಗೆ ಸಹಾಯ ಮಾಡಿದ್ದೇನೆ" ಎಂದು ಹೇಳಿದ್ದರು. ಎ. ಮಂಜು ಟಿಕೆಟ್ ಆಕಾಂಕ್ಷಿಯಾಗಿದ್ದರೂ ಸಹ ಕಾಂಗ್ರೆಸ್ ಸರಿಯಾದ ಸಮಯಕ್ಕೆ ಅವರನ್ನು ಪಕ್ಷಕ್ಕೆ ವಾಪಸ್ ಕರೆಸಿಕೊಳ್ಳುವಲ್ಲಿ ವಿಫಲವಾಗಿದೆ.












Click it and Unblock the Notifications